Homeಕರ್ನಾಟಕ'ಆಪರೇಷನ್‌ ಹಸ್ತ' ಕುರಿತು ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

‘ಆಪರೇಷನ್‌ ಹಸ್ತ’ ಕುರಿತು ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಕಾಂಗ್ರೆಸ್‌ ಸರ್ಕಾರವು ಆಪರೇಷನ್‌ ಹಸ್ತ ಮಾಡಲಾಗುತ್ತಿದೆ ಎಂಬ ಆರೋಪದ ಬಗ್ಗೆ ಮೌನ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಬಿಜೆಪಿ ಮತ್ತು ಜೆಡಿಎಸ್‌ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್‌ಗೆ ಬರಲು ಸಜ್ಜಾಗಿದ್ದಾರೆ” ಎಂದು ಸ್ಫೋಟಕ ಹೇಳಿಕೆ ನೀಡಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡುತ್ತ, ಕಾಂಗ್ರೆಸ್ ಆಪರೇಷನ್ ಹಸ್ತ ಕೈಗೊಳ್ಳುತ್ತಿದೆ ಎಂಬ ಆರೋಪದ ಬಗ್ಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ” ಎಂದು ತಿಳಿಸಿದರು.

‘ಈಗಿನ ಮುಖ್ಯಮಂತ್ರಿಗಳು ಎಷ್ಟು ಅವಧಿಗೆ ಮುಖ್ಯಮಂತ್ರಿಗಳಾಗಿ ಉಳಿಯಲಿದ್ದಾರೆ’ ಎಂಬ ಪ್ರಧಾನಿಯವರ ರಾಜಕೀಯ ಭಾಷಣದಲ್ಲಿನ ಹೇಳಿಕೆಗೆ ಹರಿಹಾಯ್ದ ಸಿದ್ದರಾಮಯ್ಯ, “ಕೇವಲ ಆರೋಪ ಮಾಡಬೇಕೆಂಬ ಉದ್ದೇಶದಿಂದ ಮೋದಿ ಆರೋಪ ಮಾಡುತ್ತಾರೆ. ಇವೆಲ್ಲವೂ ಸುಳ್ಳಿನ ಕಂತೆ. ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕರ್ನಾಟಕವನ್ನೇ ಗುರಿ ಮಾಡಿ ಮಾತನಾಡಿದ್ದಾರೆ. ಅವರು ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿಯ ದಿವಾಳಿಯಾಗಿರುವುದನ್ನು ಸೂಚಿಸುತ್ತದೆ” ಎಂದು ಕಿಡಿಕಾರಿದರು.

ಮೊದಲು ಬರಪರಿಹಾರ ನೀಡಲಿ

‘ಸಿಎಂ ಮತ್ತು ಡಿಸಿಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ’ ಎಂದು ಪ್ರಧಾನಿಗಳು ಆರೋಪಿಸಿದ್ದಾರಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತಿರಿಸಿ, “40 ಪರ್ಸೆಂಟ್ ಕಮೀಷನ್ ಸರ್ಕಾರ ಎಂಬ ಆರೋಪ ಬಿಜೆಪಿ ಸರ್ಕಾರದ ಮೇಲಿತ್ತು. ಈ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡಿಸುತ್ತಿದೆ. ದೇಶದ ಪ್ರಧಾನಿಯಾದವರು ಈ ವಿಷಯದ ಬಗ್ಗೆಯೂ ಮಾತನಾಡಬೇಕಲ್ಲವೇ? ಕೇಂದ್ರ ಸರ್ಕಾರದ ಅಧೀನದಲ್ಲಿ ಎಲ್ಲ ತನಿಖಾ ಸಂಸ್ಥೆಗಳಿವೆ, ಪುರಾವೆಗಳು, ದಾಖಲೆಗಳಿಲ್ಲದೇ ಆರೋಪ ಮಾಡಬಾರದು. ಇಂದು ಇಡೀ ದೇಶವೇ ದಿವಾಳಿಯಾಗಿದೆ” ಎಂದು ವಾಗ್ದಾಳಿ ನಡೆಸಿದರು.

“ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನ ಮಂತ್ರಿಗಳು ಹೇಳಿದ್ದರು. ಆದರೆ ನಮ್ಮ ಸರ್ಕಾರ ಅವುಗಳನ್ನು ಸಾಧಿಸಿ ತೋರಿಸಿದೆ. ಇಂತಹ ಹೇಳಿಕೆಗಳನ್ನು ದೇಶದ ಪ್ರಧಾನ ಮಂತ್ರಿಗಳಿಂದ ಅಪೇಕ್ಷಿಸಿರಲಿಲ್ಲ. ತಮ್ಮ ರಾಜಕೀಯ ಭಾಷಣದಲ್ಲಿ ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ. “ರಾಜ್ಯದ ವಿರುದ್ಧ ಕೇಂದ್ರ ಮಲತಾಯಿ ಧೋರಣೆಯನ್ನು ತಳೆದಿದೆ. ಬರಗಾಲದ ಪರಿಹಾರವನ್ನು ರಾಜ್ಯಕ್ಕೆ ಮೊದಲು ಬಿಡುಗಡೆ ಮಾಡಲಿ” ಎಂದರು.

ಉಪಹಾರ ಸಭೆಯ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಭೆಯನ್ನು ನಡೆಸಲಾಗಿತ್ತು. ಪ್ರತಿ ಜಿಲ್ಲೆಗೆ ಓರ್ವ ಮಂತ್ರಿಯನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಬರಗಾಲ ಪರಿಸ್ಥಿತಿ ನಿರ್ವಹಣೆಯ ಜವಾಬ್ದಾರಿಯನ್ನೂ ವಹಿಸಲಾಗಿದೆ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments