ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ, ನಾನು ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸೋಮವಾರ ನಡೆದ ಮೈಸೂರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, “ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಏಕೆ ಇರಬೇಕು. ತಾಲ್ಲೂಕುಗಳಲ್ಲಿ ನೆಲೆಸಿ ಜನರ ಸಮಸ್ಯೆ ಕೇಳಬೇಕು ಎನ್ನುವ ಸೂಚನೆ ನೀಡಿದ್ದೆ. ಇದನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ ನೀಡಿ” ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚಿಸಿದರು.
“ಅಧಿಕಾರಿ ಮತ್ತು ಸಿಬ್ಬಂದಿ ಜನ ಸೇವೆಯ ಪ್ರಮಾಣ ಮಾಡಿ ಹುದ್ದೆ ಸ್ವೀಕರಿಸಿದ್ದೀರಿ. ನಾವು ಐದು ವರ್ಷಕ್ಕೊಮ್ಮೆ ಬರುವವರು. ಅಧಿಕಾರಿಗಳು ಶಾಶ್ವತವಾಗಿ ಇರುವವರು ಎನ್ನುವ ಭಾವನೆ ಬಿಟ್ಟು ಕೆಲಸ ಮಾಡಿ. ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನದಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಮಗೆ ಹತ್ತಿರದ ಕಾರ್ಯಕರ್ತರನ್ನೇ ಹಿಡ್ಕೊಂಡು ಬರ್ತೀರಿ. ಇದು ಕೆಟ್ಟ ನಡವಳಿಕೆ, ನಾನು ಸಹಿಸಲ್ಲ” ಮುಖ್ಯಮಂತ್ರಿ ಅವರು ಸಿಟ್ಟಾದರು.
ಸಭೆ ಆರಂಭವಾಗುತ್ತಿದ್ದಂತೆಯೇ ಸಭೆಗೆ ಗೈರಾದ ಅಧಿಕಾರಿ ಮತ್ತು ಸಿಬ್ಬಂದಿ ಯಾರಾದರೂ ಇದ್ದರೆ ಅವರ ವಿರುದ್ಧ ಕ್ರಮಕ್ಕೆ ಸೂಚಿಸಿ, ಬಳಿಕ ಐತಿಹಾಸಿಕ ದಸರಾ ಹಬ್ಬವನ್ನು ಅತ್ಯಂತ ರ್ಥಪರ್ಣವಾಗಿ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾಡಳಿತದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗಕಕೆ ಅಭಿನಂದನೆ ಸಲ್ಲಿಸಿದರು.
“ಮೈಸೂರು ಅಭಿವೃದ್ಧಿಯ ವೇಗ ಹೆಚ್ಚಾಗಬೇಕು. ನಿಗದಿತ ಅವಧಿಯ ಒಳಗೆ ಕೆಲಸಗಳು ಪೂರ್ಣಗೊಳ್ಳಬೇಕು ಎಂದು ಹಿಂದಿನ ಕೆಡಿಪಿ ಸಭೆಯಲ್ಲೇ ಸೂಚಿಸಿದ್ದೆ. ಆದರೂ ಈ ಬಗ್ಗೆ ಸಮಾಧಾನ ಆಗುವ ಮಟ್ಟಿಗೆ ವೇಗ ಪಡೆದುಕೊಂಡಿಲ್ಲ ಏಕೆ” ಎಂದು ಪ್ರಶ್ನಿಸಿದರು.
ಮೈಸೂರಿನ ಜನತೆ, ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ತುಂಬಾ ಮಂದಿ ಬರುತ್ತಾರೆ. ನಾನು ಬೆಂಗಳೂರಿನಲ್ಲಿ ಇಲ್ಲದಿದ್ದರೆ ರಾತ್ರಿವರೆಗೂ ನನಗೆ ಕಾಯುತ್ತಾ ಇರುತ್ತಾರೆ. ಇವರಲ್ಲಿ ವೈಯುಕ್ತಿಕ ಸಮಸ್ಯೆಗಾಗಿ ಬರುವವರು ಕಡಿಮೆ. ಹೆಚ್ಚಾಗಿ ಕಂದಾಯ ಇಲಾಖೆಗಳ ಸಮಸ್ಯೆಗಳಿಗಾಗಿ ಬರುವವರೇ ಹೆಚ್ಚು. ಮೈಸೂರಿನಲ್ಲೇ ಅವರ ಕೆಲಸಗಳು ಆಗಿದ್ದರೆ, ಮೈಸೂರಿನ ಕಚೇರಿಗಳಲ್ಲೇ ಕುಳಿತು ಅಧಿಕಾರಿಗಳು ಜನರ ಅಹವಾಲು ಕೇಳಿದ್ದರೆ ಅವರು ಮೈಸೂರಿನಿಂದ ಬೆಂಗಳೂರಿನವರೆಗೂ ಹುಡುಕಿಕೊಂಡು ಬರುತ್ತಿದ್ದರೇ” ಎಂದು ಕೇಳಿದರು.
ಸಿಇಒ ಮತ್ತು ಇತರೆ ಅಧಿಕಾರಿಗಳು ಆಸ್ಪತ್ರೆ, ಶಾಲೆ, ಹಾಸ್ಟೆಲ್ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎನ್ನುವ ನಾನು ಕೊಟ್ಟ ಸೂಚನೆ ಪಾಲನೆ ಆಗುತ್ತಿಲ್ಲ. ಇನ್ಸ್ಪೆಕ್ಟರ್ಗಳು, ಪಿಡಿಒಗಳು, ವಿಎ ಗಳ ಮೇಲೆ ಈ ಬಗ್ಗೆ ಸಿಕ್ಕಾಪಟ್ಟೆ ದೂರುಗಳು ಬರುತ್ತಿವೆ. ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಕಚೇರಿಗಳಿಗೆ ಗೌಪ್ಯ ಭೇಟಿ ನೀಡಿದರೆ ಕೆಲಸ ಕದಿಯುವ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿಕ್ಕಿ ಬೀಳುತ್ತಾರೆ. ಇಲ್ಲಿಯವರೆಗೂ ಯಾರ ವಿರುದ್ಧವೂ ದೂರು ಬಂದಿಲ್ಲ. ವರದಿ ಬಂದಿಲ್ಲ ಏಕೆ” ಎಂದು ತರಾಟೆಗೆ ತೆಗೆದುಕೊಂಡರು.
ಹಾಸ್ಟೆಲ್ಗಳಲ್ಲಿ ಊಟದ ವ್ಯವಸ್ಥೆಯನ್ನು ಮೇಲಿಂದ ಮೇಲೆ ಪರಿಶೀಲನೆ ನಡೆಸಬೇಕು. ಹೊಸದಾಗಿ ಬಂದಿರುವ ಡಿಡಿಪಿಐ ಅವರಿಗೆ ನಿಮ್ಮ ಅವಧಿಯಲ್ಲಿ ಉತ್ತಮ ಫಲಿತಾಂಶ ಬರಬೇಕು. ನಾನು ಗಮನಿಸುತ್ತಿರುತ್ತೇನೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಯಲ್ಲಿ ಫಲಿತಾಂಶ ಉತ್ತಮವಾಗಿರಬೇಕು, ಇದಕ್ಕೆ ಏನು ಮಾಡಬೇಕು ಎನ್ನುವ ಬ್ಲೂಪ್ರಿಂಟ್ ಸಿದ್ದಪಡಿಸಿ” ಎಂದು ಸೂಚಿಸಿದರು.


