Homeಕರ್ನಾಟಕಗ್ರಾಮೀಣ ಜಲ ಸಂಪನ್ಮೂಲಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್: ಈಶ್ವರ ಖಂಡ್ರೆ

ಗ್ರಾಮೀಣ ಜಲ ಸಂಪನ್ಮೂಲಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್: ಈಶ್ವರ ಖಂಡ್ರೆ

ಗ್ರಾಮೀಣ ಜಲ ಸಂಪನ್ಮೂಲ ನಿರ್ವಹಣೆ : ಮೊಬೈಲ್, ವೆಬ್ ಆಪ್ ಲೋಕಾರ್ಪಣೆ

ಗ್ರಾಮೀಣ ಜಲ ಸಂಪನ್ಮೂಲಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ ವ್ಯವಸ್ಥೆ (ಜಿಐಎಸ್) ಆಧಾರಿತ ಮೊಬೈಲ್ ಮತ್ತು ವೆಬ್ ಅಪ್ಲಿಕೇಷನ್ ಅನುಷ್ಠಾನಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.

ಗ್ರಾಮೀಣ ನೀರು ಸರಬರಾಜು ಮತ್ತು ಮೂಲಸೌಕರ್ಯದ ಸುಸ್ಥಿರ ಮತ್ತು ವೈಜ್ಞಾನಿಕ ನಿರ್ವಹಣೆಗಾಗಿ ಸಿದ್ಧಪಡಿಸಲಾಗಿರುವ ಮೊಬೈಲ್ ಮತ್ತು ವೆಬ್ ಅಪ್ಲಿಕೆಷನ್ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಎಲ್ಲ ಗ್ರಾಮೀಣ ಆಸ್ತಿಗಳನ್ನೂ ಜಿಯೋ ಟ್ಯಾಗ್ ಮಾಡಿ ಪಾರದರ್ಶಕತೆ ತರಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ 3 ಲಕ್ಷಕ್ಕಿಂತ ಹೆಚ್ಚು ಜಲ ಸಂಪನ್ಮೂಲಗಳಿದ್ದು ಇವೆಲ್ಲವನ್ನೂ ಸೆಪ್ಟೆಂಬರ್ ಅಂತ್ಯದೊಳಗೆ ಡಿಜಟಲೀಕರಣಗೊಳಿಸಲಾಗುವುದು. ಈಗಾಗಲೇ ಮೊದಲ ಹಂತದ ಪರಿಶೀಲನೆ ಅಡಿಯಲ್ಲಿ ಈವರೆಗೆ 70 ಸಾವಿರಕ್ಕೂ ಅಧಿಕ ಜಲ ಸ್ವತ್ತುಗಳ ದಾಖಲೀಕರಣ ಮಾಡಲಾಗಿದೆ ಎಂದರು.

ಈ ವ್ಯವಸ್ಥೆಯಡಿ 3 ಹಂತದ ಪರಿಶೀಲನೆ ನಡೆಯಲಿದ್ದು, ಮೊದಲ ಹಂತದಲ್ಲಿ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಮತ್ತು ಸಪೋರ್ಟ್ ಎಂಜಿನಿಯರ್ ಗಳು ನೂರಕ್ಕೆ 100ರಷ್ಟು ಜಲ ಆಸ್ತಿಯ ಖುದ್ದು ಪರಿಶೀಲನೆ ನಡೆಸಲಿದ್ದಾರೆ. 2ನೇ ಹಂತದಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಳು ಶೇ.5ರಷ್ಟು ಆಸ್ತಿಯ ಯಾದೃಚ್ಛಿಕ (Random) ಪರಿಶೀಲನೆ ಮಾಡುತ್ತಾರೆ. ಈ ಹಂತದಲ್ಲಿ ಲೋಪ ಕಂಡು ಬಂದಲ್ಲಿ ಸಂಬಂಧಿತ ಗುತ್ತಿಗೆದಾರರು, ಎಂಜಿನಿಯರುಗಳನ್ನು ಹೊಣೆ ಮಾಡಲಾಗುವುದು. ಮೂರನೇ ಹಂತದಲ್ಲಿ ಕಾರ್ಯಪಾಲಕ ಎಂಜಿನಿಯರ್ ಶೇ.2ರಷ್ಟು ಆಸ್ತಿಯ ಯಾದೃಚ್ಛಿಕ ಪರಿಶೀಲನೆ ನಡೆಸುತ್ತಾರೆ. 3 ಹಂತದ ತಪಾಸಣೆ ನಡೆಯುವ ಕಾರಣ ಗುತ್ತಿಗೆದಾರರಿಗೆ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಅನುಷ್ಠಾನ ಮಾಡುವ ಕೆಳ ಹಂತದ ಅಧಿಕಾರಿಗಳಲ್ಲಿ ಹೊಣೆಗಾರಿಕೆ ಹೆಚ್ಚುತ್ತದೆ ಮತ್ತು ಇದು ಪಾರದರ್ಶಕತೆ ತರಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕರ್ನಾಟಕ ದೂರ ಸಂವೇದಿ ಆನ್ವಯಿಕ ಕೇಂದ್ರ (KSRSAC) ಸಹಯೋಗದಲ್ಲಿ ಈ ಮೊಬೈಲ್ ಮತ್ತು ವೆಬ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ ಎಂದು ತಿಳಿಸಿದ ಈಶ್ವರ ಖಂಡ್ರೆ, ಇದು ಎಲ್ಲ ಕಾಮಗಾರಿ ಮತ್ತು ಜಲ ಸಂಪನ್ಮೂಲಗಳನ್ನು 5 ಮೀಟರ್ ನಿಖರತೆಯೊಂದಿಗೆ ಜಿಯೋ ಟ್ಯಾಗ್ ಮಾಡಲು ನೆರವಾಗುವುದು. ಇದರಿಂದ ಕಾಮಗಾರಿಯನ್ನೇ ಮಾಡದೆ ನಕಲಿ ಬಿಲ್ ಮಾಡಲು ಅವಕಾಶ ಇರುವುದಿಲ್ಲ ಮತ್ತು ಸೃಜಿಸಲಾದ ಆಸ್ತಿಯ ಗುಣಮಟ್ಟದ ಪರೀಕ್ಷೆಗೂ ಸಹಕಾರಿಯಾಗುತ್ತದೆ. ಎಲ್ಲ ಜಲ ಆಸ್ತಿಗಳ ಮೂಲ ಮಾಹಿತಿ, ಅವುಗಳ ಭೌತಿಕ ಸ್ಥಿತಿ, ಕಾರ್ಯಾಚರಣೆ ಮತ್ತು ನಿರ್ವಹಣೆಯ ಸ್ಥಿತಿಗತಿ ಈ ಆಪ್ ನಲ್ಲಿ ದಾಖಲಾಗುವ ಕಾರಣ ಸರ್ಕಾರದ ಯೋಜನೆ ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಈ ಆಪ್ ನಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಕೊರೆಸಲಾಗುವ ಬೋರ್ ವೆಲ್, ನಿರ್ಮಿಸಲಾಗುವ ಓವರ್ ಹೆಡ್ ಟ್ಯಾಂಕ್, ತೆರೆದ ಬಾವಿ, ಪಂಪ್ ಹೌಸ್, ಜಲ ಶುದ್ಧೀಕರಣ ಘಟಕ, ಸಮತೋಲಿತ ಕೆರೆಗಳು, ಸರೋವರ, ಪ್ರಯೋಗಾಲಯ, ಕೈ ಪಂಪ್ ಇತ್ಯಾದಿಗಳನ್ನು ಕಡ್ಡಾಯವಾಗಿ ಜಿಯೋ ಟ್ಯಾಗ್ ಮಾಡಲು ಸೂಚಿಸಲಾಗಿದೆ.
ಈಗಾಗಲೇ ಗ್ರಾಮೀಣ ಭಾಗದಲ್ಲಿ ಸೃಜಿಸಲಾಗಿರುವ ಎಲ್ಲ ಕುಡಿಯುವ ನೀರಿನ ಆಸ್ತಿಗಳನ್ನು ಮೊದಲಿಗೆ ಜಿಯೋ ಟ್ಯಾಗ್ ಮಾಡಿ ದಾಖಲೀಕರಣ ಮಾಡಬೇಕು. ನಂತರ ಹೊಸ ಮತ್ತು ಪ್ರಗತಿಯಲ್ಲಿರುವ ಕಾಮಗಾರಿಗಳ ಜಿಯೋ ಟ್ಯಾಗ್ ಮಾಡಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದರು.

ಇದರ ಜೊತೆಗೆ ಕೊಳವೆ ಬಾವಿ ಕೊರೆದಿರುವ ಬಗ್ಗೆ ಜಿಯೋ ಟ್ಯಾಗ್ ಮಾಡುವ ಕಾರಣ ಮೂರನೇ ವ್ಯಕ್ತಿಯಿಂದ ತಪಾಸಣೆ ಮಾಡಿಸಿದಾಗ ಎಷ್ಟು ಅಡಿ ಕೊಳವೆ ಬಾವಿ ಕೊರೆದಿದ್ದಾರೆ, ಎಷ್ಟು ಆಳಕ್ಕೆ ಪೈಪ್ ಅಳವಡಿಸಿದ್ದಾರೆ. ಎಷ್ಟು ಎಚ್.ಪಿ. ಮೋಟರ್ ಅಳವಡಿಸಿದ್ದಾರೆ ಎಂಬ ಎಲ್ಲ ಮಾಹಿತಿ ಜಿಯೋ ಟ್ಯಾಗ್ ಆಗಿ ದಾಖಲಾಗುವ ಕಾರಣ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬಹುದು ಎಂದೂ ಹೇಳಿದರು.

ಇಲಾಖೆಯಲ್ಲಿ ಪಾರದರ್ಶಕತೆ ತರುವ ಮೂಲಕ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳನ್ನು ಹೆಚ್ಚು ಜನಸ್ನೇಹಿಯಾಗಿ ಮಾಡುವುದು ಇಲಾಖೆಯ ಉದ್ದೇಶವಾಗಿದ್ದು, ಈ ಹೊಸ ಆಪ್ ಬಗ್ಗೆ ಸಂಬಂಧಿತ ಅಧಿಕಾರಿಗಳಿಗೆ ತರಬೇತಿಯನ್ನು ಕೊಡಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಬತ್ತಿ ಹೋಗಿರುವ ಕೊಳವೆ ಬಾವಿಗಳ ಮರು ಪೂರಣಕ್ಕೆ ವಿಬಿಜಿ ರಾಮ್ ಜಿ ಅಡಿಯಲ್ಲಿ ಕ್ರಮ ವಹಿಸಲು ಸೂಚಿಸಲಾಗಿದೆ. 7700 ಕೊಳವೆ ಬಾವಿಗಳನ್ನು ಈವರೆಗೆ ಮರು ಪೂರಣ ಮಾಡಲಾಗಿದೆ. ರಾಜ್ಯದಲ್ಲಿ ಸರ್ಕಾರದ ವತಿಯಿಂದ ಎಷ್ಟು ಕೊಳವೆ ಬಾವಿ ಕೊರೆಯಲಾಗಿದೆ. ಎಷ್ಟು ನಿಷ್ಕ್ರಿಯವಾಗಿದೆ. ಎಷ್ಟು ಮರುಪೂರಣಕ್ಕೆ ಅರ್ಹವಾಗಿವೆ ಎಂಬ ಮಾಹಿತಿ ಕಲೆಹಾಕಿ, ಕಾರ್ಯಸಾಧ್ಯವಾದ ಕೊಳವೆ ಬಾವಿಗಳ ಮರುಪೂರಣಕ್ಕೆ ಸೂಚನೆ ನೀಡಲಾಗಿದೆ ಎಂದರು.

ಮಹಾತ್ಮಾ ಗಾಂಧೀ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 187 ಕೋಟಿ ಮಾನವ ದಿನ ಸೃಜನೆ ಮಾಡಲಾಗಿತ್ತು. ಆಗ ಕೇಂದ್ರ ಸರ್ಕಾರ ಶೇ.90ರಷ್ಟು ರಾಜ್ಯ ಸರ್ಕಾರ ಶೇ.10ರಷ್ಟು ಭರಿಸುತ್ತಿತ್ತು. ಈಗ ಶೇ. 40ರಷ್ಟು ಹಣವನ್ನು ರಾಜ್ಯ ಸರ್ಕಾರವೇ ಭರಿಸಬೇಕಾಗಿದೆ. ಈಗ ಪೂರಕ ಅಂದಾಜಿನಲ್ಲಿ 3800 ಕೋಟಿ ರೂ. ನೀಡಲಾಗಿದೆ ಕೇಂದ್ರ ಸರ್ಕಾರದಿಂದ 5709 ಕೋಟಿ ರೂ. ಬರಲಿದ್ದು, ಯಾರೊಬ್ಬರೂ ಗುಳೆ ಹೋಗದಂತೆ ಗ್ರಾಮೀಣ ಜನರಿಗೆ ಉದ್ಯೋಗ ನೀಡಲು ಕ್ರಮ ವಹಿಸಲಾಗಿದೆ. ಆರಂಭದಲ್ಲಿ 50ಸಾವಿರ ಮಾನವ ದಿನ ಸೃಜನೆಯಾಗಿತ್ತು. ಈಗ 3ಲಕ್ಷಕ್ಕೂ ಅಧಿಕೂ ಮಾನವ ದಿನ ಸೃಜನೆಯಾಗುತ್ತಿದೆ. ಜುಲೈ 1ರಿಂದ ಇಲ್ಲಿಯವರೆಗೆ 74ಲಕ್ಷ 77 ಸಾವಿರ ಮಾನವ ದಿನ ಸೃಜನೆಯಾಗಿದೆ. ಪ್ರತಿ ನಿತ್ಯ 5 ಲಕ್ಷ ಮಾನವ ದಿನ ನಮ್ಮ ಗುರಿಯಾಗಿದೆ ಎಂದರು.

ಕುಡಿಯುವ ನೀರಿಗೆ ಹಣಕಾಸಿನ ಕೊರತೆ ಇಲ್ಲ. ಈಗಾಗಲೇ 117 ಕೋಟಿ ರೂ.ಗಳನ್ನು ಮುಂಗಡವಾಗಿ ಪೂರೈಸಲಾಗಿದೆ. ಇದರ ಜೊತೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳು 1 ಕೋಟಿ ರೂ. ಗಳನ್ನು ಕುಡಿಯುವ ನೀರಿಗೆ ಬಿಡುಗಡೆ ಮಾಡಿದ್ದು, ಈ ಹಣವೂ ಲಭ್ಯವಿದೆ. ಕುಡಿಯುವ ನೀರು ಲಭ್ಯವಿಲ್ಲದ ಕಡೆ ಖಾಸಗಿ ಬೋರ್ ವೆಲ್ ಬಾಡಿಗೆಗೆ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ. ಸಹಾಯವಾಣಿ ಎಲ್ಲ ಜಿಲ್ಲೆಯಲ್ಲೂ ಕಾರ್ಯ ನಿರ್ವಹಿಸುತ್ತಿದ್ದು, ತಕ್ಷಣ ಸ್ಪಂದಿಸಲಾಗುತ್ತಿದೆ ಎಂದರು.

ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲ, ಕರ್ನಾಟಕ ದೂರ ಸಂವೇದಿ ಆನ್ವಯಿಕ ಕೇಂದ್ರ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments