ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ಒತ್ತಾಯಿಸಿ ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆ ನಡೆಯಿತು.
ಈ ವೇಳೆ ಯುವ ಸಮುದಾಯವನ್ನು ನಿರ್ಲಕ್ಷಿಸಿದರೆ ಜೋಕೆ! ಎಂದು ಎಚ್ಚರಿಕೆ ಸಂದೇಶವನ್ನು ಸರ್ಕಾರಕ್ಕೆ ರವಾನಿಸಲಾಯಿತು. ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಗೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಉದ್ಯೋಗಾಕಾಂಕ್ಷಿಗಳು ಆಗಮಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು.
ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಉಪನಾಯಕ ಅರವಿಂದ ಬೆಲ್ಲದ್, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಬಿಜೆಪಿ ನಾಯಕರು ಪ್ರತಿಭಟನೆಗೆ ಬೆಂಬಲ ನೀಡಿದರು. ನಗರದ ಶ್ರೀನಗರ ವೃತ್ತದಿಂದ ಆರಂಭವಾದ ಪ್ರತಿಭಟನೆ ಮಧ್ಯಭಾಗದಲ್ಲಿ ಹಾದುಬರುತ್ತಿದ್ದಂತೆ ಅವರನ್ನು ಡೆಯಲು ಯತ್ನಿಸಿದಾಗ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ತಳ್ಳಾಟ, ನೂಕಾಟ, ಆರೋಪ-ಪ್ರತ್ಯಾರೋಪಗಳು ನಡೆದವು.
ಧಾರವಾಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಸ್ಥಳಕ್ಕೆ ಬಂದು ಪ್ರತಿಭಟನಾನಿರತ ವಿದ್ಯಾರ್ಥಿಗಳ ಮನವೊಲಿಸಲು ಹರಸಾಹಸಪಟ್ಟರು. ಒಂದು ಹಂತದಲ್ಲಿ ತಾಳೆ ಕಳೆದುಕೊಂಡ ವಿದ್ಯಾರ್ಥಿಗಳು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಜೊತೆ ಭಾರೀ ಮಾತಿನ ಚಕಮಕಿ ನಡೆಸಿ ವಿದ್ಯಾರ್ಥಿಗಳನ್ನು ಬಂಧಿಸಿದರೆ ಸುಮನಿರುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು. ಈ ಹಂತದಲ್ಲಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ಸೇರಿದಂತೆ ಕೆಲವು ವಿದ್ಯಾರ್ಥಿಗಳನ್ನು ಬಂಧಿಸಲು ಮುಂದಾದಾಗ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ಸಾವಿರಾರು ವಿದ್ಯಾರ್ಥಿಗಳು ಜಮಾವಣೆಗೊಂಡಿದ್ದರಿಂದ ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಯಿತು.


