ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಿಂದ ಬೈಕ್ ಟ್ಯಾಕ್ಸಿಗಳ ಮೇಲಿನ ನಿಷೇಧ ಜಾರಿಗೆ ಬಂದಿದ್ದು, ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಇಂದಿನಿಂದ ಬೈಕ್ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳ್ಳಲಿದೆ.
ಬೈಕ್ ಟ್ಯಾಕ್ಸಿ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು, ನಿಷೇಧದಿಂದ ಗಿಗ್ ಕಾರ್ಮಿಕರಿಗೆ ಸಮಸ್ಯೆಯಾಗಿಲಿದ್ದು, ಅವರ ಜೀವನೋಪಾಯ ರಕ್ಷಿಸಲು ಮಧ್ಯಪ್ರವೇಶಿಸುವಂತೆ ಒತ್ತಾಯಿಸಿದೆ.
ನಿಷೇಧದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಒಂದು ಲಕ್ಷಕ್ಕೂ ಹೆಚ್ಚು ಗಿಗ್ ಕಾರ್ಮಿಕರು ಸಂಪೂರ್ಣ ಜೀವನೋಪಾಯದ ಹಕ್ಕನ್ನು ಕಳೆದುಕೊಳ್ಳುತ್ತಾರೆ ಎಂದು ಸಂಘ ತಿಳಿಸಿದೆ.
ಬೈಕ್ ಟ್ಯಾಕ್ಸಿಗಳ ವಿರುದ್ಧ ಆಟೋ ಮತ್ತು ಕ್ಯಾಬ್ ಚಾಲಕರು ಆಕ್ರೋಶ ಹೊರಹಾಕಿದ್ದರು. ಬೈಕ್ ಟ್ಯಾಕ್ಸಿ ಸವಾರರ ಮೇಲೆ ಹಲ್ಲೆ ಸಹ ನಡೆದಿತ್ತು. ಆಟೋಗಳ ವ್ಯಾಪಾರ ಡಲ್ ಆಗಿತ್ತು. 2021ರಲ್ಲಿ ಆರಂಭವಾಗಿದ್ದ ಬೈಕ್ ಟ್ಯಾಕ್ಸಿಗೆ ಇದೀಗ ಹೈಕೋರ್ಟ್ ಬ್ರೇಕ್ ಹಾಕಿದೆ. ಕಡಿಮೆ ದರದಲ್ಲಿ ಜನರನ್ನು ಸ್ಥಳ ತಲುಪಿಸುತ್ತಿದ್ದ ಬೈಕ್ ಸವಾರರ ಮೇಲೆ ಕೆಲ ಆರೋಪಗಳು ಕೂಡ ಕೇಳಿ ಬಂದಿದ್ದವು.
ಏಪ್ರಿಲ್ 2 ರಂದು ನ್ಯಾಯಾಲಯ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನ 6 ವಾರಗಳ ಒಳಗೆ ನಿಲ್ಲಿಸುವಂತೆ ಹೈಕೋರ್ಟ್ ಆದೇಶಿಸಿತ್ತು. ನ್ಯಾಯಾಲಯ ನೀಡಿದ್ದ 6 ವಾರಗಳ ಗಡುವು ಮೇ ತಿಂಗಳಲ್ಲಿ ಮುಕ್ತಾಯಗೊಳ್ಳಬೇಕಿತ್ತು. ರಾಪಿಡೋ, ಓಲಾ ಮತ್ತು ಉಬರ್ ಸೇರಿದಂತೆ ಬೈಕ್ ಟ್ಯಾಕ್ಸಿ ನಿರ್ವಾಹಕರು ಆದೇಶ ವಿಸ್ತರಣೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಕೊಟ್ಟ ಗಡುವು ಕೂಡ ಜೂನ್ 15ಕ್ಕೆ ಮುಗಿದಿದೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಕೂಡ ನಿರಾಕರಿಸಲಾಗಿದೆ. ಬೈಕ್ ಟ್ಯಾಕ್ಸಿಗಳಿಗೆ ಹೊಸ ನಿಯಮಗಳನ್ನು ರೂಪಿಸದ ಕಾರಣ ಮತ್ತೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಮುಂದಿನ ವಿಚಾರಣೆ ಜೂನ್ 24ಕ್ಕೆ ನಿಗದಿಪಡಿಸಲಾಗಿದೆ.