ದೇಶದಲ್ಲಿ ಸದ್ದು ಮಾಡಿದ್ದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ಅಂತಿಮ ಆದೇಶವನ್ನು ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಪ್ರಕಟಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಒಂಬತ್ತು ಜನ ಆರೋಪಿಗಳನ್ನು ನಿರಪರಾಧಿಗಳು ಎಂದು ನ್ಯಾಯಾಧೀಶ ಸಿ ಚಂದ್ರಶೇಖರ್ ಅವರು ಆದೇಶಿಸಿದ್ದಾರೆ.
ರಾಜಕೀಯ ಷಡ್ಯಂತ್ರದ ಕಾರಣಕ್ಕೆ ಒಂಬತ್ತು ಜನರ ಮೇಲೆ ಕೊಲೆ ಆರೋಪ ಹೊರಿಸಲಾಗಿತ್ತು. ಇದು ನಿರಾಧಾರ ಎಂದು ನ್ಯಾಯಾಲಯ ಹೇಳಿದ್ದು, ಯಲ್ಲಾಲಿಂಗನದ್ದು ಕೊಲೆ ಅಲ್ಲ, ಆತ್ಮಹತ್ಯೆ ಎಂದು ಅವರ ಸ್ವಂತ ಸಹೋದರನೇ ಹೇಳಿದ್ದರು. ಈ ಎಲ್ಲ ಅಂಶಗಳನ್ನು ಗಮನಿಸಿ ನ್ಯಾಯಾಲಯ ಅವರನ್ನು ನಿರ್ದೋಷಿ ಎಂದು ಹೇಳಿದೆ ಎಂದು ಆರೋಪಿಗಳ ಪರ ವಕೀಲ ಗಂಗಾಧರ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಪ್ರಕರಣದ ಆರೋಪಿಗಳಾಗಿದ್ದ ಕಾಂಗ್ರೆಸ್ ಮುಖಂಡ ಹನುಮೇಶ ನಾಯಕ, ಬಾಳನಗೌಡ, ಕಾಡಮಂಜ, ಮಹಾಂತೇಶ ನಾಯಕ, ಮನೋಜ ಪಾಟೀಲ್, ನಂದೀಶ, ಪರಶುರಾಮ, ಯಮನೂರಪ್ಪ ಹಾಗೂ ದುರ್ಗಪ್ಪ ಅವರ ಮೇಲೆ ಕೊಲೆ ಆರೋಪ ಕೇಳಿ ಬಂದಿತ್ತು.
ಕನಕಗಿರಿ ತಾಲೂಕಿನ ಕನಕಾಪುರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ಎಂಬುವವರು ತಮ್ಮ ಗ್ರಾಮದಲ್ಲಿ ನಡೆದಿದ್ದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದರು. ಇದಾದ ನಂತರ 2015ರ ಜನವರಿ 11ರಂದು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಯಲ್ಲಾಲಿಂಗನ ಮೃತದೇಹ ಪತ್ತೆಯಾಗಿತ್ತು.
ಇದನ್ನು ಪ್ರಾರಂಭದಲ್ಲಿ ಆತ್ಮಹತ್ಯೆ ಎಂದು ಶಂಕಿಸಲಾಗಿದ್ದರೂ ನಂತರ ಕೊಲೆ ಎಂದು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಚಿವ ಶಿವರಾಜ ತಂಗಡಗಿ ಆಪ್ತ ಹನಮೇಶ ನಾಯಕ ಸೇರಿ ಒಂಬತ್ತು ಜನರ ವಿರುದ್ಧ ಇಲ್ಲಿ ಪ್ರಕರಣ ದಾಖಲಾಗಿತ್ತು.
ಯಲ್ಲಾಲಿಂಗನ ಸಾವಿಗೆ ನ್ಯಾಯ ಒದಗಿಸುವಂತೆ ದೊಡ್ಡ ಮಟ್ಟದಲ್ಲಿ ಹೋರಾಟಗಳು ಕೂಡ ನಡೆದಿದ್ದರಿಂದ ರಾಜ್ಯ ಮಟ್ಟದಲ್ಲಿ ಸದ್ದು ಮಾಡಿ ಸಚಿವ ಶಿವರಾಜ ತಂಗಡಗಿ ಸಂಪುಟದಿಂದ ಹೊರಬೀಳುವಂತಾಗಿತ್ತು. ಸುದೀರ್ಘ ಹತ್ತು ವರ್ಷಗಳ ವಿಚಾರಣೆ ನಡೆದಿದ್ದು, ಇಂದು ನ್ಯಾಯಾಲಯ ಈ ಆದೇಶ ನೀಡಿದೆ.
ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿತ್ತು. ನಂತರ ಆರೋಪಿಗಳಿಗೆ ಜಾಮೀನು ಸಹ ದೊರೆತಿತ್ತು. 2021ರಲ್ಲಿ ಆರೋಪಿ ಮಹಾಂತೇಶ್ ನಾಯಕನ ಮದುವೆಯಲ್ಲಿ ಪೊಲೀಸರು ಭಾಗವಹಿಸಿದ್ದರಿಂದ ಪ್ರಕರಣ ಮತ್ತೆ ಮುನ್ನಲೆಗೆ ಬಂದಿತ್ತು.


