Homeಕರ್ನಾಟಕ153 ಎಕರೆ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: ಈಶ್ವರ ಖಂಡ್ರೆ

153 ಎಕರೆ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: ಈಶ್ವರ ಖಂಡ್ರೆ

ನಿವೃತ್ತರ ಸ್ವರ್ಗ, ಉದ್ಯಾನನಗರಿ ಎಂಬ ಹಿರಿಮೆಯ ಬೆಂಗಳೂರಿಗೆ ಮತ್ತೊಂದು ಗರಿ ಮೂಡುತ್ತಿದ್ದು, ಅರಣ್ಯ ಇಲಾಖೆ 153 ಎಕರೆಯಲ್ಲಿ ಅಭಿವೃದ್ಧಿ ಪಡಿಸಲುದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಚಿವ ಸಂಪುಟ ತನ್ನ ಅನುಮೋದನೆ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ  ಖಂಡ್ರೆ ತಿಳಿಸಿದ್ದಾರೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಬೆಂಗಳೂರು ನಗರಕ್ಕೆ ಅತ್ಯಗತ್ಯವಾದ ಶ್ವಾಸತಾಣ ಮತ್ತು ಮನೋಲ್ಲಾಸ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಸಂಪುಟ 50 ಕೋಟಿ ರೂ. ಮಂಜೂರು ಮಾಡಿದ್ದು, ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲ ಸಂಪುಟ ಸಹೋದ್ಯೋಗಿಗಳಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.

265 ವರ್ಷಗಳ ಹಿಂದೆ 1760ರಲ್ಲಿ 240 ಎಕರೆ ಪ್ರದೇಶದಲ್ಲಿ ಲಾಲ್ ಬಾಗ್ ನಿರ್ಮಾಣವಾಗಿತ್ತು,. 155 ವರ್ಷಗಳ ಹಿಂದೆ 1870ರಲ್ಲಿ ಕಬ್ಬನ್ ಪಾರ್ಕ್ 197 ಎಕರೆ ಪ್ರದೇಶದಲ್ಲಿ ಕಬ್ಬನ್ ಪಾರ್ಕ್ ಜನಾಕರ್ಷಣೆಯ ತಾಣವಾಗಿದೆ. ಅಂದರೆ ಕಬ್ಬನ್ ಪಾರ್ಕ್ ನಿರ್ಮಾಣವಾಗಿ 155ವರ್ಷ ಆಗಿದೆ. ಆದಾದ ಬಳಿಕ ಬೆಂಗಳೂರಿನಲ್ಲಿ ಹಲವು ಸಣ್ಣ ಉದ್ಯಾನಗಳ ನಿರ್ಮಾಣವಾಗಿದೆಯಾದರೂ ಬೃಹತ್ ಉದ್ಯಾನ ನಿರ್ಮಾಣ ಆಗಿರಲಿಲ್ಲ. ಈಗ ಅಂತಹ ಒಂದು ಬೃಹತ್ ಜೀವವೈವಿಧ್ಯ ಉದ್ಯಾನವನ್ನು ನಮ್ಮ ಸರ್ಕಾರ ಜನತೆಗೆ ಸಮರ್ಪಿಸುತ್ತಿದೆ ಎಂದರು.

ಬೆಂಗಳೂರು ಉತ್ತರ ತಾಲೂಕು ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿ 153 ಎಕರೆ ಪ್ರದೇಶದಲ್ಲಿ ಅಭಿವೃದ್ಧಿ ಆಗಲಿರುವ ಈ ಉದ್ಯಾನ ರಾಜ್ಯ ರಾಜಧಾನಿಯ 3ನೇ ಅತಿದೊಡ್ಡ ಉದ್ಯಾನವನವೆಂಬ ಖ್ಯಾತಿಗೆ ಪಾತ್ರವಾಗಲಿದೆ. ಬಹುತೇಕ ಒಂದೂವರೆ ಶತಮಾನದ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಾಣದ ಕಲ್ಪನೆ ಇಂದು ಸಾಕಾರವಾಗುತ್ತಿದ್ದು, ಇದನ್ನು ಶತಮಾನದ ಸಾಧನೆ ಎಂದರೂ ಅತಿಶಯೋಕ್ತಿಯಾಗಲಾರದು ಎಂದು ಈಶ್ವರ ಖಂಡ್ರೆ ತಿಳಿಸಿದರು.

ಈ ಹಿಂದೆ ಅರಣ್ಯ ಇಲಾಖೆ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ಪ್ರದೇಶವನ್ನು ನೆಡುತೋಪು ಬೆಳೆಸಲು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ನೀಡಲಾಗಿತ್ತು. ಈಗ ಈ ಜಾಗವನ್ನು ಮರಳಿ ಇಲಾಖೆಗೆ ಪಡೆಯಲಾಗಿದ್ದು, ಇಲ್ಲಿರುವ ನೀಲಗಿರಿ ಮರಗಳನ್ನು ಹಂತಹಂತವಾಗಿ ತೆಗೆದು ಇಲ್ಲಿ ಸ್ಥಳೀಯ ಪ್ರಭೇದದ ಗಿಡ ಮರ ಬೆಳೆಸಿ, ಜಲ ಗುಂಡಿ ನಿರ್ಮಿಸಿ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನ ನಿರ್ಮಿಸಲಾಗುವುದು ಎಂದರು.

ದಿವ್ಯೌಷಧೀಯ ಸಸ್ಯ ವನ, ಪಕ್ಷಿ ಲೋಕ, ವೃಕ್ಷೋದ್ಯಾನ ಹಾಗೂ ಇಂಟರ್ ಪ್ರಿಟೇಷನ್ ಸೆಂಟರ್ ನಿರ್ಮಾಣ ಮಾಡಲು ಚಿಂತಿಸಲಾಗಿದ್ದು, ಅತಿ ಶೀಘ್ರದಲ್ಲೇ ಸಾರ್ವಜನಿಕರಿಗೆ ಲಭ್ಯವಾಗಲಿರುವ ಶಿವರಾಮಕಾರಂತ ಬಡಾವಣೆಗೆ ಅತ್ಯಂತ ಸಮೀಪದಲ್ಲಿದೆ ಎಂದೂ ಹೇಳಿದರು.

ಈ ಪ್ರದೇಶದಲ್ಲಿ ಬೆಳೆಸಲಾಗಿರುವ ನೀಲಗಿರಿ ಮರಗಳನ್ನು ತೆಗೆದು ಸ್ಥಳೀಯ ಜಾತಿಯ ನಂದಿ, ಹೊನ್ನೆ, ಬಿಲ್ವ, ಮಹಾಬಿಲ್ವವೇ ಮೊದಲಾದ ನೂರಾರು ಪ್ರಭೇದದ ಸಸಿಗಳನ್ನು ನೆಟ್ಟು ಬೆಳೆಸಲಾಗುವುದು. ಹೀಗೆ ಬೆಳೆಸುವ ಎಲ್ಲ ಮರಗಳ ಬಳಿ ವೃಕ್ಷದ ಹೆಸರು, ಪ್ರಭೇದ ಇತ್ಯಾದಿ ವೈಜ್ಞಾನಿಕ ವಿವರದ ಫಲಕ ಹಾಕುವ ಮೂಲಕ ಮುಂದಿನ ಪೀಳಿಗೆ ಕನಿಷ್ಠ 50 ಮರಗಳನ್ನು ಗುರುತಿಸುವಂತೆ ಅರಿವು ಮೂಡಿಸಲು ತೀರ್ಮಾನಿಸಲಾಗಿದೆ. ಇದು ತಾವು ಸಚಿವರಾದ ತರುವಾಯ ಕೈಗೊಂಡ ಕನಸಿನ ಯೋಜನೆಯಾಗಿದ್ದು, ದರ ಸಾಕಾರಕ್ಕೆ ಸಮ್ಮತಿಸಿದ ಸಚಿವ ಸಂಪುಟಕ್ಕೆ ಕೃತಜ್ಞತೆ ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments