ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ನೀಡಲಾಗುವುದು. ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ 1 ಲಕ್ಷ ರೂ. ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
“ಶಾಲಾ ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 20 ಸಾವಿರ, ತಾಲ್ಲೂಕು ಕೇಂದ್ರಗಳಿಗೆ 20 ಸಾವಿರದ ಜೊತೆಗೆ ಹೆಚ್ಚುವರಿಯಾಗಿ 1 ಲಕ್ಷ ನೀಡಲಾಗುವುದು. ಜಿಲ್ಲಾ ಕೇಂದ್ರಗಳಿಗೆ 50 ಸಾವಿರ ನೀಡಲಾಗುತ್ತಿದ್ದು ಹೆಚ್ಚು ಮಾಡಲು ಚಿಂತನೆ ನಡೆಸಲಾಗುವುದು” ಎಂದು ಹೇಳಿದರು.
“ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವವನ್ನು ಅರಮನೆ ಮೈದಾನ ಅಥವಾ ಹೊರಾಂಗಣ ಮೈದಾನದಲ್ಲಿ ಜೂನ್ 27 ರಂದು ನಡೆಸಲು ತೀರ್ಮಾನಿಸಲಾಗಿದೆ. ಹುಲಿಯೂರುದುರ್ಗ, ಮಾಗಡಿ, ಆವತಿ ಸೇರಿದಂತೆ ಬೆಂಗಳೂರಿನ ಎಲ್ಲಾ ದಿಕ್ಕುಗಳಿಂದ ಪ್ರತಿವರ್ಷದಂತೆ ಗೋಪುರ ಮತ್ತು ಜ್ಯೋತಿಗಳ ಮೆರವಣಿಗೆ ಬರುತ್ತದೆ” ಎಂದರು.
ಬಿ ಎಲ್ ಶಂಕರ್ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿ
“ಬಿ.ಎಲ್.ಶಂಕರ್ ಅವರ ನೇತೃತ್ವದಲ್ಲಿ ಕೆಂಪೇಗೌಡ ಪ್ರಶಸ್ತಿ ಆಯ್ಕೆ ಸಮಿತಿ ರಚನೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಿಡಿಎ, ಬಿಬಿಎಂಪಿಯಿಂದ ಕೆಂಪೇಗೌಡ ಪ್ರಶಸ್ತಿ ನೀಡಲು ಯೋಜಿಸಲಾಗಿದೆ. ಪ್ರಶಸ್ತಿಗೆ ನಾನು ಒಂದಷ್ಟು ಹೆಸರು ಸೂಚಿಸಿದ್ದೆ. ವಾರ್ಡ್ ಮಟ್ಟದಲ್ಲಿ ಅಥವಾ ಬೇರೆ ಸ್ವರೂಪದಲ್ಲಿ ಪ್ರಶಸ್ತಿ ನೀಡಬೇಕಾ ಎಂದು ಗೊಂದಲ ಇರುವ ಕಾರಣಕ್ಕೆ ಮುಂದುವರೆದಿಲ್ಲ. ಮುಂದಿನ ದಿನಗಳಲ್ಲಿ ಈ ಪ್ರಶಸ್ತಿ ನೀಡಲಾಗುವುದು” ಎಂದು ತಿಳಿಸಿದರು.
ಸಮಾಧಿ ಹಾಗೂ ಕೋಟೆ ಅಭಿವೃದ್ದಿಗೆ ಕ್ರಿಯಾ ಯೋಜನೆ
“ಕೆಂಪೇಗೌಡರ ಮೂಲ ಸಮಾಧಿ ಸ್ಥಳ, ಕೋಟೆಯನ್ನು ಅಭಿವೃದ್ದಿಪಡಿಸುವ ಕ್ರಿಯಾಯೋಜನೆ ಸಿದ್ದ ಪಡಿಸಲಾಗಿದೆ. ಅವರ ಬಗ್ಗೆ ಮಾಹಿತಿಯೂ ಸಿಗಬೇಕು ಹಾಗೂ ಪ್ರವಾಸಿ ಸ್ಥಳವಾಗಿಯೂ ಪರಿವರ್ತನೆಯಾಗಬೇಕು. ಸಚಿವರಾದ ಕೆ.ಎಚ್.ಮುನಿಯಪ್ಪ ಅವರ ಕ್ಷೇತ್ರದಲ್ಲಿ ಕೆಂಪೇಗೌಡರ ಜನ್ಮಸ್ಥಳ ಅಭಿವೃದ್ದಿಗೆ 10 ಎಕರೆ ಮಂಜೂರು ಮಾಡಲಾಗಿದೆ. ಶೀಘ್ರದಲ್ಲೇ ಸ್ಥಳ ಪರಿಶೀಲನೆ ನಡೆಸಲಾಗುವುದು. ಸುಮ್ಮನಹಳ್ಳಿಯಲ್ಲಿ ಕೆಂಪೇಗೌಡ ಪ್ರಾಧಿಕಾರದ ಕಚೇರಿಗಾಗಿ 5 ಎಕರೆ ಜಾಗವನ್ನು ಮಂಜೂರು ಮಾಡಲಾಗಿದೆ. ಜಯಂತಿಯಂದೇ ಗುದ್ದಲಿಪೂಜೆಗೆ ಯೋಚಿಸಲಾಗಿದೆ” ಎಂದು ಮಾಹಿತಿ ನೀಡಿದರು.