HomeSportಕಾಲ್ತುಳಿತ ದುರಂತ, 11 ಆರ್‌ಸಿಬಿ ಅಭಿಮಾನಿಗಳ ಸಾವು - 'ಮಾತೇ ಬರುತ್ತಿಲ್ಲ' ಎಂದ ಕೊಹ್ಲಿ

ಕಾಲ್ತುಳಿತ ದುರಂತ, 11 ಆರ್‌ಸಿಬಿ ಅಭಿಮಾನಿಗಳ ಸಾವು – ‘ಮಾತೇ ಬರುತ್ತಿಲ್ಲ’ ಎಂದ ಕೊಹ್ಲಿ

ಐಪಿಎಲ್‌ ಇತಿಹಾಸದಲ್ಲಿ ಟ್ರೋಪಿ ವಂಚಿತ ತಂಡವಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ ಹದಿನೆಂಟನೇ ಆವೃತ್ತಿಯನ್ನು ಪಂಜಾಬ್‌ ವಿರುದ್ಧ ಗೆಲ್ಲುವ ಮೂಲಕ 18 ವರ್ಷದ ಕನಸು ನನಸಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ವಿಜಯೋತ್ಸವ ವೇಳೆ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಆರ್​ಸಿಬಿ ತಂಡ ಐಪಿಎಲ್ ಚಾಂಪಿಯನ್ ಆಗಿರುವುದರಿಂದ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡಿತ್ತು. ಈ ದುರಂತದಿಂದ ರಾಜ್ಯದಲ್ಲಿ ಸೂತಕದ ಛಾಯೆ ಆವರಿಸಿದೆ. ಘಟನೆಗೆ ದೇಶಾದ್ಯಂತ ಸಂತಾಪ ವ್ಯಕ್ತವಾಗಿದೆ.

ಕಾಲ್ತುಳಿತ ದುರಂತದ ಬಗ್ಗೆ ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದು, “ಮಾತೇ ಬರುತ್ತಿಲ್ಲ, ಈ ಘಟನೆ ಕರುಳು ಹಿಂಡುತ್ತಿದೆ” ಅಂತ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.

ಘಟನೆಯ ಕುರಿತು ಆರ್‌ಸಿಬಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ‘ಇಂದು (ಬುಧವಾರ) ಮಧ್ಯಾಹ್ನ ಆರ್‌ಸಿಬಿ ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಾದ್ಯಂತ ಸಾರ್ವಜನಿಕ ಸಭೆಗಳ ಕುರಿತು ಮಾಧ್ಯಮ ವರದಿಗಳ ಮೂಲಕ ಬೆಳಕಿಗೆ ಬಂದಿರುವ ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ. ದುರಂತದಲ್ಲಾದ ಜೀವಹಾನಿಗೆ ಆರ್‌ಸಿಬಿ ಶೋಕ ವ್ಯಕ್ತಪಡಿಸುತ್ತದೆ. ಸಂತ್ರಸ್ತ ಕುಟುಂಬಗಳಿಗೆ ನಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತದೆ” ಎಂದು ಹೇಳಿದೆ.

ಮೃತರ ಕುಟುಂಬಗಳಿಗೆ 15 ಲಕ್ಷ ಪರಿಹಾರ

ಮೃತರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಖುದ್ದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ ಅಂತಲೂ ಮಾಹಿತಿ ನೀಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಉಂಟಾದ ನೂಕು ನುಗ್ಗಲಿನಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಆರ್‌ಸಿಬಿ- ಕೆಎಸ್‌ಸಿಎ ಬುಧವಾರ ರಾತ್ರಿ ಪ್ರಕಟಿಸಿದೆ.

ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶ

ಆರ್​ಸಿಬಿ ತಂಡ ಐಪಿಎಲ್ ಹದಿನೆಂಟನೇ ಆವೃತ್ತಿಯಲ್ಲಿ ಚಾಂಪಿಯನ್ ಆದ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ವಿಜಯೋತ್ಸವ ಕಾರ್ಯಕ್ರಮ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ದುರಂತದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದೆ.

ಮ್ಯಾಜಿಸ್ಟೀರಿಯಲ್‌ ವಿಚಾರಣೆ ನಡೆಸಲು ವಿಚಾರಣಾಧಿಕಾರಿಯನ್ನಾಗಿ ಜಗದೀಶ್ ಜಿ, ಐಎಎಸ್, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್‌ಗಳ ಬಳಿ ಉಂಟಾದ ಕಾಲ್ತುಳಿತ ಹಾಗೂ ಮೃತಪಟ್ಟವರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ ಮತ್ತು ಈ ಪ್ರಕರಣದಲ್ಲಿ ಲೋಪ ಉಂಟಾಗಿದ್ದಲ್ಲಿ ಉಂಟಾಗಿರಬಹುದಾದ ಲೋಪಗಳ ಕುರಿತು. ಈ ಲೋಪಕ್ಕೆ ಕಾರಣರಾದವರ ಬಗ್ಗೆ ಹಾಗೂ ನಿರ್ಲಕ್ಷ್ಯತೆಯಿಂದ ಉಂಟಾಗಿದೆಯೇ ಎಂಬ ಬಗ್ಗೆ ಸಮಗ್ರವಾಗಿ ಮ್ಯಾಜಿಸ್ಟೀರಿಯಲ್‌ ವಿಚಾರಣೆ ನಡೆಯಲಿದೆ.

ವಿಚಾರಣಾಧಿಕಾರಿಯವರು ಈ ಆದೇಶ ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಮ್ಯಾಜಿಸ್ಪೀರೀಯಲ್‌ ವಿಚಾರಣೆಯನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲು ಆದೇಶಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments