Homeಕರ್ನಾಟಕಪ್ರಜ್ವಲ್‌ - ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ | ಪ್ರಜ್ಞಾವಂತ ನಾಗರಿಕರಿಂದ ಮುಖ್ಯಮಂತ್ರಿಗೆ ಬಹಿರಂಗ ಪತ್ರ

ಪ್ರಜ್ವಲ್‌ – ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ | ಪ್ರಜ್ಞಾವಂತ ನಾಗರಿಕರಿಂದ ಮುಖ್ಯಮಂತ್ರಿಗೆ ಬಹಿರಂಗ ಪತ್ರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ‌ ಮತ್ತು ಅವನ ತಂದೆ ಹಾಗೂ ಶಾಸಕ ಎಚ್ ಡಿ ರೇವಣ್ಣ ನಡೆಸಿದ್ದಾರೆನ್ನಲಾದ ವಿಕೃತ ಲೈಂಗಿಕ ಸಮೂಹ ಅತ್ಯಾಚಾರ ಹಗರಣವು ಅತ್ಯಂತ ಹೇಯವೂ, ನಾಗರಿಕ ಸಮಾಜ ತಲೆತಗ್ಗಿಸುವಂತಹುದೂ ಆಗಿದೆ. ಕೂಡಲೇ ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪ್ರಜಾಪ್ರಭುತ್ವದ ಉಳಿವಿಗೆ, ಪಿತೃಪ್ರಧಾನ ಸಮಾಜದ ನಿರ್ಮೂಲನೆಗೆ ಹಾಗೂ ಸಂವಿಧಾನದತ್ತವಾದ ಮಹಿಳೆಯರ ಘನತೆಯನ್ನು ಎತ್ತಿ ಹಿಡಿಯಬೇಕು ಎಂದು ಆಗ್ರಹದೊಂದಿಗೆ ಪ್ರಜ್ಞಾವಂತ ನಾಗರಿಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಚಳವಳಿ ಆರಂಭಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಕಚೇರಿ ಹಾಗೂ ಗೃಹ ಕಚೇರಿ ಇ-ಮೇಲ್‌ ವಿಳಾಸದೊಂದಿಗೆ ಬಹಿರಂಗ ಪತ್ರ ಹರಿದಾಡುತ್ತಿದ್ದು, ಪ್ರಜ್ಞಾವಂತ ನಾಗರಿಕರು ಕೆಲವು ಆಗ್ರಹಗಳನ್ನು ಮುಖ್ಯಮಂತ್ರಿಗಳ ಮುಂದಿಟ್ಟಿದ್ದಾರೆ.

ಪತ್ರದ ಸಾರಾಂಶ ಇಲ್ಲಿದೆ..

ಮಾನ್ಯರೇ,

ಜಗತ್ತಿನಲ್ಲಿ ಹಿಂದೆಂದೂ ಕೇಳರಿಯದಂತಹ ಈ ಹಗರಣವನ್ನು ರಾಜಕೀಯ ಪಕ್ಷಗಳು ಮತ್ತು ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗೆ, ಚುನಾವಣೆಯ ಲಾಭಕ್ಕಾಗಿ ಬಳಸುತ್ತಿರುವುದು ಆಘಾತಕಾರಿಯಾಗಿದೆ. ರಾಜಕೀಯ ಶಕ್ತಿಗಳ ಈ ಬೇಜವಾಬ್ದಾರಿ ನಡವಳಿಕೆಯು ಮೂಲ ಅಪರಾಧ ಮತ್ತು ಅದರಿಂದ ಆಗಲಿರುವ ಪರಿಣಾಮಗಳನ್ನು ಗೌಣ ಮಾಡುತ್ತಿದೆ.

ಪ್ರಜ್ವಲ್ ರೇವಣ್ಣನ ತಾತ, ತಂದೆ, ತಾಯಿ, ಅಣ್ಣ, ಚಿಕ್ಕಪ್ಪ, ಚಿಕ್ಕಮ್ಮ ಇವರುಗಳು ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ಸಂಪುಟ ದರ್ಜೆ ಸಚಿವರು, ರಾಜ್ಯಸಭೆ, ಲೋಕಸಭೆ, ವಿಧಾನ ಸಭೆ, ವಿಧಾನ ಪರಿಷತ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯತ್ವ- ಹೀಗೆ ಪ್ರಜಾಪ್ರಭುತ್ವದ ಎಲ್ಲ ಹುದ್ದೆಗಳನ್ನು, ಸರ್ಕಾರದ ಎಲ್ಲ ಸವಲತ್ತುಗಳನ್ನು ಬಳಸಿಕೊಳ್ಳುತ್ತಾ ಬಂದಿದ್ದಾರೆ. ರಾಜ್ಯದಲ್ಲೇ ಇಂತಹ ಮತ್ತೊಂದು ರಾಜಕೀಯ ಕುಟುಂಬ ಇರಲಿಕ್ಕಿಲ್ಲ. ಇಂಥಹ ಕುಟುಂಬದ ಈ ಹಗರಣವು ನಮ್ಮನ್ನು 19ನೇ ಶತಮಾನದ ಊಳಿಗಮಾನ್ಯ, ಪಾಳೇಗಾರಿ, ಮಹಿಳಾ ವಿರೋಧಿ, ಪಿತೃಪ್ರಧಾನ ಸಮಾಜದ ದಿನಗಳಿಗೆ ಕೊಂಡೊಯ್ಯುತ್ತದೆ. ಈ ಕುರಿತು ಬರುತ್ತಿರುವ ತಳಮೂಲದ ಮಾಧ್ಯಮ ವರದಿಗಳು ಎಚ್. ಡಿ. ರೇವಣ್ಣ, ಪ್ರಜ್ವಲ್ ರೇವಣ್ಣ ಮತ್ತು ಅವರ ಕುಟುಂಬಸ್ಥರು ಪ್ರಜಾಪ್ರಭುತ್ವದ ಮುಸುಕಿನೊಳಗೆ, ಪ್ರಜಾಪ್ರತಿನಿಧಿಗಳೆಂಬ ಧಿರಿಸು ಧರಿಸಿ ನಡೆಸಿರುವ ಪಾಳೇಗಾರಿ ಆಡಳಿತದ ವಿವರಗಳನ್ನು ಬಯಲು ಮಾಡುತ್ತಿವೆ.

ಈ ಹಗರಣ ಬಯಲಾದ ಕೂಡಲೆ ಹಾಸನ ಕ್ಷೇತ್ರದ ಚುನಾವಣೆಯನ್ನು ಸ್ಥಗಿತಗೊಳಿಸದೆ ಆರೋಪಿಯು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಒದಗಿಸಿದ್ದು ಪ್ರಜಾಪ್ರಭುತ್ವ ಪ್ರಕ್ರಿಯೆಗೆ ಮಾಡಿದ ಅಪಚಾರವಾಗಿದೆ. ಹಗರಣ ಬಯಲಾದರೂ ಐದು ದಿನಗಳು (ಏಪ್ರಿಲ್ 22ರಿಂದ 26, 2024) ಆರೋಪಿಯು ಸ್ವತಂತ್ರವಾಗಿ ಇರಲು ಬಿಟ್ಟಿದ್ದು, ಅವನ ಚಲನವಲನದ ಮೇಲೆ ಕಣ್ಗಾವಲು ಹಾಕದೆ ಇದ್ದಿದ್ದು ನೋಡಿದರೆ ಈ ಸಮಾಜದಲ್ಲಿ ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮಹಿಳೆಯರು ಸುರಕ್ಷಿತವಾಗಿ ಇರಲು ಸಾಧ್ಯವೇ ಎಂಬ ಪ್ರಶ್ನೆ ಹುಟ್ಟು ಹಾಕಿದೆ.

ಈ ಎಲ್ಲ ಸಂಗತಿಗಳ ಹಿನ್ನೆಲೆಯಲ್ಲಿ ಈ ನಾಡಿನ ಜವಾಬ್ದಾರಿಯುತ ನಾಗರಿಕರಾದ ನಾವು ಈ ಕೆಳಗಿನ ಬೇಡಿಕೆಗಳನ್ನು ಆಗ್ರಹಪೂರ್ವಕವಾಗಿ ಮಂಡಿಸುತ್ತಿದ್ದೇವೆ.

  1. ಆರೋಪಿ ಪ್ರಜ್ವಲ್ ರೇವಣ್ಣ ಎಲ್ಲಿದ್ದರೂ ಪತ್ತೆಮಾಡಿ ಈ ಕೂಡಲೇ ಬಂಧಿಸಬೇಕು. ಐಟಿ ಕಾಯಿದೆ, ಐಪಿಸಿ ಹಾಗೂ ಯುಎಪಿಎ ಕಾಯಿದೆಗಳ ಅಡಿಯಲ್ಲಿ ಮೊಕದ್ದಮೆ ಹೂಡಬೇಕು.
  2. ಸಂತ್ರಸ್ತ ಮಹಿಳೆಯರು ಭೀತಿ ಇಲ್ಲದೆ ದೂರು ನೀಡುವಂತಹ ವಾತಾವರಣ ನಿರ್ಮಾಣ ಮಾಡಬೇಕು. ರಾಜ್ಯದ ಮುಖ್ಯಸ್ಥರಾಗಿ ತಾವು ಸಂತ್ರಸ್ತ ಮಹಿಳೆಯರನ್ನು ಉದ್ದೇಶಿಸಿ ಧೈರ್ಯ ತುಂಬುವ ಮಾತುಗಳನ್ನು ಹೇಳಬೇಕು. ಸಂತ್ರಸ್ತರಿಗೆ ತೊಂದರೆ ಕೊಡುವ, ದೂರು ನೀಡದಂತೆ ತಡೆಯೊಡ್ಡುವ, ದೂರು ಹಿಂತೆಗೆದುಕೊಳ್ಳುವಂತೆ ಒತ್ತಡ ತರುವ, ಸಂತ್ರಸ್ತರ ಕುರಿತು ಅವಹೇಳನ-ಅಪಪ್ರಚಾರ ಮಾಡುವ, ಸಂತ್ರಸ್ತರ ಮಕ್ಕಳು ಹಾಗೂ ಕುಟುಂಬದವರಿಗೆ ತೊಂದರೆ ನೀಡುವ ಯಾರದೇ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಾವು ಮಾಧ್ಯಮಗಳ ಮೂಲಕ ಪ್ರಕಟಣೆ ನೀಡಬೇಕು. ಈ ಭರವಸೆ ತುಂಬುವ ಹೇಳಿಕೆಯನ್ನು ವಿಡಿಯೋ ಮೂಲಕವೂ ಬಿಡುಗಡೆ ಮಾಡಬೇಕು.
  3. ಹಗರಣ ಕುರಿತು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿರುವ ರಾಜಕೀಯ ನಾಯಕರ ನಡವಳಿಕೆಗೆ ನೀವು ಕಡಿವಾಣ ಹಾಕಬೇಕು. ಹಗರಣವನ್ನು ಗಂಭೀರವಾಗಿ ಪರಿಗಣಿಸಿ, ಸಮರ್ಥ ತನಿಖೆಗೆ ಅವಕಾಶ ಮಾಡಿಕೊಡುವಂತೆ ರಾಜಕೀಯ ನಾಯಕರಿಗೆ ಸೂಚನೆ ನೀಡಬೇಕು.
  4. ಎಸ್‌ಐಟಿ ತನಿಖೆಯು ಕಾಯಿದೆಯ ಅನುಸಾರ ಕಾಲಮಿತಿಯೊಳಗೆ ನಡೆಯಬೇಕು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 173ಕ್ಕೆ 2018ರಲ್ಲಿ ತಂದಿರುವ ತಿದ್ದುಪಡಿಯು ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಎರಡು ತಿಂಗಳ ಒಳಗೆ ಮುಗಿಸಬೇಕು ಎನ್ನುತ್ತದೆ. ಹಾಗೂ 60 ದಿನಗಳ ಒಳಗಾಗಿ ತನಿಖೆ ಮುಗಿಯದಿದ್ದಲ್ಲಿ ಆರೋಪಿಯ ಜಾಮೀನು ಪಡೆಯಲು ಅವಕಾಶ ಕಲ್ಪಿಸುತ್ತದೆ. ಹಾಗಾಗಿ ಕಾಲಮಿತಿಯ ತನಿಖೆಯನ್ನು ಪ್ರಕಟಿಸಬೇಕು.
  5. ಈ ಲೈಂಗಿಕ ಕೃತ್ಯಗಳ ಚಿತ್ರೀಕರಣದಲ್ಲಿ ಪ್ರಜ್ವಲ್ ಜೊತೆಗೆ ಭಾಗಿ ಆಗಿರಬಹುದಾದವರನ್ನು ಪತ್ತೆಮಾಡಿ ಮೊಕದ್ದಮೆ ಹೂಡಬೇಕು.
  6. ಈ ವಿಡಿಯೋಗಳು ತಮ್ಮ ಬಳಿ ಇದ್ದವೆಂದು ಹಲವಾರು ತಿಂಗಳುಗಳಿಂದ ಹೇಳುತ್ತಿರುವ ಪ್ರಜ್ವಲ್ ರೇವಣ್ಣನ ಕಾರು ಚಾಲಕ ಕಾರ್ತಿಕ್‌ನನ್ನು ಕೂಡಲೇ ಬಂಧಿಸಬೇಕು.
  7. ಈ ವಿಡಿಯೋಗಳು ತಮ್ಮ ಬಳಿ ಇದ್ದವೆಂದು ಹೇಳಿದ ಬಿಜೆಪಿ ನಾಯಕ ಬಿ. ದೇವರಾಜೇಗೌಡ ಮತ್ತು ಕಾರ್ತಿಕ್ ವಿರುದ್ದ ಈ ಕೆಳಗಿನ ಕೃತ್ಯಗಳಿಗಾಗಿ ಗಂಭೀರ ಪ್ರಕರಣಗಳನ್ನು ದಾಖಲಿಸಬೇಕು: (1) ಈ ಹಗರಣವನ್ನು ಮುಚ್ಚಿಟ್ಟಿದ್ದಕ್ಕೆ, (2) ಆರೋಪಿಯು ತಪ್ಪಿಸಿಕೊಳ್ಳಲು ಪರೋಕ್ಷವಾಗಿ ಅವಕಾಶ ಮಾಡಿಕೊಟ್ಟಿದ್ದಕ್ಕೆ, (3) ಕಾನೂನು ಪಾಲಕರ ಕೈತಪ್ಪಿಸಿ ವಿಡಿಯೋಗಳು ಸಮಾಜಘಾತುಕರ ಕೈಗೆ ಸಿಗುವಂತೆ ಮಾಡಿದಕ್ಕೆ, (4) ನೂರಾರು ಮಹಿಳೆಯರ ಮತ್ತು ಅವರ ಕುಟುಂಬದವರ ಬದುಕಿನ ಘನತೆಗೆ ಕುಂದು ತಂದಿರುವುದಕ್ಕೆ, (5) ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಕ್ಕೆ (6) ಚುನಾವಣೆಯ ಮೇಲೆ ಈ ಹಗರಣವು ಪ್ರತಿಕೂಲ ಪರಿಣಾಮ ಬೀರುವಂತೆ ಸಂಚು ರೂಪಿಸಿದ್ದಕ್ಕೆ ಸೂಕ್ತ ಕಾನೂನುಗಳ ಅಡಿಯಲ್ಲಿ ಮೊಕದ್ದಮೆ ಹೂಡಬೇಕು
  8. ವಿಡಿಯೋಗಳನ್ನು ಸಾರ್ವಜನಿಕರಿಗೆ ಹಂಚಿದವರ ವಿರುದ್ಧ ಮಾನವಹಕ್ಕುಗಳಿಗೆ ಧಕ್ಕೆ ತಂದಿರುವುದು, ಸಾಮಾಜಿಕ ಸ್ವಾಸ್ಥ್ಯವನ್ನು ಕದಡುವುದು, ಚುನಾವಣೆಯನ್ನು ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪದ ಮೇಲೆ ಮೊಕದ್ದಮೆ ಹೂಡಬೇಕು
  9. ವಿಡಿಯೋಗಳ ಕುರಿತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯ ಅಧ್ಯಕ್ಷರಿಗೆ ಬಿ.ದೇವರಾಜೇಗೌಡ ಬರೆದಿರುವುದಾಗಿ ಹೇಳುತ್ತಿರುವ ಪತ್ರಗಳನ್ನು ಆಧರಿಸಿ, ಆ ಇಬ್ಬರು ರಾಜಕೀಯ ನಾಯಕರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿಲ್ಲದೆ ಇರುವುದಕ್ಕೆ ಅವರುಗಳನ್ನೂ ಸಂಚಿನ ಭಾಗವಾಗಿ ಪರಿಗಣಿಸಬೇಕು.
  10. ಕೆಲವು ವಿಡಿಯೋಗಳು ಐದಾರು ವರ್ಷಗಳಷ್ಟು ಹಳೆಯವು ಎಂದು ಎಚ್ ಡಿ ರೇವಣ್ಣ ಹೇಳಿರುವುದು ವರದಿಯಾಗಿದೆ. ಅಷ್ಟು ವರ್ಷಗಳಿಂದ ನಡೆಯುತ್ತಿರುವ ಈ ಲೈಂಗಿಕ ವಿಕೃತಿಯನ್ನು ಮುಂದುವರೆಯಲು ಬಿಟ್ಟಿರುವುದರಿಂದ ಅವರ ಕುಟುಂಬದ ಎಲ್ಲ ಸದಸ್ಯರನ್ನು ಈ ಕೃತ್ಯದ accomplice ಗಳೆಂದು ಪರಿಗಣಿಸಿ ಅವರ ಮೇಲೆಯೂ ಮೊಕದ್ದಮೆ ಹೂಡಬೇಕು. ತಂದೆ ಮತ್ತು ಮಗ ಇಬ್ಬರೂ ಭಾಗಿಯಾಗಿರುವುದರಿಂದ ಪ್ರಜ್ವಲ್‌ನ ತಾಯಿಯನ್ನೂ ವಿಚಾರಣೆಗೆ ಗುರಿಪಡಿಸಬೇಕು. ಸಂತ್ರಸ್ತರು ಅತ್ಯಾಚಾರ ನಡೆದಿದೆ ಎಂದು ಹೇಳಲಾದ ಮನೆಗಳಲ್ಲಿ ಅರೋಪಿಯ ತಾಯಿಯೂ ನೆಲೆಸಿದ್ದು, ಈ ಕೃತ್ಯ ಮೇಲಿಂದ ಮೇಲೆ ನಡೆದಿರುವುದರಿಂದ ತಾಯಿಯನ್ನು accomplice ಮಾಡಬೇಕು.
  11. ಏಪ್ರಿಲ್ 22, 2024ರಂದು ವಿಡಿಯೋಗಳು ಬಹಿರಂಗವಾಗಿವೆ. ಏಪ್ರಿಲ್ 25ಕ್ಕೆ ರಾಜ್ಯ ಮಹಿಳಾ ಆಯೋಗವು ತನಿಖೆಗೆ ಶಿಫಾರಸ್ಸು ಮಾಡಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಆದರೂ ಏಪ್ರಿಲ್ 27ರಂದು ಆರೋಪಿಯು ದೇಶ ಬಿಟ್ಟು ಪರಾರಿಯಾಗಿರುವುದು ಗೃಹ ಇಲಾಖೆಯ ಮತ್ತು ಇಂಟೆಲಿಜೆನ್ಸ್ ವಿಭಾಗದ ವೈಫಲ್ಯವನ್ನು ತೋರಿಸುತ್ತದೆ. ಆದ್ದರಿಂದ ಈ ಇಲಾಖೆಗಳ ಸಂಬಂಧಿಸಿದ ಅಧಿಕಾರಿಗಳನ್ನು ಈ ಕೂಡಲೇ ವಜಾ ಮಾಡಿ, ವಿಚಾರಣೆ ನಡೆಸಬೇಕು.
  12. ಸುಮಾರು ಒಂದು ವರ್ಷದ ಹಿಂದೆಯೇ ಪ್ರಜ್ವಲ್ ರೇವಣ್ಣ 86 ಮಾಧ್ಯಮ ಸಂಸ್ಥೆಗಳು ಮತ್ತು ಮೂವರು ವ್ಯಕ್ತಿಗಳು ತನ್ನ ವಿರುದ್ಧ ಯಾವುದೇ ಮಾನಹಾನಿಕರ ವರದಿ, ವಿಡಿಯೋ, ಚಿತ್ರ ಪ್ರಸಾರ ಮಾಡಬಾರದೆಂದು ತಡೆಯಾಜ್ಞೆ ಪಡೆದಿದ್ದಾನೆ. ಒಬ್ಬ ಜನಪ್ರತಿನಿಧಿ ಹೀಗೆ ದೀರ್ಘಕಾಲದ ತಡೆಯಾಜ್ಞೆಯನ್ನು ಪಡೆಯುವುದು ಜನರ ಮಾಹಿತಿಯ ಹಕ್ಕಿನ ಉಲ್ಲಂಘನೆಯಾಗುತ್ತದೆ. ಜನಪ್ರತಿನಿಧಿಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ, ಜನಪ್ರತಿನಿಧಿ ಕಾಯಿದೆಗೆ ವಿರುದ್ಧವಾಗಿ ನಡೆದುಕೊಂಡಲ್ಲಿ ಅದನ್ನು ತಿಳಿದುಕೊಳ್ಳುವ ಹಕ್ಕು ಎಲ್ಲ ಪ್ರಜೆಗಳಿಗೆ ಇರುತ್ತದೆ. ತನ್ನ ವೈಯಕ್ತಿಕ ವ್ಯವಹಾರಗಳೂ ಕೂಡ ಜನರ ಹಿತಾಸಕ್ತಿಗೆ ಮಾರಕವಾಗದಂತೆ ಇಟ್ಟುಕೊಳ್ಳಬೇಕಾದ್ದು ಜನಪ್ರತಿನಿಧಿಯ ಕರ್ತವ್ಯ. ಹೀಗಿರುವಾಗ ತನ್ನ ಹುಳುಕುಗಳನ್ನು ಮುಚ್ಚಿಟ್ಟುಕೊಳ್ಳಲು ಪಡೆದ ಈ ತಡೆಯಾಜ್ಞೆಯಿಂದ ಜನರ ಹಕ್ಕಿನ ಉಲ್ಲಂಘನೆಯಾಗಿದ್ದು ಜನರ ಹಕ್ಕುಗಳ ಸಂರಕ್ಷಕನಾಗಿರುವ (ಕಸ್ಟೋಡಿಯನ್) ರಾಜ್ಯ ಸರ್ಕಾರವು ಈ ಕುರಿತು ಮೊಕದ್ದಮೆ ದಾಖಲಿಸಬೇಕು. ಜನರ ಮಾಹಿತಿಯ ಹಕ್ಕನ್ನು ಎತ್ತಿ ಹಿಡಿಯಬೇಕು.
  13. ಎಚ್ ಡಿ ರೇವಣ್ಣ ಕುಟುಂಬವು ಹಾಸನ ಜಿಲ್ಲೆಯ ಕಂದಾಯ ಇಲಾಖೆ, ಪೊಲೀಸ್ ಇಲಾಖೆಗಳಲ್ಲಿ ಆಯಕಟ್ಟಿನ ಜಾಗಗಳಲ್ಲಿ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಕ ಮಾಡಿಸಿಕೊಂಡು ಅನೇಕ ಭೂವ್ಯವಹಾರಗಳನ್ನು ನಡೆಸುತ್ತಿದೆ ಎಂಬ ಆರೋಪಗಳಿವೆ. ಅಂತಹ ಅಧಿಕಾರಿಗಳು ಅದೇ ಸ್ಥಾನದಲ್ಲಿ ಮುಂದುವರೆದರೆ ನಿಷ್ಪಕ್ಷಪಾತ ತನಿಖೆಗೆ ಅಡ್ಡಿಯಾಗುತ್ತಾರೆ. ಈ ಅಧಿಕಾರಿಗಳನ್ನು ಬಳಸಿಕೊಂಡು ಸಂತ್ರಸ್ತರು ದೂರು ನೀಡದಂತೆ ತಡೆಯುವ ಅಥವಾ ಬೆದರಿಸುವ ಸಾಧ್ಯತೆಗಳಿವೆ. ಆದ್ದರಿಂದ, ಎಚ್ ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ಅವರ ಶಿಫಾರಸ್ಸಿನ ಮೇರೆಗೆ ಹಾಸನ ಜಿಲ್ಲೆಯ ವಿವಿಧ ಕಚೇರಿಗಳಲ್ಲಿ ನೇಮಕಗೊಂಡಿರುವ ಅಧಿಕಾರಿಗಳನ್ನು ಎಲ್ಲ ಈ ಕೂಡಲೆ ವರ್ಗಾವಣೆ ಮಾಡಬೇಕು.
  14. ಎಸ್‌ಐಟಿ ತನಿಖೆ ಪೂರ್ಣಗೊಳ್ಳುವವರೆಗೆ ಎಚ್ ಡಿ ರೇವಣ್ಣ ಅವರ ವಿಧಾನ ಸಭೆ ಸದಸ್ಯತ್ವವನ್ನು ತಾತ್ಕಾಲಿಕವಾಗಿ ರದ್ದುಪಡಿಸಬೇಕು. ಇದು ಇದುವರೆಗೂ ನಡೆದಿಲ್ಲದಿರುವ ಹೇಯ ಪ್ರಕರಣವಾಗಿದ್ದು, ಇದರ ವಿಕೃತಿಯ ಪ್ರಮಾಣ ಮತ್ತು ಸಂತ್ರಸ್ತರ ಸಂಖ್ಯೆ ಬೃಹತ್ತಾಗಿದೆ. ಇಲ್ಲಿ ಸರ್ಕಾರದ ಸವಲತ್ತುಗಳ ದುರ್ಬಳಕೆ ಮತ್ತು ಸ್ಥಾನಮಾನದ ದುರ್ಬಳಕೆ ಗಂಭೀರವಾಗಿದೆ. ಹಾಗಾಗಿ ಇದನ್ನು ಪ್ರಸ್ತುತ ಚಾಲ್ತಿಯಲ್ಲಿರುವ ಕಾನೂನಿನ ವ್ಯಾಪ್ತಿಯಲ್ಲಿ ಮಾತ್ರ ಪರಿಗಣಿಸದೆ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕಿದೆ. ಜನಪ್ರತಿನಿಧಿಗಳಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ನಂಬಿಕೆಯನ್ನು ಉಳಿಸಲು ಈ ಕ್ರಮ ಅತ್ಯಗತ್ಯವಾಗಿದೆ.
  15. ಈ ಆರೋಪಿಗಳ ನಡೆಯು ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದೆ. ಆ ನಿಟ್ಟಿನಲ್ಲಿ ಸಂವಿಧಾನಾತ್ಮಕ ಹುದ್ದೆಗೆ ಎಸಗಿದ ಅಪಚಾರಕ್ಕೆ, ಸರ್ಕಾರಿ ಬಂಗ್ಲೆಯನ್ನು ಅಪರಾಧಕ್ಕೆ ಕೃತ್ಯಕ್ಕೆ ಬಳಸಿರುವುದಕ್ಕೆ ಮೊಕದ್ದಮೆ ಹೂಡಬೇಕು ಮತ್ತು ಈ ಕುಟುಂಬಕ್ಕೆ ಒದಗಿಸಲಾಗಿರುವ ಎಲ್ಲ ಸರ್ಕಾರಿ ಸವಲತ್ತುಗಳನ್ನು ಈ ಕೂಡಲೆ ಹಿಂದಕ್ಕೆ ಪಡೆಯಬೇಕು.
  16. ಈ ಹಗರಣವು ಭುಗಿಲೆದ್ದಿರುವ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ತಾತ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು ಅವನ ಚಿಕ್ಕಪ್ಪ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಮ್ಮನ್ನು ಈ ಹಗರಣಕ್ಕೆ ತಳಕುಹಾಕುವಂತಹ ಯಾವುದೇ ವರದಿ ಮಾಡಬಾರದೆಂದು ಸಾಮಾಜಿಕ ಮಾಧ್ಯಮಗಳು, ಮುದ್ರಣ, ಟಿವಿ, ಡಿಜಿಟಲ್ ಮಾಧ್ಯಮಗಳ ವಿರುದ್ಧ ನ್ಯಾಯಾಲಯದ ತಡೆಯಾಜ್ಞೆ ತಂದಿದ್ದಾರೆ. ಇದು ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪ್ರಜೆಗಳ ಮಾಹಿತಿ ಹಕ್ಕಿನ ಸ್ವಾತಂತ್ರ್ಯ ವನ್ನು ಉಲ್ಲಂಘಿಸುತ್ತದೆ. ಒಂದು ಕಡೆ ಮಾಧ್ಯಮಗಳ ಸ್ವತಂತ್ರ ವರದಿಗೆ ತಡೆಹಾಕಿಸಿರುವ ಅರ್ಜಿದಾರರು (ಎಚ್.ಡಿ.ಕುಮಾರಸ್ವಾಮಿ) ಮತ್ತೊಂದು ಕಡೆ ತಾವೇ ಈ ಹಗರಣ ಕುರಿತಾಗಿಯೇ ಪತ್ರಿಕಾಗೋಷ್ಟಿ ನಡೆಸುತ್ತಾರೆ. ಇದು ಅಪ್ರಜಾಸತ್ತಾತ್ಮಕ ನಡೆಯಾಗಿದೆ. ಕಾನೂನಿನ ಮೂಲಕ ಏಕಮುಖಿ ವರದಿಗಾರಿಕೆಯನ್ನು ಮಾಡಿಸಲಾಗುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತಡೆಯಾಜ್ಞೆ ತೆರವುಗೊಳಿಸಬೇಕು.

ಬಹಳ ಎಚ್ಚರಿಕೆಯಿಂದ ಬರೆದಿರುವ ಮೇಲಿನ ಪ್ರತಿಯೊಂದು ಅಂಶಗಳಿಗೂ ಸೂಕ್ತವಾದ ಕಾನೂನು ಕ್ರಮ ಮತ್ತು ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇವೆ.

(ಶಿಕ್ಷಣ ತಜ್ಞ ಪ್ರೊ. ನಿರಂಜನಾರಾಧ್ಯ, ಚಿಂತಕ ಬಿ ಶ್ರೀಪಾದ್‌ ಭಟ್‌, ಎಸ್‌ ಸತ್ಯಾ, ನಗರಗೆರೆ ರಮೇಶ್ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ)

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments