ಕೆಂಪು ಮೆಣಸಿನಕಾಯಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗಾಗಿ ಕರ್ನಾಟಕಕ್ಕೂ ಬೆಂಬಲ ಬೆಲೆ (MIS) ಯೋಜನೆ ವಿಸ್ತರಿಸುವಂತೆ ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಗಮನ ಸೆಳೆದಿದರು.
ದೆಹಲಿಯಲ್ಲಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿ, ರಾಜ್ಯದ ಕೆಂಪು ಮೆಣಸಿನಕಾಯಿ ಹಿತ ರಕ್ಷಣೆ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಿದರು.
“ರಾಜ್ಯದಲ್ಲಿ ಕೆಂಪು ಮೆಣಸಿನಕಾಯಿ ಬೆಳೆಗಾರರು ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಕುಸಿತದಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಖರೀದಿದಾರರು ಕೇಳುವಂತಹ ಕನಿಷ್ಠ ಬೆಲೆಗೆ ಮಾರಿ ರೈತರು ಕೈ ಸುಟ್ಟುಕೊಳ್ಳುತ್ತಿದ್ದಾರೆ. ಹಾಗಾಗಿ ಇದಕ್ಕೆ ಪರಿಹಾರ ಮಾರ್ಗ ಕಲ್ಪಿಸಿ. ಕರ್ನಾಟಕದಲ್ಲಿ ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (MIS) ಅಡಿಯಲ್ಲಿ ಬೆಲೆ ಕೊರತೆ ಪಾವತಿ ಯೋಜನೆ ಅನುಷ್ಠಾನ ಅತ್ಯಗತ್ಯವಾಗಿದೆ” ಎಂದು ಕೃಷಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
“ಮಾರುಕಟ್ಟೆಯಲ್ಲಿನ ತೀವ್ರ ಬೆಲೆ ಕುಸಿತದಿಂದಾಗಿ ಕರ್ನಾಟಕದ ಅನೇಕ ಕೆಂಪು ಮೆಣಸಿನಕಾಯಿ ರೈತರು ಗಂಭೀರ ಸಮಸ್ಯೆ, ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ರೈತರು ತಮ್ಮ ಉತ್ಪನ್ನಗಳನ್ನು ಕನಿಷ್ಠ ಬೆಲೆಗೆ ಮಾರಾಟ ಮಾಡುತ್ತಿದ್ದು, ತೀವ್ರ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಕರ್ನಾಟಕದ ಸಾವಿರಾರು ಸಣ್ಣ ಮತ್ತು ಅತಿ ಸಣ್ಣ ರೈತರು ಕೆಂಪು ಮೆಣಸಿನಕಾಯಿ ಕೃಷಿಯನ್ನು ಅವಲಂಬೀಸಿದ್ದಾರೆ ಮತ್ತು ಕೆಂಪು ಮೆಣಸಿನಕಾಯಿ ಪ್ರಸ್ತುತ ಮಾರುಕಟ್ಟೆ ಬೆಲೆ ಕುಸಿತ ರೈತರನ್ನು ಚಿಂತೆಗೀಡು ಮಾಡಿದೆ. ಅನೇಕ ರೈತರನ್ನು ಸಾಲದ ಬಿಕ್ಕಟ್ಟಿಗೆ ಸಿಲುಕಿಸಿದೆ” ಎಂದು ವಿವರಿಸಿದರು.
“ಮನವಿಗೆ ಸ್ಪಂದಿಸಿದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರ ಸಂಕಷ್ಟ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದ್ದಾರೆ” ಎಂದು ಪ್ರಕಟಣೆಯಲ್ಲಿ ಜೋಶಿ ತಿಳಿಸಿದ್ದಾರೆ.