ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಪುತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಆದೇಶದಲ್ಲಿ ಯಾವುದೇ ಸಂಘ ಅಥವಾ ಸಂಸ್ಥೆ ಎಂದಿದೆ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು , ನಾವು ಮಾಡಬಾರದೇ ಎಂದು ಪ್ರಶ್ನಿಸಿದರು.
2013 ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೇಶ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಮಾಡಿರುವುದು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು.
*ಅನುಮತಿ ನೀಡುವುದು ಕಡ್ಡಾಯವಲ್ಲ*
ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದರು.