ಮಡಿಕೇರಿಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರೂ ಆಗಿರುವ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ತನ್ನೀರಾ ಮೈನಾ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬೆಂಗಳೂರು ನಗರದ ಪೂರ್ವ ವಿಭಾಗದ ಪೊಲೀಸರು ಆರಂಭಿಸಿದ್ದಾರೆ.
ಮೃತನ ಸಹೋದರ ಜೀವನ್ ಎಂಬವರು ನೀಡಿದ ದೂರಿನ ಮೇರೆಗೆ ಕಾಂಗ್ರೆಸ್ ಮುಖಂಡರಾದ ತೆನ್ನಿರಾ ಮಹಿನಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ (ಬಿಎನ್ಎಸ್) ಸೆಕ್ಷನ್ 108 – ಆತ್ಮಹತ್ಯೆಗೆ ಪ್ರಚೋದನೆ, ಸೆಕ್ಷನ್ 3(5) – ಅಪರಾಧಿಕ ಒಳಸಂಚು, BNS 351(2) – ಬೆದರಿಕೆ ಹಾಗೂ 352 – ಉದ್ದೇಶಪೂರ್ವಕ ಅವಮಾನ ಸೆಕ್ಷನ್ಗಳಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ವಿನಯ್ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿ ಹಾಗೂ ಒಂದು ಹೆಣ್ಣು ಮಗುವಿದೆ. ಸದಾ ಸಾಮಾಜಿಕ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದರು. ಇದಕ್ಕಾಗಿ ಕೊಡಗಿನ ಸಮಸ್ಯೆಗಳು ಹಾಗೂ ಪರಿಹಾರಗಳು ಎಂಬ ಹೆಸರಿನಲ್ಲಿ ವಾಟ್ಸ್ಆ್ಯಪ್ ಗ್ರೂಪ್ ರಚಿಸಲಾಗಿತ್ತು. ಈ ಗ್ರೂಪ್ಗೆ ವಿನಯ್ ಸಹ ಆಡ್ಮಿನ್ ಆಗಿದ್ದರು. ಕಳೆದ ಫೆಬ್ರವರಿಯಲ್ಲಿ ತೆನ್ನಿರಾ ಮಹಿನಾ ಎಂಬವರು ವಾಟ್ಸ್ಆ್ಯಪ್ ಗ್ರೂಪ್ ಅಡ್ಮಿನ್ ಆದ ತನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಹೈಕೋರ್ಟ್ನಲ್ಲಿ ಪ್ರಕರಣಕ್ಕೆ ತಡೆಯಾಜ್ಞೆ ತಂದಿರುವುದಾಗಿ ವಿನಯ್ ತನಗೆ ಕರೆ ಮಾಡಿ ಹೇಳಿದ್ದ ಎಂದು ಸಹೋದರ ಜೀವನ್ ತಿಳಿಸಿದ್ಧಾರೆ.
ನ್ಯಾಯಾಲಯದಿಂದ ತಡೆಯಾಜ್ಞೆ ತಂದರೂ ತೆನ್ನಿರಾ, ಪೊಲೀಸರ ಸಹಾಯದಿಂದ ಕುಟುಂಬಸ್ಥರು ಹಾಗೂ ಸ್ನೇಹಿತರ ಬಳಿ ವಿನಯ್ ಬಗ್ಗೆ ವಿಚಾರಿಸಿ ರೌಡಿಪಟ್ಟಿಯಲ್ಲಿ ಹಾಕುವುದಾಗಿ ಬೆದರಿಸಿದ್ದರು ಎಂದು ದೂರಿನಲ್ಲಿ ಜೀವನ್ ಉಲ್ಲೇಖಿಸಿದ್ಧಾರೆ.
“ಸಹೋದರನ ಸಾವಿಗೆ ಕಾಂಗ್ರೆಸ್ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಂತರ್ ಗೌಡ ಕಾರಣರಾಗಿದ್ದಾರೆ. ಹೀಗಿದ್ದರೂ ಎಫ್ಐಆರ್ನಲ್ಲಿ ಅವರ ಹೆಸರನ್ನು ಕೈಬಿಡಲಾಗಿದೆ. ಪೊಲೀಸರು ಒತ್ತಡದಿಂದ ಹೆಸರನ್ನು ಎಫ್ಐಆರ್ನಲ್ಲಿ ನಮೂದಿಸಿಲ್ಲ. ಹೀಗಾಗಿ ಅವರ ಹೆಸರನ್ನು ಎಫ್ಐಆರ್ನಲ್ಲಿ ದಾಖಲಿಸುವವರೆಗೂ ಸಹೋದರನ ಮೃತದೇಹವನ್ನು ಕೊಂಡೊಯ್ಯುವುದಿಲ್ಲ” ಎಂದು ಜೀವನ್ ಆಕ್ರೋಶ ಹೊರಹಾಕಿದ್ದಾರೆ.
“ತನ್ನೀರಾ ಮೈನಾಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಕರೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರಕರಣದ ಕುರಿತು ಪ್ರಾಥಮಿಕ ಮಾಹಿತಿ ಕಲೆ ಹಾಕಲಾಗಿದೆ. ವಿನಯ್ ಅವರ ಮೊಬೈಲ್, ಲ್ಯಾಪ್ಟಾಪ್ ಹಾಗೂ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ಬರಹವನ್ನು ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.
“ವಿನಯ್ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಯಾರ ಜತೆಗೆ ಮೊಬೈಲ್ನಲ್ಲಿ ಮಾತನಾಡಿದ್ದರು. ಅವರ ಮೊಬೈಲ್ನಲ್ಲಿ ಏನೆಲ್ಲಾ ದಾಖಲೆಗಳಿವೆ ಎಂಬುದನ್ನೂ ಪರಿಶೀಲನೆ ನಡೆಸಲಾಗುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.