ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ, ಐವರು ಪೊಲೀಸ್ ಅಧಿಕಾರಿಗಳನ್ನು ಹೊಣೆ ಮಾಡಿ ಅವರನ್ನು ಅಮಾನತು ಮಾಡಿತ್ತು. ಇದಕ್ಕೆ ಭಾರೀ ಟೀಕೆಗಳು, ಖಂಡನೆಗಳು ವ್ಯಕ್ತವಾಗಿದ್ದವು.
ಕಾಲ್ತುಳಿತ ದುರಂತಕ್ಕೆ ಪೊಲಿಸರೇ ನಿರ್ಲಕ್ಷ್ಯ ಕಾರಣ ಎಂದಿದ್ದ ರಾಜ್ಯ ಸರ್ಕಾರ ಇದೀಗ ದಿಢೀರ್ ಅಮಾನತು ಆದೇಶ ಹಿಂಪಡೆದುಕೊಂಡಿರುವುದು ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತಕ್ಕೆ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸರ್ಕಾರ
ಹೇಳಿತ್ತು. ಇದರಿಂದ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್, ಡಿಸಿಪಿ ಶೇಖರ್ ಹೆಚ್.ಟಿ., ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ASI ಬಾಲಕೃಷ್ಣ ಹಾಗೂ ಇನ್ಸ್ಪೆಕ್ಟರ್ ಗಿರೀಶ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದ್ರೆ, ಇದೀಗ ಏಕಾಏಕಿ ರಾಜ್ಯ ಸರ್ಕಾರ ಯುಟರ್ನ್ ಹೊಡೆದಿದ್ದು, ಪೊಲಿಸ್ ಅಧಿಕಾರಿಗಳ ಅಮಾನತು ಆದೇಶವನ್ನು ವಾಪಸ್ ಪಡೆದುಕೊಂಡಿದೆ.
ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ನಂತರ ಆರ್ಸಿಬಿ, ಡಿಎನ್ಎ ಹಾಗೂ ಕೆಎಸ್ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನಿಸಲಾಯಿಗಿತ್ತು. ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೂಡ ಕುನ್ಹಾ ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.
ವಿಕಾಶ್ ಕುಮಾರ್ ತಮ್ಮ ಅಮಾನತು ಪ್ರಶ್ನಿಸಿ ರಾಜ್ಯ ಸರ್ಕಾರದ ವಿರುದ್ಧ ಸಿಎಟಿ ಮೊರೆ ಹೋಗಿದ್ದರು. ಇದನ್ನ ವಿಚಾರಣೆ ನಡೆಸಿದ್ದ ಸಿಎಟಿ, ವಿಕಾಶ್ ಕುಮಾರ್ ಅಮಾನತು ಆದೇಶವನ್ನು ರದ್ದುಗೊಳಿಸಿತ್ತು.ಬಳಿಕ ಸಿಎಟಿ ಆದೇಶ ಪ್ರಶ್ನಿಸಿ ಮೇಲ್ಮವಿ ಸಲ್ಲಿಸುವುದಾಗಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು. ಆದ್ರೆ, ಇದೀಗ ಸರ್ಕಾರವೇ ಅಮಾನತು ಆದೇಶ ಹಿಂಪಡೆದುಕೊಂಡಿದೆ.