ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಮೊಮ್ಮಗ ಹಾಗೂ ಹೆಚ್ ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಈ ಬೆನ್ನಲ್ಲೇ ಅದೇ ಕುಟುಂಬ ಮತ್ತೊಂದು ಕುಡಿ ಪ್ರಜ್ವಲ್ ರೇವಣ್ಣನ ತಮ್ಮ ಸೂರಜ್ ರೇವಣ್ಣ ವಿರುದ್ಧ ಸಲಿಂಗಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ.
“ಸೂರಜ್ ರೇವಣ್ಣ ಅವರು ತನ್ನನ್ನು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ದೌರ್ಜನ್ಯ ಎಸಗಿದ್ದಾರೆ. ಈಗ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ” ಎಂದು ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತನೋರ್ವ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ಸುಮಾರು 14ರಿಂದ 15 ಪುಟದ ದೂರು ಸಲ್ಲಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿರುವ ಸೂರಜ್ ರೇವಣ್ಣ ವಿರುದ್ಧ ಮುಖ್ಯಮಂತ್ರಿಗಳ ಕಚೇರಿಗೂ ಇ-ಮೇಲ್ ಮೂಲಕ ದೂರು ತಲುಪಿದೆ. ಮುಖ್ಯಮಂತ್ರಿ ಕಚೇರಿಯ ಸಿಬ್ಬಂದಿ ಗೃಹ ಇಲಾಖೆಗೆ ‘ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು’ ಫಾರ್ವರ್ಡ್ ಮಾಡಿದೆ.
ದೂರಿನಲ್ಲಿ ಏನಿದೆ?
“ಕಳೆದ ಜೂನ್ 16ರ ಭಾನುವಾರಂದು ತನಗೆ ವಾಟ್ಸಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದಕ್ಕೆ ತೆರಳಿದ್ದೆ. ತನಗೆ ಉದ್ಯೋಗದ ನೆರವು ನೀಡುವುದಾಗಿ ಭರವಸೆ ನೀಡಿ ಕರೆಸಿಕೊಂಡಿದ್ದರು. ಅವರ ಸಂದೇಶ ನಂಬಿಕೊಂಡು ಅಲ್ಲಿ ತೆರಳಿದ್ದೆ. ಅಲ್ಲಿನ ಕೊಠಡಿಯೊಂದಕ್ಕೆ ಕರೆದುಕೊಂಡು, ಸಲಿಂಗಕಾಮಕ್ಕೆ ಒತ್ತಾಯಿಸಿ, ಅವರು ತನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ, ನನ್ನ ದೇಹದ ಮೇಲೆಲ್ಲ ಗಾಯ ಮಾಡಿದ್ದಾರೆ. ಇದನ್ನು ಎಲ್ಲಾದರೂ ಬಾಯಿಬಿಟ್ಟರೆ ಕೊಲ್ಲುವ ಬೆದರಿಕೆ ಕೂಡ ಹಾಕಿದ್ದಾರೆ. ಈ ಘಟನೆಯಿಂದ ನಾನು ಮಾನಸಿಕವಾಗಿ ಕುಗ್ಗಿದ್ದೇನೆ” ಎಂದು ಸುದೀರ್ಘ ದೂರಿನಲ್ಲಿ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಜೆಡಿಎಸ್ ಕಾರ್ಯಕರ್ತ ಗಂಭೀರ ಆರೋಪ ಮಾಡಿದ್ದಾರೆ.
ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಯುವಕ ಪೊಲೀಸರ ಬಳಿ ನೀಡಿರುವ ದೂರಿನಲ್ಲಿ ಎಲ್ಲವನ್ನೂ ವಿವರಿಸಿದ್ದಾನೆ. ದೌರ್ಜನ್ಯಕ್ಕೆ ಒಳಗಾದ ಯುವಕನ ದೇಹದ ಹಲವು ಭಾಗಗಳಲ್ಲಿ ಕಚ್ಚಿದ ಗುರುತುಗಳಿವೆ, ಮರ್ಮಾಂಗದಲ್ಲೂ ಗಾಯವಾಗಿದೆ ಎಂದು ವರದಿಯಾಗಿದೆ. ಪೊಲೀಸರು ಹುಡುಗನಿಂದ ದೂರು ದಾಖಲಿಸಿಕೊಂಡಿರುವುದಾಗಿ ತಿಳಿದುಬಂದಿದೆ.
ಯುವಕನ ವಿರುದ್ಧವೇ ದೂರು
ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಯುವಕನ ವಿರುದ್ಧವೇ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಯುವಕ ಸುಳ್ಳು ಆರೋಪ ಮಾಡಿದ್ದು, ಹಣಕ್ಕಾಗಿ ಪೀಡಿಸಿ, ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಶಾಸಕರ ಆಪ್ತ ಶಿವಕುಮಾರ್ ದೂರು ದಾಖಲಿಸಿದ್ದಾರೆ.