ಪರೀಕ್ಷೆ ನಡೆಸುವಾಗ ಎಡವಟ್ಟು, ಪ್ರಶ್ನೆ ಪತ್ರಿಕೆಯಲ್ಲಿ ಎಡವಟ್ಟು, ಫಲಿತಾಂಶ ಬಂದಮೇಲೆ ಮಾರ್ಕ್ಸ್ ಕಾರ್ಡ್ ಮುದ್ರಣ ಮಾಡುವಲ್ಲಿ ಎಡವಟ್ಟು, ಹೀಗೆ ಹೆಜ್ಜೆ ಹೆಜ್ಜೆಗೂ ಎಡವಟ್ಟುಗಳನ್ನೇ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ನಾಡಿನ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.
ಎಕ್ಸ್ ತಯಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, “ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಆಡಳಿತ ಯಂತ್ರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದ್ದು, ಕಳೆದ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಬಂದು 5 ತಿಂಗಳಾದರೂ ಈವರೆಗೂ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದಿರುವುದು ಈ ಸರ್ಕಾರದ ಕಾರ್ಯವೈಖರಿಗೆ ಮತ್ತೊಂದು ನಿದರ್ಶನವಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.
“ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಎಂದು ಕನ್ನಡಿಗರಿಗೆ ಆಕಾಶದಲ್ಲಿ ಅರಮನೆ ತೋರಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಬೆಂಗಳೂರಿನ ಮೂಲಸೌಕರ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ ಎಂದು ಮತ್ತೊಂದು ಟ್ವೀಟ್ನಲ್ಲಿ ಹೇಳಿದ್ದಾರೆ.
“ಶನಿವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನಗರದ ಅನೇಕ ಭಾಗಗಳಲ್ಲಿ ಜನಜೀವನ ಸಂಪೂರ್ವ ಅಸ್ತವ್ಯಸ್ತಗೊಂಡಿದ್ದು, 24 ಗಂಟೆ ಕಳೆದರೂ ಈವರೆಗೂ ಮುಖ್ಯಮಂತ್ರಿಗಳಾಗಲಿ, ಬೆಂಗಳೂರು ಅಭಿವೃದ್ಧಿ ಸಚಿವರಾಗಲಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ಕೊಟ್ಟು ಜನರ ಸಮಸ್ಯೆ ಕೇಳುವ ಗೋಜಿಗೆ ಹೋಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.