ಹಾಸನ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ ಈ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲಿದ್ದು, ರಾಜ್ಯದಲ್ಲಿ 20 ಕ್ಷೇತ್ರಗಳನ್ನು ನಾವು ಗೆಲುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಮಂಡ್ಯದಲ್ಲಿ ನಡೆದ ಪ್ರಜಾಧ್ವನಿ 2 ಯಾತ್ರೆಯಲ್ಲಿ ಅವರು ಮಾತನಾಡಿ, “ಜೆಡಿಎಸ್ ಅಭ್ಯರ್ಥಿಗೆ ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ. ಸ್ಪರ್ಧೆ ಮಾಡಲು ನಿಮ್ಮ ಬಳಿ ಬೇರೆ ಜನ ಇರಲಿಲ್ಲವೇ? ನಿಮ್ಮನ್ನು ಶಾಸಕ, ಮುಖ್ಯಮಂತ್ರಿ ಮಾಡಿದ ಜನರಿಗೆ ಅವಕಾಶ ನೀಡಬಹುದಿತ್ತಲ್ಲವೇ? ನಿಮ್ಮನ್ನು ಆರಿಸಿ ಕಳುಹಿಸಿದ ಜನರ ಕಿವಿ ಮೇಲೆ ಹೂವ ಇಟ್ಟು ಈಗ ಈ ಮಂಡ್ಯ ಜನರನ್ನು ಯಾಮಾರಿಸಲು ಬಂದಿದ್ದೀರಾ?” ಎಂದು ಕುಮಾರಸ್ವಾಮಿ ಅವರನ್ನು ಕುಟುಕಿದರು.
“ಈ ಮಣ್ಣಿನ ಮಹಿಳೆಯರು ತಮ್ಮ ಸ್ವಾಭಿಮಾನಕ್ಕಾಗಿ ಹೋರಾಟ ಮಾಡಿದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆಗಳು. ನಿಮಗೆ ಅಪಮಾನ ಮಾಡಿದವರನ್ನು ಗೋಬ್ಯಾಕ್ ಎಂದು ಹೇಳಿದ್ದೀರಿ. ಅವರನ್ನು ಕೇವಲ ಮಂಡ್ಯದಿಂದ ಮಾತ್ರವಲ್ಲ, ರಾಜ್ಯದಿಂದಲೇ ಗೋಬ್ಯಾಕ್ ಮಾಡಿ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಈ ತಾಯಂದಿರು ದಾರಿತಪ್ಪುತ್ತಿದ್ದಾರೆ ಎಂದು ಹೇಳಿದವರಿಗೆ ನೀವು ಧಿಕ್ಕಾರ ಕೂಗಿದ್ದೀರ. ನಿಮ್ಮ ಶೌರ್ಯ ಹಾಗೂ ಶಕ್ತಿಗೆ ನಮಿಸುತ್ತೇನೆ. ನೀವು ಹಳ್ಳಿ ಹಳ್ಳಿಗೆ ಹೋಗಿ ಪ್ರಚಾರ ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಬೇಕು” ಎಂದು ಮನವಿ ಮಾಡಿದರು.
“ಸಾವಿರಾರು ಮಂದಿ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಮಂಡ್ಯದ ಎಲ್ಲಾ ಶಾಸಕರು, ನಾಯಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ ಎಂದು ಹೇಳಿದ್ದಾನೆ. ಅಂದರೆ ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ. ಮಿಸ್ಟರ್ ಯಡಿಯೂರಪ್ಪ, ಮಿಸ್ಟರ್ ವಿಜಯೇಂದ್ರ ನಮ್ಮ ಕಾಂಗ್ರೆಸ್ ಗ್ಯಾರಂಟಿ ಜನರ ಬದುಕಿನ ಭಾಗ. ಇದನ್ನು ಸ್ಥಗಿತಗೊಳಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ” ಎಂದರು.
“ಇದು ಐತಿಹಾಸಿಕ ಸಭೆ. ಭಾರತ ಜೋಡೋ ಯಾತ್ರೆ ಮೂಲಕ ರಾಜ್ಯದಲ್ಲಿ ರಾಹುಲ್ ಗಾಂಧಿ ಅವರು ಚಾಮರಾಜನಗರದಿಂದ ರಾಯಚೂರಿನವರೆಗೂ ಹೆಜ್ಜೆ ಹಾಕಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಆಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅವರ ಕಾಲ್ಗುಣ ಶಕ್ತಿಶಾಲಿಯಾಗಿದೆ” ಎಂದು ಹೇಳಿದರು.
“ರಾಹುಲ್ ಗಾಂಧಿ ಅವರು ಭಾರತದಲ್ಲಿ ನ್ಯಾಯ ಯಾತ್ರೆ ಮಾಡಿದ್ದಾರೆ. ಈಗ ಮಂಡ್ಯದಲ್ಲಿ ನಿಮ್ಮ ಸೇವೆ ಮಾಡಲು ಮಂಡ್ಯದವರಿಗೇ ಸ್ಥಳಿಯರಿಗೆ, ಉದ್ಯಮಿಗೆ, ರೈತನ ಮಗ ವೆಂಕಟರಮಣೇಗೌಡ ಅವರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಇಲ್ಲಿ ಕೇವಲ ಸ್ಟಾರ್ ಚಂದ್ರು ಅವರು ಮಾತ್ರ ಅಭ್ಯರ್ಥಿಯಲ್ಲ. ಇಲ್ಲಿ ಈ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಅಭ್ಯರ್ಥಿಯೇ” ಎಂದು ಮಾರ್ಮಿಕವಾಗಿ ಮಾತನಾಡಿದರು.