Homeಕರ್ನಾಟಕಹೊಸ ವರ್ಷ ಸಂಭ್ರಮಾಚರಣೆಯ ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆ

ಹೊಸ ವರ್ಷ ಸಂಭ್ರಮಾಚರಣೆಯ ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆ

ಬೆಂಗಳೂರು ನಗರದ ವಿವಿಧೆಡೆ ನಡೆಯುವ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ  ಜಿ.ಪರಮೇಶ್ವರ್ ತಿಳಿಸಿದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಗರದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು, ಬಂದೋಬಸ್ತ್ ವ್ಯವಸ್ಥೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನಗರದಲ್ಲಿ ಹೊಸ ಸಂಭ್ರಮಾಚರಣೆಯ ಕರ್ತವ್ಯಕ್ಕೆ ಒಟ್ಟು 20 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ 14 ಸಾವಿರ ಪೊಲೀಸರು, 2500 ಟ್ರಾಫಿಕ್ ಪೊಲೀಸರು, 88 ಕೆಎಸ್ಆರ್‌ಪಿ ಪ್ಲಟೂನ್ಸ್, 21 ಸಿಎಆರ್, 266 ಹೋಯ್ಸಳ ವಾಹನ, 250 ಕೋಬ್ರ ವಾಹನಗಳನ್ನು ನಿಯೋಜಿಸಲಾಗುತ್ತಿದೆ. 400 ಟ್ರಾಫಿಕ್ ವಾರ್ಡನ್‌ಗಳನ್ನು ನಿಯೋಜಿಸಲಾಗಿದೆ. ಜನ ದಟ್ಟಣೆ ನಿಯಂತ್ರಿಸಲು ವಾಟರ್ ಜೆಟ್ಸ್ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದು. ಸಿವಿಲ್ ಡಿಫೆನ್ಸ್, ಹೋಮ್ ಗಾರ್ಡ್ಸ್ ಸೇರಿದಂತೆ ಒಟ್ಟು 20 ಸಾವಿರ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ವಿವರಿಸಿದರು.

ಹೊಸ ವರ್ಷದ ಆಚರಣೆಯಲ್ಲಿ ಹೆಚ್ಚಿನ ಜನ ಭಾಗವಹಿಸುತ್ತಿದ್ದಾರೆ. ಕಳೆದ ವರ್ಷ 8 ಲಕ್ಷಕ್ಕು ಹೆಚ್ಚು ಜನರು ಸಂಭ್ರಮಾಚರಣೆಗಳಲ್ಲಿ ಭಾಗವಹಿಸಿದ್ದರು. ಎಂ.ಜಿ.ರಸ್ತೆ, ಬ್ರಿಗೇಡ್ ರೋಡ್, ಇಂದಿರಾನಗರ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯನ್ನು ಹೆಚ್ಚು ಜನ ಸೇರುವ ಸ್ಥಳಗಳೆಂದು ಗುರುತಿಸಲಾಗಿದೆ.

ಹಿಂದಿನ‌ ವರ್ಷದ ಅನುಭವದ ಮೇಲೆ ಈ ಸ್ಥಳಗಳನ್ನು ಗುರುತಿಸಲಾಗಿದೆ. ಹಿಂದಿನ ವರ್ಷಕ್ಕಿಂತ ಹೆಚ್ಚು ಜನ ಸೇರಬಹುದು ಎಂದು ಅಂದಾಜಿಸಲಾಗಿದ್ದು, ಸುಮಾರು 10 ಲಕ್ಷಕ್ಕು ಹೆಚ್ಚು ಜನ ಸೇರುವ ಸಾಧ್ಯತೆ ಇದೆ ಎಂದರು.

ಜನರು ಸುರಕ್ಷಿತವಾಗಿ ಮನೆಗಳಿಗೆ ಹೋಗಲು ಅನುವು ಮಾಡಿಕೊಡಲಾಗುವುದು. ಬಾರ್ ಆ್ಯಂಡ್ ರೆಸ್ಟೋರೆಂಟ್, ಮೆಟ್ರೋ ಕಾರಿಡಾರ್, ಮನಸಂರಜನಾ ಸ್ಥಳಗಳಲ್ಲಿ ಹೆಚ್ಚಿನ ರೀತಿಯಲ್ಲಿ ಯುವಕ-ಯುವತಿಯರು ಸೇರುತ್ತಾರೆ. ಇದಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅವಶ್ಯಕತೆ ಇರುವ ಸ್ಥಳಗಳಲ್ಲಿ ವಾಚ್ ಟವರ್, 180 ಕಡೆ ಫೋಕಸ್ ಲೈಟ್‌ಗಳನ್ನು ಅಳವಡಿಸಲಾಗುವುದು. ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲು ಪೊಲೀಸ್ ಆ್ಯಕ್ಸಿಸ್ ಕಂಟ್ರೋಲ್, ವಾಹನ ತಪಾಸಣೆ ವ್ಯವಸ್ಥೆ ಮಾಡಲಾಗಿದೆ. ಟ್ಯಾಕ್ಸಿಗಳು ಸಿಗುವುದಿಲ್ಲ. ಅಂತವರು ಸುರಕ್ಷಿತವಾಗಿ ಮನೆಗಳಿಗೆ ಹೋಗಲು 8 ಕಡೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಸಂಭ್ರಮಾಚರಣೆ ನಡೆಯುವ ಸ್ಥಳಗಳಲ್ಲಿ 250 ಕಡೆ ತಾತ್ಕಲಿಕವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸೇಫ್ಟಿ ಶೆಲ್ಟರ್‌ಗಳು, ಆಂಬುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತಿದೆ. ಜನದಟ್ಟಣೆಯ ಮೇಲೆ ಡ್ರೋನ್ ಕ್ಯಾಮೆರಾಗಳಿಂದ ಪೊಲೀಸರು ನಿಗಾವಹಿಸಲಿದ್ದಾರೆ ಎಂದು ತಿಳಿಸಿದರು.

ಮಹಿಳಾ ಸುರಕ್ಷತೆ ಮತ್ತು ಜನಸಂದಣಿ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸಲಾಗುವುದು. ಈಗಾಗಲೇ ಬಾರ್, ರೆಸ್ಟೋರೆಂಟ್, ಮಾಲ್‌ಗಳ ಮಾಲೀಕರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.‌ ಡಿಜಿಪಿ ಅವರು 15 ಅಂಶಗಳ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ ಎಂದರು.

ಟೆರರಿಸ್ಟ್ ದೃಷ್ಟಿಯಿಂದಲೂ ಹೆಚ್ಚಿನ ಭದ್ರೆತೆಗೆ ಒತ್ತು ನೀಡಲಾಗಿದೆ. ಇದಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸಿ, ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಗಮನ ಹರಿಸಲಾಗಿದೆ.

ಮುಖಚರ್ಯೆ ಗುರುತಿಸುವ ಎಐ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ.‌ ಅಪರಾಧ ಚಟುವಟಿಕೆ ಹಿನ್ನೆಲೆಯುಳ್ಳವರ ಮಾಹಿತಿ ಫೇಸ್‌ ರೆಕಾಗ್ನೈಸೇಷನ್ ಎಐ ಕ್ಯಾಮೆರಾದಿಂದ ಗೊತ್ತಾಗಲಿದೆ. ಅಂಥವರು ಕಂಡು ಬಂದರೆ ಕೂಡಲೇ ಎಚ್ಚರಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಅನುಕೂಲವಾಗುತ್ತದೆ.

ಕಳೆದ ಐದು ದಿನದಿಂದ ನಗರದಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದವರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. 2854 ಸವಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿಸಿದರು.

ಹೀಟ್ ಮ್ಯಾಪ್

ಆಂಬುಲೆನ್ಸ್, ವಾಹನಗಳು, ಟ್ರಾಫಿಕ್ ಸಮಸ್ಯೆ ಸೇರಿದಂತೆ ಜನಗಳಿಗೆ ಮಾಹಿತಿ ಸಿಗಲು ಕ್ಯೂಆರ್ ಕೋಡ್ ಪರಿಚಯಿಸಲಾಗಿದೆ. ಕ್ಯೂಆರ್ ಕೋಡ್ ಮೂಲಕ ಮಾಹಿತಿ ಪಡೆಯಬಹುದು‌. ಇದೇ ಮೊದಲ ಬಾರಿಗೆ ‘ಹೀಟ್ ಮ್ಯಾಪ್’ ಮಾಡಲಾಗಿದೆ. ಅತೀ ಹೆಚ್ಚು ಜನ ಸೇರಿರುವ ಸ್ಥಳಗಳನ್ನು ಕೆಂಪು ಬಣ್ಣದಿಂದ ಗುರುತಿಸಲಾಗುತ್ತದೆ‌. ಹಳದಿ ಬಣ್ಣದಿಂದ ಗುರುತಿಸುವ ಸ್ಥಳಗಳನ್ನು ಹೆಚ್ಚಿನ ಜನ ಸೇರುತ್ತಿರುವುದನ್ನು ಸೂಚಿಸುತ್ತದೆ‌. ಹಸಿರು ಬಣ್ಣ ಇರುವುದು ಕಡಿಮೆ ಜನ ಇರುವುದನ್ನು ಗುರುತಿಸಬಹುದು. ಇದನ್ನು ಕಮಾಂಡ್ ಸೆಂಟರ್‌ನಿಂದ ನಿಗಾವಹಿಸಲಾಗುತ್ತದೆ. ಇದನ್ನು ಆಧರಿಸಿ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಜನರ ದಟ್ಟಣೆ ನಿಯಂತ್ರಣಕ್ಕೆ ಕೂಡಲೇ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರಿಗೆ ಮನವಿ

ಹೊಸ ವರ್ಷವನ್ನು ಜವಾಬ್ದಾರಿಯಿಂದ ಸಂಭ್ರಮಾಚರಣೆ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗುವುದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ನಿಮ್ಮ ಮನೆಯ ಯುವಕರು, ಮನೆಯಿಂದ ಹೊರ ಹೋದ ಬಳಿಕ ವಾಪಸ್ ಮನೆಗೆ ಬರುವವರೆಗೂ ಅವರ ಬಗ್ಗೆ ನಿಗಾವಹಿಸಬೇಕು ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.

58 ಕೋಟಿ ರೂ. ಮೌಲ್ಯದ ಡ್ರಗ್ಸ್ ಎಂಬುದು ಸತ್ಯಕ್ಕೆ ದೂರ

ಹೊಸ ವರ್ಷ ಸಮೀಪಿಸುತ್ತಿರುವುದರಿಂದ ಡ್ರಗ್ಸ್ ದಂಧೆಯ ವಿರುದ್ಧ ಅಕ್ಟೋಬರ್, ನವೆಂಬರ್ ತಿಂಗಳಿಂದ ಪೊಲೀಸರು ರಾಜ್ಯದಾದ್ಯಂತ ಹೆಚ್ಚಿನ ಕಾರ್ಯಾಚರಣೆಗಳನ್ನು ಕೈಗೊಂಡಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು‌

ನಿನ್ನೆ ದಿನ ಮಹಾರಾಷ್ಟ್ರ ಪೊಲೀಸರು ಮುಂಬೈನಲ್ಲಿ ಸಿಕ್ಕ ಆರೋಪಿಯ ಮಾಹಿತಿ ಆಧರಿಸಿ ಬೆಂಗಳೂರಿನಲ್ಲಿ ಆರೋಪಿಯೊಬ್ಬನನ್ನು ಹಿಡಿದಿದ್ದಾರೆ. ಮುಂಬೈ ಪೊಲೀಸರು ಮತ್ತು ಬೆಂಗಳೂರು ನಗರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ಡ್ರಗ್ಸ್ ತಯಾರಿಸಲು ಬೇಕಾದ ಮೆಫೆಡ್ರಿನ್ ಎಂಬ ಕೆಮಿಕಲ್ ಸಂಗ್ರಹಿಸಿಟ್ಟುಕೊಂಡಿದ್ದ.‌

ಮುಂಬೈನಲ್ಲಿ ಸಿಕ್ಕಿದ್ದ ಆರೋಪಿಯು ನೀಡಿದ ಸುಳಿವಿನ ಮೇರೆಗೆ ಬೆಂಗಳೂರು ನಗರ ಪೊಲೀಸ್, ಮುಂಬೈ ಪೊಲೀಸ್, ಎನ್‌ಸಿಬಿ, ಸೋಕೋ ಟೀಮ್‌ನವರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸರು ಏನು ಕ್ರಮ ಕೈಗೊಂಡಿಲ್ಲ‌ ಎಂಬ ಮಾತುಗಳು ಸರಿಯಲ್ಲ ಎಂದರು.

58 ಕೋಟಿ ರೂ. ಮೌಲ್ಯದ ಡ್ರಗ್ಸ್ ಹಿಡಿದಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಇದು ಸತ್ಯಕ್ಕೆ ದೂರವಾದ ಮಾಹಿತಿ. ಪತ್ತೆಯಾಗಿರುವ ಡ್ರಗ್ಸ್ ಕೆಮಿಕಲ್ ಮೌಲ್ಯ 1 ಕೆಜಿಗೆ 30 ಲಕ್ಷ ರೂ. ಬೆಲೆಬಾಳುತ್ತದೆ. ಒಟ್ಟು 4 ಕೆಜಿಗೆ 1.20 ಕೋಟಿ ರೂ. ಮೌಲ್ಯವಾಗುತ್ತದೆ ಎಂದ ಅವರು, ಮೈಸೂರು ಘಟನೆಯ ಬಳಿಕ ಎಚ್ಚರಿಕೆಯಿಂದ‌ ಕೆಲಸ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಡ್ರಗ್ಸ್ ದಂಧೆಯ ವಿರುದ್ಧ ಅಕ್ಟೋಬರ್‌ನಿಂದ ಹೆಚ್ಚಿನ ರೀತಿಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ನಿನ್ನೆಯ ಘಟನೆಯ ಬಗ್ಗೆ ಸಮರ್ಥಿಸಿಕೊಳ್ಳಲು ಹೋಗುವುದಿಲ್ಲ. ಅನೇಕ‌ ಸಂದರ್ಭಗಳಲ್ಲಿ ನಮ್ಮ ಪೊಲೀಸರು, ಇಲ್ಲಿ ಸಿಕ್ಕ ಆರೋಪಿಗಳು ನೀಡಿರುವ ಮಾಹಿತಿ ಆಧರಿಸಿ ಬೇರೆ ರಾಜ್ಯಗಳಲ್ಲಿ ಕಾರ್ಯಾಚರಣೆ ಕೈಗೊಂಡಿರುತ್ತೇವೆ. ಈಗಾಗಲೇ ಬೇರೆಬೇರೆ ಪ್ರಕರಣಗಳಲ್ಲಿ ನಾಲ್ಕು ಪೊಲೀಸರ ತಂಡಗಳು ಕಾಯುತ್ತಿವೆ‌. ಆಗ ಅಲ್ಲಿನ ಪೊಲೀಸರ ವೈಫಲ್ಯ ಎಂದು ಹೇಳಲಾಗುತ್ತಿದಯೇ? ಮೂರು ಕಡೆಗಳಲ್ಲಿ ಫ್ಯಾಕ್ಟರಿ ಇತ್ತು ಎಂಬುದು ಸುಳ್ಳು. ಕಾರ್ಯಾಚರಣೆ ವೇಳೆ ನಮ್ಮ ಡಿಸಿಪಿಯವರು ಮುಂಬೈ ಪೊಲೀಸರೊಂದಿಗೆ ಇದ್ದರು. ಡ್ರಗ್ಸ್ ದಂಧೆಯ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಸಂಘಟಿತವಾಗಿ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮುಂದೆ ಇಂತಹ ಘಟನೆ ಆಗಬಾರದು. ಡಿಸಿಪಿ ಆಗಲಿ, ಎಸಿಪಿ ಅಥವಾ ಸ್ಥಳೀಯ ಅಧಿಕಾರಿಗಳು ಯಾರೇ ಇರಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಅಮಾನತು ಅಷ್ಟೇ ಅಲ್ಲದೇ ಬೇರೆ ರೀತಿಯ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ ಅವರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ರವರು, ಜಂಟಿ ಪೊಲೀಸ್ ಆಯುಕ್ತರುಗಳಾದ ರಮೇಶ್ ಬಾನೋಥ್, ವಂಶಿಕೃಷ್ಣ, ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಕಾರ್ತಿಕ್ ರೆಡ್ಡಿ ಹಾಗೂ ಎಲ್ಲ ವಿಭಾಗಗಳ ಡಿಸಿಪಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments