ರಾಜ್ಯದ ಜನರ ಸಂಕಷ್ಟಕ್ಕಿಂತ ಬಿಜೆಪಿ ಶಾಸಕರಿಗೆ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು ನಾಚಿಕೆಗೇಡು ಎಂದು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಕಿಡಿಕಾರಿದರು.
ಕಲಾಪಕ್ಕೆ ಅಡ್ಡಿ ಪಡಿಸುತ್ತಿರುವ ಬಿಜೆಪಿ ಧೋರಣೆ ಖಂಡಿಸಿ ಇಂದು ಕಾಂಗ್ರೆಸ್ ನಾಯಕರು ವಿಧಾನಸೌಧ ಆವರಣದಲ್ಲಿನ ಗಾಂಧೀಜಿ ಪ್ರತಿಮೆ ಮುಂದೆ ಹರಿಪ್ರಸಾದ್ ನೇತೃತ್ವದಲ್ಲಿ ಪ್ರತಿಭಟಿಸಿದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರದ ಬವಣೆ ಹೆಚ್ಚಾಗಿದೆ, ಜನ ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಅವಾಂತರಗಳನ್ನೇ ಸೃಷ್ಟಿಮಾಡಿದೆ. ಜವಾಬ್ದಾರಿಯುತ ವಿರೋಧ ಪಕ್ಷಗಳು ಸದನದಲ್ಲಿ ಈ ಕುರಿತು ಚರ್ಚೆ ನಡೆಸುವ ಬದಲು, ಸದನವೇ ನಡೆಯದಂತೆ ಗದ್ದಲ ನಡೆಸಿ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಹರಿಪ್ರಸಾದ್ ಕಿಡಿಕಾರಿದರು.
ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ನ್ಯಾಯಯುತ ಪಾಲನ್ನು ಸದನದಲ್ಲಿ ಚರ್ಚೆ ನಡೆಸಬೇಕಾಗುತ್ತದೆ ಎಂಬ ಉದ್ದೇಶದಿಂದ ಬರ ಕುರಿತು ಚರ್ಚೆ ನಡೆಸದೆ ಬಿಜೆಪಿ ಶಾಸಕರು ಪಲಾಯನ ಮಾಡುತ್ತಿರುವುದು ಸ್ಪಷ್ಟವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರನ್ನು ರಕ್ಷಿಸಲು ನಡೆಯುತ್ತಿರುವ ನಾಟಕೀಯ ಬೆಳವಣಿಗೆಯನ್ನು ರಾಜ್ಯದ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹರಿಹಾಯ್ದರು.
ರಾಜ್ಯದ ಜನರ ಸಮಸ್ಯೆಗಳನ್ನು ಚರ್ಚೆ ನಡೆಸಲು ಯೋಗ್ಯತೆ ಇಲ್ಲದ ವಿರೋಧ ಪಕ್ಷವನ್ನು ಜನರು ಕ್ಷಮಿಸುವುದಿಲ್ಲ. ತಕ್ಕ ಪಾಠ ಕಲಿಸುತ್ತಾರೆ ಎಂದು ಹರಿಪ್ರಸಾದ್ ಎಚ್ಚರಿಸಿದರು.


