ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಇನ್ನು ಕೆಲವೇ ತಿಂಗಳುಗಳಲ್ಲಿ ಚಿಂಪಾಜಿ, ಬೇಟೆ ಚೀತಾ, ಜಾಗ್ವಾರ್ ಸೇರಿದಂತೆ 10 ವಿದೇಶೀ ವನ್ಯಜೀವಿಗಳ ಸೇರ್ಪಡೆ ಆಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಬನ್ನೇರು ಘಟ್ಟ ಜೈವಿಕ ಉದ್ಯಾನದಲ್ಲಿ ದೇಶದ ಪ್ರಥಮ ವಿದ್ಯುತ್ ಚಾಲಿತ ಸಫಾರಿ ಬಸ್ ನ ಪ್ರಾಯೋಗಿಕ ಸಂಚಾರಕ್ಕೆ ವಿಕಾಸಸೌಧದಿಂದ ವರ್ಚುವಲ್ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, “ಮುಂದಿನ 4-5 ತಿಂಗಳಲ್ಲಿ ಹಂಟಿಂಗ್ ಚೀತಾ, ಕ್ಯಾಪಚಿನ್ ಕೋತಿಯನ್ನು ದಕ್ಷಿಣ ಅಮೇರಿಕಾದಿಂದ ವಿನಿಮಯ ಮಾಡಿಕೊಳ್ಳಲಾಗುವುದು” ಎಂದರು.
“ಮುಂದಿನ ವರ್ಷ ಚಿಂಪಾಂಜಿ, ಜಾಗ್ವಾರ್, ಪೂಮಾ (ಉತ್ತರ ಅಮೇರಿಕಾ ಸಿಂಹ) ಸೇರಿದಂತೆ ಒಟ್ಟು 10 ವಿದೇಶಿ ವನ್ಯಜೀವಿಗಳು ಬನ್ನೇರುಘಟ್ಟಕ್ಕೆ ಆಗಮಿಸಲಿವೆ. ಬನ್ನೇರುಘಟ್ಟದಲ್ಲಿ ಸೀಮಿತ ಆವರಣ ಪ್ರದೇಶದೊಳಗೆ ರೂಪಿಸಿರುವ ವನ್ಯಜೀವಿ ಸಫಾರಿಯಲ್ಲಿ ಹುಲಿ, ಚಿರತೆ, ಸಿಂಹ, ಕರಡಿಗಳ ದರ್ಶನ ಪ್ರವಾಸಿಗರಿಗೆ ನಿಶ್ಚಿತವಾಗಿ ಆಗುತ್ತದೆ. ಈ ಸಫಾರಿಗಳಿಗೆ ಪ್ರಸ್ತುತ ಡೀಸೆಲ್ ವಾಹನಗಳನ್ನು ಬಳಸಲಾಗುತ್ತಿದ್ದು, ಈ ವಾಹನಗಳಿಂದ ಹೊರಹೊಮ್ಮುವ ಇಂಗಾಲದ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ದೇಶದಲ್ಲೇ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ವಾಹನ ಪರಿಚಯಿಸಲಾಗುತ್ತಿದೆ” ಎಂದರು.
“ಇಂದು ಚಾಲನೆ ನೀಡಿರುವ ವಿದ್ಯುತ್ ಚಾಲಿತ ಬಸ್, 22 ಆಸನಗಳನ್ನು ಹೊಂದಿದ್ದು, 100 ಕೆ.ವಿ. ಬ್ಯಾಟರಿ ಸಾಮರ್ಥ್ಯದ್ದಾಗಿದೆ. 2 ಗಂಟೆ ಚಾರ್ಜ್ ಮಾಡಿದರೆ 160 ಕಿ.ಮೀ. ಅಂದರೆ 8 ಟ್ರಿಪ್ ಸಂಚರಿಸಲಿದೆ. ಹಾಲಿ ಒಂದು ಬಸ್ ಮಾತ್ರವೇ ಕಾರ್ಯಾರಂಭ ಮಾಡಲಿದ್ದು, 2027ರೊಳಗೆ ಬನ್ನೇರುಘಟ್ಟ ಉದ್ಯಾನವನ್ನು (ಟ್ಯ್ರಾಕ್ಟರ್ ಇತ್ಯಾದಿ ಉಪಯೋಗಿ ವಾಹನ ಹೊರತು ಪಡಿಸಿ) ಪಳೆಯುಳಿಕೆ ಇಂಧನ ರಹಿತ ವಾಹನ ವಲಯವಾಗಿ ಪರಿವರ್ತಿಸಲಾಗುವುದು” ಎಂದು ಹೇಳಿದರು.
“ಬನ್ನೇರುಘಟ್ಟ ಮೃಗಾಲಯ ಮತ್ತು ಸಫಾರಿ ವೀಕ್ಷಣೆಗೆ ವಾರಾಂತ್ಯದಲ್ಲಿ ಮತ್ತು ಸರ್ಕಾರಿ ರಜಾ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವನ್ಯಜೀವಿ ಪ್ರಿಯರು ಮತ್ತು ಪ್ರವಾಸಿಗರು ಆಗಮಿಸುವ ಕಾರಣ, ಇಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಲಾಗಿದ್ದು, ಶೀಘ್ರವೇ ಟೆಂಡರ್ ಕರೆಯಲಾಗುವುದು” ಎಂದು ತಿಳಿಸಿದರು.
ದಾಖಲೆಯ ಪ್ರವಾಸಿಗರ ಆಗಮನ
“ಕಳೆದ ತಿಂಗಳು ಅಂದರೆ ಮೇ 2025ರಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಸುಮಾರು 2 ಲಕ್ಷ 85 ಸಾವಿರ ಪ್ರವಾಸಿಗರು ಆಗಮಿಸಿದ್ದು, ಇದು ದಾಖಲೆಯಾಗಿದೆ. ಚಿರತೆ ಸಫಾರಿ ಈಗ ಜನಾಕರ್ಷಣೆಯ ಕೇಂದ್ರ ಬಿಂದುವಾಗಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಮತ್ತೊಂದು ಆಕರ್ಷಣೆಯಾಗಿ ಬೃಹತ್ ಮತ್ಸ್ಯಾಗಾರ ನಿರ್ಮಿಸಲುದ್ದೇಶಿಸಲಾಗಿದೆ. ಇದಕ್ಕೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಟೆಂಡರ್ ಕರೆಯಲಾಗುವುದು” ಎಂದು ಹೇಳಿದರು.
ಜೀಬ್ರಾ ಸಾವಿನ ಬಗ್ಗೆ ತನಿಖೆಗೆ ಆದೇಶ
“ಇತ್ತೀಚೆಗೆ ಬನ್ನೇರುಘಟ್ಟ ಉದ್ಯಾನದಲ್ಲಿ ಜೀಬ್ರಾ ಮತ್ತು ನೀಲಗಾಯ್ ಸಾವಿಗೀಡಾಗಿರುವುದು ಅತ್ಯಂತ ನೋವಿನ ಸಂಗತಿ, ಈ ಬಗ್ಗೆ ತನಿಖೆ ಮಾಡಿ ವರದಿ ನೀಡಲು ಸಿಸಿಎಫ್ ಅವರಿಗೆ ತಿಳಿಸಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಇನ್ನು ಮುಂದೆ ಮೃಗಾಲಯದಲ್ಲಿ ಮತ್ತು ಜೈವಿಕ ವನದಲ್ಲಿ ಯಾವುದೇ ವನ್ಯಜೀವಿ ಅಸಹಜವಾಗಿ ಸಾವನ್ನಪ್ಪದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.
ಗುಲ್ಬರ್ಗದಲ್ಲಿ ಮೃಗಾಲಯ ನಿರ್ಮಾಣ
“ಕಲ್ಯಾಣ ಕರ್ನಾಟಕ ಭಾಗದಲ್ಲಿ ಗುಲ್ಬರ್ಗಾದಲ್ಲಿ ನೂತನವಾಗಿ ಮೃಗಾಲಯ ನಿರ್ಮಿಸಲಾಗುತ್ತಿದ್ದು, ಬರುವ ಡಿಸೆಂಬರ್ ಹೊತ್ತಿಗೆ ಸಿದ್ಧವಾಗಲಿದೆ” ಎಂದು ಈಶ್ವರ ಖಂಡ್ರೆ ತಿಳಿಸಿದರು.