Homeಕರ್ನಾಟಕಶಕ್ತಿ ಯೋಜನೆ | ಮಹಿಳೆಯರಿಗೆ ಉಚಿತ ಸ್ಮಾರ್ಟ್ ವಿತರಣೆಗೆ ಕ್ರಮ: ಸಚಿವ ಬೈರತಿ ಸುರೇಶ್

ಶಕ್ತಿ ಯೋಜನೆ | ಮಹಿಳೆಯರಿಗೆ ಉಚಿತ ಸ್ಮಾರ್ಟ್ ವಿತರಣೆಗೆ ಕ್ರಮ: ಸಚಿವ ಬೈರತಿ ಸುರೇಶ್

ಶಕ್ತಿ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವ ಉದ್ದೇಶದಿಂದ ರಾಜ್ಯದ ಮಹಿಳೆಯರಿಗೆ ಸಾರಿಗೆ ನಿಗಮಗಳ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಸ್ಮಾರ್ಟ್ ಕಾರ್ಡ್ ಗಳನ್ನು ವಿತರಣೆ ಮಾಡಲು ನಿರ್ಧರಿಸಲಾಗಿದೆ ರಾಜ್ಯದ ನೂತನ ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದರು.

ವಿಧಾನಸೌಧದ ಕೊಠಡಿಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು, ಹಿತೈಷಿಗಳು, ಅಭಿಮಾನಿಗಳು ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದರು. ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಗೆ ಭೇಟಿ ನೀಡಿ ಕೆಎಸ್ಸಾರ್ಟಿಸಿ, ಬಿಎಂಟಿಸಿ, ಕೆಕೆಆರ್ ಟಿಸಿ ಮತ್ತು ವಾಯವ್ಯ ಸಾರಿಗೆ ನಿಗಮಗಳ ಮುಖ್ಯಸ್ಥರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಲಾಖೆಗಳ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ ಜನತೆಯ ಬದುಕು ಹಸನಾಗುವಂತೆ ಮಾಡಲಾಗಿದೆ. ಶಕ್ತಿ ಯೋಜನೆಯನ್ನು ಕೋಟ್ಯಂತರ ಮಹಿಳೆಯರು ಸದುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಯೋಜನೆ ಜಾರಿಯಾದ ಬಳಿಕ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ.40 ರಷ್ಟು ಹೆಚ್ಚಳವಾಗಿದೆ ಎಂದರು.

ರಾಜ್ಯದ ಮೂರು ಕೋಟಿಗೂ ಅಧಿಕ ಜನರಿಗೆ ಈ ಸ್ಮಾರ್ಟ್ ಕಾರ್ಡನ್ನು ವಿತರಿಸುವ ನಿರೀಕ್ಷೆಯಿದೆ. ಮಹಿಳೆಯರಿಗೆ ಉಚಿತವಾಗಿ ಸ್ಮಾರ್ಟ್ ಕಾರ್ಡ್ ಸಿಗಲಿದ್ದು, ಪುರುಷರು ಮೆಟ್ರೋ ಕಾರ್ಡ್ ರೀತಿಯಲ್ಲಿ ಹಣ ಪಾವತಿಸಿ ಸ್ಮಾರ್ಟ್ ಕಾರ್ಡನ್ನು ಪಡೆದುಕೊಳ್ಳಬಹುದಾಗಿದೆ. ಈ ಕಾರ್ಡನ್ನು ಅದರಲ್ಲಿ ಹಣ ಖಾಲಿಯಾದ ನಂತರ ರೀಚಾರ್ಜ್ ಮಾಡಬೇಕಾಗುತ್ತದೆ.
ಸುಮಾರು 3 ಕೋಟಿ ಸ್ಮಾರ್ಟ್ ಕಾರ್ಡುಗಳನ್ನು ವಿತರಿಸುವ ಅಗತ್ಯವಿರುವುದರಿಂದ ಸ್ಮಾರ್ಟ್ ಕಾರ್ಡ್ ಸಿದ್ಧಪಡಿಸಲು ಜಾಗತಿಕ ಟೆಂಡರ್ ಕರೆದು ಸದ್ಯದಲ್ಲಿಯೇ ಸ್ಮಾರ್ಟ್ ಕಾರ್ಡ್ ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಪೈಲಟ್ ಯೋಜನೆಯಡಿ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

1000 ಬಸ್ ಖರೀದಿ

ರಾಜ್ಯ ಸರ್ಕಾರದ ಅನುದಾನದಡಿಯಲ್ಲಿ 1000 ಸಾವಿರ ಬಸ್ ಗಳನ್ನು ಖರೀದಿಸಲಾಗುತ್ತದೆ. ಇದೇ ವೇಳೆ, ಕೇಂದ್ರ ಸರ್ಕಾರದ ಅನುದಾನದಲ್ಲಿ 4 ಸಾವಿರ ಎಲೆಕ್ಟ್ರಿಕ್ ಬಸ್ ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಹಂತಹಂತವಾಗಿ ಬಸ್ ಗಳನ್ನು ಖರೀದಿಸಿ ನಾಲ್ಕೂ ನಿಗಮಗಳಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ಬೈರತಿ ಸುರೇಶ್ ಹೇಳಿದರು.

ನಿರ್ಭಯಕ್ಕೆ ಹೆಚ್ಚು ಆದ್ಯತೆ

ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಸುರಕ್ಷತೆಗೆ ಆದ್ಯತೆಯನ್ನು ನೀಡಲಾಗುತ್ತಿದೆ. ಖಾಸಗಿ ಪ್ರಯಾಣಿಕರ ವಾಹನಗಳು ಅಂದರೆ, ವಾಣಿಜ್ಯ ಕಾರುಗಳು, ಟ್ಯಾಕ್ಸಿಗಳು ಸೇರಿದಂತೆ ಇನ್ನಿತರೆ ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಅಳವಡಿಕೆಯನ್ನು ಕ್ಷಿಪ್ರಗತಿಯಲ್ಲಿ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದುವರೆಗೆ 1 ಲಕ್ಷಕ್ಕೂ ಅಧಿಕ ವಾಹನಗಳಿಗೆ ಈ ವ್ಯವಸ್ಥೆಯನ್ನು ಅಳವಡಿಸಲಾಗಿದ್ದು, ಇನ್ನುಳಿದ 4-5 ಲಕ್ಷ ವಾಹನಗಳಿಗೆ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಅಳವಡಿಸಬೇಕೆಂದು ಅಧಿಕಾರಿಗಳಿಗೆ ಆದೇಶ ನೀಡಿದರು.

ಸಭೆಯಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಆಯುಕ್ತ ಸೆಲ್ವಮಣಿ ಸೇರಿದಂತೆ ನಾಲ್ಕೂ ನಿಗಮಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments