Homeಅಭಿಮನ್ಯುಬೆಂಗಳೂರಿಗರಿಗೆ ಸಂತಸದ ಸುದ್ದಿ, ಬಿಎಂಟಿಸಿ ಬಸ್‌ಗಳಿಗೆ ಇವಿ ರೂಪ

ಬೆಂಗಳೂರಿಗರಿಗೆ ಸಂತಸದ ಸುದ್ದಿ, ಬಿಎಂಟಿಸಿ ಬಸ್‌ಗಳಿಗೆ ಇವಿ ರೂಪ

ಬೆಂಗಳೂರು : ಬೆಂಗಳೂರನ್ನು ಮಾಲಿನ್ಯ ಮುಕ್ತಗೊಳಿಸಲು ನೂತನ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಅದಕ್ಕಾಗಿ ಬಿಎಂಟಿಸಿ ಡೀಸೆಲ್ ಬಸ್ಸುಗಳನ್ನು ವಿದ್ಯುತ್ ಚಾಲಿತ ವಾಹನಗಳನ್ನಾಗಿ ಪರಿವರ್ತಿಸುವ ಚಿಂತನೆ ನಡೆದಿದೆ. ಇದರ ಪ್ರಾಥಮಿಕ ಹಂತವಾಗಿ ತೈವಾನ್ ಇಂಡಿಯಾ ಬಿಝಿನೆಸ್ ಅಸೋಸಿಯೇಷನ್ ಹೂಡಿಕೆದಾರರ ಜೊತೆ ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವರಾದ ಎಂ.ಬಿ. ಪಾಟೀಲ ಅವರು ಯಶಸ್ವಿ ಮಾತುಕತೆ ನಡೆಸಿದ್ದಾರೆ.

ರಾಜ್ಯದಲ್ಲಿ ಹೂಡಿಕೆ ಸಂಬಂಧ ಶುಕ್ರವಾರ ಭೇಟಿ ನೀಡಿರುವ ಅಸೋಸಿಯೇಷನ್(ಟಿಐಬಿಎ)ನ ೫೦ಕ್ಕೂ ಹೆಚ್ಚು ಹೂಡಿಕೆದಾರರ ಜತೆ ಚರ್ಚಿಸಿದ ನಂತರ ಮಾತನಾಡಿದ ಅವರು ಮರುಬಳಕೆಗೆ ಅಣಿಗೊಳಿಸಲು ತೈವಾನ್ ಕಂಪನಿಗಳು ಆಸಕ್ತಿ ವ್ಯಕ್ತಪಡಿಸಿವೆ. ಇದರಿಂದ ಪರಿಸರಸ್ನೇಹಿ ಮತ್ತು ಸುಸ್ಥಿರ ಅಭಿವೃದ್ಧಿ ಸಾಧ್ಯವಾಗಲಿದ್ದು, ಈ ಸಂಬಂಧ ಸಾರಿಗೆ ಇಲಾಖೆ ಜತೆ ಮಾತನಾಡಿ ಸಂಪರ್ಕಸೇತುವಾಗಿ ಕೆಲಸ ಮಾಡಲಾಗುವುದು ಎಂದು ಹೇಳಿದ್ದಾರೆ.

ಸದ್ಯ ಕೇಂದ್ರದ ಸಹಯೋಗದೊಂದಿಗೆ ಇ.ವಿ. ಬಸ್‌ಗಳನ್ನು ಓಡಿಸುತ್ತಿದ್ದೇವೆ. ಡೀಸೆಲ್ ಬಸ್‌ಗಳನ್ನು ವಿದ್ಯುತ್ ಚಾಲಿತ ವಾಹನಗಳನ್ನಾಗಿ ಪರಿವರ್ತಿಸುವ ಕೆಲಸ ಆಗಬೇಕಾಗಿದೆ. ನೀವು ಮುಂದೆ ಬರುವುದಾದರೆ ಸಾರಿಗೆ ಸಂಸ್ಥೆಗಳ ಜತೆ ಸಂಪರ್ಕ ಕಲ್ಪಿಸಲಾಗುವುದು ಎಂದರು.

ತುಮಕೂರು ಮಶೀನ್ ಟೂಲ್ಸ್ ಪಾರ್ಕ್ (ಟಿಎಂಟಿಪಿ) ಅನ್ನು ಪುನಶ್ಚೇತನಗೊಳಿಸಿ ಲಾಭದಾಯಕವನ್ನಾಗಿಸಲು ತೀರ್ಮಾನಿಸಲಾಗಿದೆ. ಎಲೆಕ್ಟ್ರಾನಿಕ್ಸ್ ಸಿಸ್ಟಂ ವಿನ್ಯಾಸ ಮತ್ತು ತಯಾರಿಕೆ (ಇಎಸ್‌ಡಿಎಂ) ಕಾರ್ಯ ಪರಿಸರವನ್ನು ವ್ಯಾಪಕಗೊಳಿಸುವ ಉದ್ದೇಶದಿಂದ ಮೈಸೂರಿನ ಕೋಚನಹಳ್ಳಿ ಮತ್ತು ಧಾರವಾಡದ ಕೋಟೂರು-ಬೇಲೂರು ಕೈಗಾರಿಕಾ ಪ್ರದೇಶಗಳಲ್ಲಿ ಇಎಂಸಿ ೨.೦ ಕ್ಲಸ್ಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಇದಕ್ಕಾಗಿ ತೈವಾನ್ ಕಂಪನಿಗಳ ಸಹಭಾಗಿತ್ವ ಹೊಂದುವ ಆಸಕ್ತಿ ಇದೆ ಎಂದು ಅವರು ತಿಳಿಸಿದರು.

ಬೆಂಗಳೂರಿನ ಪೀಣ್ಯ, ಬೊಮ್ಮಸಂದ್ರ ಮತ್ತು ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿರುವ ಉದ್ದಿಮೆಗಳು ಮಶೀನ್ ಟೂಲ್ ತಯಾರಿಕೆಗೆ ಹೆಸರಾಗಿವೆ. ಜತೆಗೆ ಆಟೋಮೋಟಿವ್ ಮತ್ತು ವಾಹನ ಬಿಡಿಭಾಗಗಳ ತಯಾರಿಕೆಯು ಮುಂಚೂಣಿಗೆ ಬರುತ್ತಿದೆ. ಇವೆಲ್ಲವೂ ತೈವಾನ್ ಮತ್ತು ಕರ್ನಾಟಕದ ಸಹಭಾಗಿತ್ವಕ್ಕೆ ಪ್ರಶಸ್ತವಾಗಿವೆ ಎಂದು ಅವರು ವಿವರಿಸಿದರು.


ಪರಿಸರಸ್ನೇಹಿ ತಂತ್ರಜ್ಞಾನ ಮತ್ತು ಮರುಬಳಕೆಯ ಇಂಧನಗಳ ಉತ್ಪಾದನೆಯಲ್ಲೂ ರಾಜ್ಯ ಹೆಜ್ಜೆ ಗುರುತುಗಳನ್ನು ಮೂಡಿಸುತ್ತಿದೆ. ಕರ್ನಾಟಕದಲ್ಲಿ ಗ್ರೀನ್ ಹೈಡ್ರೋಜನ್, ಎಲೆಕ್ಟ್ರಾನಿಕ್ಸ್ ಸಿಸ್ಟಂ ವಿನ್ಯಾಸ ಮತ್ತು ತಯಾರಿಕೆ (ಇಎಸ್‌ಡಿಎಂ), ಏರೋಸ್ಪೇಸ್ ವಲಯಗಳು ಗಮನಾರ್ಹವಾಗಿದ್ದು, ದೇಶದಲ್ಲೇ ಅಗ್ರಸ್ಥಾನದಲ್ಲಿದ್ದೇವೆ. ಇದನ್ನು ತೈವಾನ್ ಹೂಡಿಕೆದಾರರ ಗಮನಕ್ಕೆ ತರಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯದ ಉದ್ಯಮ ವಲಯ, ಕಾರ್ಯ ಪರಿಸರ, ಪ್ರೋತ್ಸಾಹಕ ಕ್ರಮಗಳು ಮತ್ತು ಸೌಲಭ್ಯಗಳನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಲಾಯಿತು.
ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ, ತೈವಾನ್ ನಿಯೋಗದಲ್ಲಿ ಜಾರ್ಜ್ ಎಲಿಯನ್, ಚೆನ್ನೈನ ಟಿಇಸಿಸಿ ಡೈರೆಕ್ಟರ್ ಜನರಲ್ ರಿಚರ್ಡ್ ಚೆನ್ ಮುಂತಾದವರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments