ಭೋವಿ ಅಭಿವೃದ್ಧಿ ನಿಗಮದೊಳಗೆ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಅವರು ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರ ಬರೆದಿರುವ ಅವರು, “ನನ್ನ ಅಧಿಕಾರಾವಧಿಯಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ನಿಗಮದ ಮೂಲಕ ಕಾರ್ಯಗತಗೊಳಿಸಿದ್ದೇನೆ. ನನ್ನ ಅವಧಿಯಲ್ಲಿ ನಿಗಮದಲ್ಲಿ ಯಾವುದೇ ಆಕ್ರಮಗಳು ನಡೆದಿರುವುದಿಲ್ಲ ಎಂಬುದನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿದೆ ಅಕ್ರಮಗಳ ಬಗ್ಗೆ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿರುವುದು ಸರಿಯಷ್ಟೆ ನಿಗಮದಲ್ಲಿ ಹಿಂದಿನಿಂದ ನಡೆದುಕೊಂಡು ಬರುತ್ತಿದ್ದ ಕೆಲವು ಅನುಚಿತ ವ್ಯವಹಾರ ಮತ್ತು ಅಶಿಸ್ತನ್ನು ನಾನು ಪತ್ತೆ ಹಚ್ಚಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಕ್ಕೇ ನನ್ನ ವಿರುದ್ಧ ಪಿತೂರಿ ನಡೆದು ನನ್ನ ತೇಜೋವಧೆ ಮಾಡುವ ಪ್ರಯತ್ನ ನಡೆದಿದೆ” ಎಂದು ತಿಳಿಸಿದ್ದಾರೆ.
“ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧದ ಅಗತ್ಯ ಕ್ರಮಕ್ಕೆ ತಮ್ಮಲ್ಲಿ ವಿನಂತಿಸುತ್ತೇನೆ. ಸೈಬರ್ ಪೊಲೀಸರು ಮತ್ತು ಎಫ್ಎಸ್ಎಲ್ ತಂಡದಿಂದ ತನಿಖೆ ನಡೆಸಿ ತಾಂತ್ರಿಕ ಸಲಕರಣೆಗಳನ್ನು ಬಳಸಿ ನನ್ನ ತೇಜೋವಧೆಗೆ ವೀಡಿಯೋ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತಮ್ಮಲ್ಲಿ ವಿನಂತಿಸುತ್ತೇನೆ” ಎಂದು ಆಗ್ರಹಿಸಿದ್ದಾರೆ.
“ನಾನು ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ ತಮಗೆ ಹಾಗೂ ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ನಾನು ಶಿವಮೊಗ್ಗ ನಿವಾಸಿಯಾಗಿರುವುದರಿಂದ, ನಿಗಮದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ನಿಗಮದ ಅಧ್ಯಕ್ಷ ಸ್ಥಾನಕ್ಕೆ ನನ್ನ ರಾಜಿನಾಮೆಯನ್ನು ನೀಡುತ್ತಿದ್ದೇನೆ. ದಯಮಾಡಿ ಅಂಗೀಕರಿಸಿ” ಎಂದು ವಿನಂತಿಸಿದ್ದಾರೆ.