ಕೈಗೆಟುಕುವ ಕಂಪ್ಯೂಟಿಂಗ್ ಸೌಲಭ್ಯದ ಬುದ್ಧಿವಂತ ಹಾಗೂ ಅಗ್ಗದ ಕಂಪ್ಯೂಟರ್ ತಳಮಟ್ಟದಲ್ಲಿ ಎಲ್ಲರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡುವ, ರಾಜ್ಯದಾದ್ಯಂತ ನಾಗರಿಕರನ್ನು ಸಬಲೀಕರಣಗೊಳಿಸುವ ಗುರಿ ಹೊಂದಿರುವ ವಿಶಿಷ್ಟ ಉತ್ಪನ್ನ ಎಂದು ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ (ಕಿಯೊನಿಕ್ಸ್) ಸಹಯೋಗದಲ್ಲಿ ವಿನ್ಯಾಸ ರೂಪಿಸಿ ಅಭಿವೃದ್ಧಿಪಡಿಸಿರುವ ಕೃತಕ ಬುದ್ಧಿಮತ್ತೆ ಒಳಗೊಂಡ ಪುಟ್ಟ ಗಾತ್ರದ ಮತ್ತು ಅಗ್ಗದ ವೈಯಕ್ತಿಕ ಕಂಪ್ಯೂಟರ್ (ಪಿಸಿ) ಅನ್ನು ಪರಿಚಯಿಸಿ ಮಾತನಾಡಿದರು.
“ಇದು ರಾಜ್ಯದಲ್ಲಿನ ಡಿಜಿಟಲ್ ಲಭ್ಯತೆಯ ಅಂತರವನ್ನು ನಿವಾರಿಸುವ ಗುರಿ ಹೊಂದಿದೆ. ದೇಶಿ ಕುಟುಂಬಗಳಲ್ಲಿ ಶೇಕಡ 10ಕ್ಕಿಂತ ಕಡಿಮೆ ಜನರು ಕಂಪ್ಯೂಟರ್ ಹೊಂದಿದ್ದಾರೆ. ಕರ್ನಾಟಕದಲ್ಲಿ ಇದರ ಪ್ರಮಾಣ ಕೇವಲ ಶೇಕಡ 15ರಷ್ಟಿದೆ. ಸ್ಮಾರ್ಟ್ಫೋನ್ಗಳ ಬಳಕೆ ವ್ಯಾಪಕವಾಗಿದ್ದರೂ, ಶೈಕ್ಷಣಿಕ ಉದ್ದೇಶ, ಕೋಡಿಂಗ್, ಆನ್ಲೈನ್ ತರಗತಿಗಳು ಮತ್ತು ಹೈಬ್ರಿಡ್ ಕಲಿಕೆಗೆ ಕಂಪ್ಯೂಟರ್ಗಳು ಅಗತ್ಯ ಎಂಬುದನ್ನು ಅಧ್ಯಯನಗಳು ತಿಳಿಸಿವೆ. ಸೂಕ್ತ ಸಾಧನಗಳ ಲಭ್ಯತೆಯ ಕೊರತೆಯಿಂದಾಗಿ ಶೇಕಡ 60 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಆನ್ಲೈನ್ ಕಲಿಕೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹೆಚ್ಚಿನ ವಿದ್ಯಾರ್ಥಿಗಳು ಶಾಲೆ – ಕಾಲೇಜ್ ತೊರೆಯಲು ಇದು ಕೂಡ ನೇರವಾಗಿ ಕೊಡುಗೆ ನೀಡುತ್ತಿದೆ” ಎಂದು ಹೇಳಿದರು.
“ಜ್ಞಾನ ಆಧಾರಿತ (ಕೆ), ಮಿತವ್ಯಯ (ಇ) ಮತ್ತು ಮುಕ್ತ-ಕಂಪ್ಯೂಟಿಂಗ್ (ಓಪನ್ ಸೋರ್ಸ್) ಕೆಇಒ – ಈ ಸವಾಲಿಗೆ ಕರ್ನಾಟಕದ ಉತ್ತರವಾಗಿದೆ. ಲಿನಕ್ಸ್ ಆಧಾರಿತ ಆಪರೇಟಿಂಗ್ ಸಿಸ್ಟಮ್ (ಒಎಸ್) ಹೊಂದಿರುವ ಓಪನ್-ಸೋರ್ಸ್ ಆರ್ಐಎಸ್ಸಿ-ವಿ ಪ್ರೊಸೆಸರ್ನಲ್ಲಿ ನಿರ್ಮಿಸಿರುವ ʼಕೆಇಒʼ ಕೈಗೆಟುಕುವ ಬೆಲೆಯಲ್ಲಿ ಸಂಪೂರ್ಣ ಕಂಪ್ಯೂಟಿಂಗ್ ಬಳಕೆಯ ಅನುಭವ ನೀಡಲಿದೆ” ಎಂದರು.
“ಇದು 4ಜಿ, ವೈ-ಫೈ, ಈಥರ್ನೆಟ್, ಯುಎಸ್ಬಿ- ಎ ಮತ್ತು ಯುಎಸ್ಬಿ – ಸಿ ಪೋರ್ಟ್ಗಳು, ಎಚ್ಡಿಎಂಐ ಮತ್ತು ಆಡಿಯೊ ಜ್ಯಾಕ್ ಸೌಲಭ್ಯ ಹೊಂದಿದೆ. ಕಲಿಕೆ, ಪ್ರೋಗ್ರಾಮಿಂಗ್ ಮತ್ತು ಉತ್ಪಾದಕತೆ ಪರಿಕರಗಳೊಂದಿಗೆ ಸಂಪೂರ್ಣ ಸಜ್ಜಾಗಿದೆ. ಆನ್-ಡಿವೈಸ್ ಎಐ ಕೋರ್ ಒಳಗೊಂಡಿದೆ. ಇದು ಇಂಟರ್ನೆಟ್ ಲಭ್ಯ ಇರದಿದ್ದರೂ ಸ್ಥಳೀಯವಾಗಿ ಕಾರ್ಯನಿರ್ವಹಿಸಲು ಎಐ ಅನುವು ಮಾಡಿಕೊಡುತ್ತದೆ. ಇದು ಕಡಿಮೆ ಸಂಪರ್ಕ ಹೊಂದಿರುವ ಪ್ರದೇಶಗಳಲ್ಲಿಯೂ ಸಹ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಕರ್ನಾಟಕ ಡಿಎಸ್ಇಆರ್ಟಿ ಪಠ್ಯಕ್ರಮದಲ್ಲಿ ತರಬೇತಿ ಪಡೆದ ಎಐ ಏಜೆಂಟ್ ಬುದ್ಧ (BUDDH) ಜೊತೆಗೆ ಬರುತ್ತದೆ” ಎಂದು ಹೇಳಿದರು.
“ಬೆಂಗಳೂರು ಟೆಕ್ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರು ʼಕೆಇಒʼ ವನ್ನು ಔಪಚಾರಿಕವಾಗಿ ಅನಾವರಣಗೊಳಿಸಲಿದ್ದಾರೆ. ಬಿಡುಗಡೆಯ ನಂತರ, ಇದನ್ನು ಶೃಂಗಸಭೆಯ ಉದ್ದಕ್ಕೂ ಸಾರ್ವಜನಿಕರಿಗೆ ಪ್ರದರ್ಶಿಸಲಾಗುತ್ತದೆ” ಎಂದು ತಿಳಿಸಿದರು.
“ವಿದ್ಯಾರ್ಥಿಗಳು, ನವೋದ್ಯಮಿಗಳು, ಉದ್ಯಮ ಮುಖಂಡರು ಮತ್ತು ಸಂದರ್ಶಕರು ಇದನ್ನು ಬಳಸಲು ಮತ್ತು ರಾಜ್ಯದಾದ್ಯಂತ ಸಾಮೂಹಿಕ ಬಳಕೆಗೆ ಕೈಗೆಟುಕುವ ಕೃತಕ ಜಾಣ್ಮೆಯ ಕಾಂಪ್ಯಾಕ್ಟ್ ಕಂಪ್ಯೂಟರ್ ಅರ್ಥಮಾಡಿಕೊಳ್ಳಲು ಅನುವು ಮಾಡಿಕೊಡಲಿದೆ.
“ಕೆಇಒ ಡಿಜಿಟಲ್ ಅಂತರ ಕಡಿಮೆ ಮಾಡುವುದಕ್ಕೆ ಕರ್ನಾಟಕದ ಪ್ರಾಯೋಗಿಕ ಉತ್ತರವಾಗಿದೆ. ಇದು ಐಷಾರಾಮಿ ಸಾಧನವಲ್ಲ; ಇದು ಎಲ್ಲರಿಗೂ ಲಭ್ಯವಾಗುವ ಅಗ್ಗದ ಸಾಧನವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿ, ಸಣ್ಣ ವ್ಯಾಪಾರಿ ಮತ್ತು ಪ್ರತಿ ಮನೆಯು ಡಿಜಿಟಲ್ ಆರ್ಥಿಕತೆಯಲ್ಲಿ ಸಂಪೂರ್ಣವಾಗಿ ಭಾಗವಹಿಸಲು ಅನುವು ಮಾಡಿಕೊಡುತ್ತದೆ” ಎಂದು ಪ್ರಿಯಾಂಕ್ ಖರ್ಗೆ ಅವರು ಹೇಳಿದರು.
ಕಿಯೊನಿಕ್ಸ್ ಅಧ್ಯಕ್ಷ ಶರತ್ ಕುಮಾರ್ ಬಚ್ಚೇಗೌಡ ಅವರು, ಮಾತನಾಡಿ, “ಕೆಇಒಐಸಿಎಸ್ ಎಲೆಕ್ಟ್ರಾನಿಕ್ಸ್ ನಾವೀನ್ಯತೆಯ ಧ್ಯೇಯವನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ಒಲವು ತೋರುತ್ತಿದೆ. ಓಪನ್-ಸೋರ್ಸ್ ಆರ್ಐಎಸ್ಸಿ-ವಿ ಸ್ಟ್ಯಾಕ್ ಅನ್ನು ಅಳವಡಿಸಿಕೊಳ್ಳುವ ಮೂಲಕ, ʼಕೆಇಒʼ ಎಲ್ಲರಿಗೂ ಸುಲಭವಾಗಿ ಲಭ್ಯವಾಗುವ, ಸ್ಥಳೀಯವಾಗಿ ಅಳವಡಿಸಿಕೊಳ್ಳುವ, ರಾಜ್ಯದಲ್ಲಿಯೇ ಅಭಿವೃದ್ಧಿಪಡಿಸುವ ಕಂಪ್ಯೂಟಿಂಗ್ ಪರಿಹಾರಗಳಿಗೆ ಕರ್ನಾಟಕದ ಬದ್ಧತೆಯನ್ನು ಬಲಪಡಿಸುತ್ತದೆ” ಎಂದು ಹೇಳಿದರು.


