ಕನ್ನಡದ ಖ್ಯಾತ ಚಿಂತಕರಾದ ಪ್ರೊ.ಮುಜಾಫರ್ ಅಸ್ಸಾದಿ ಅವರು ತಡರಾತ್ರಿ 12.45ರ ವೇಳೆಗೆ ನಿಧನರಾಗಿದ್ದಾರೆ. ಹೃದಯ ಸಂಬಂಧಿತ ಕಾಯಿಲೆಗಳಿಗೆ ತುತ್ತಾಗಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗಾಗಿ ಬೆಂಗಳೂರಿಗೆ ಇತ್ತೀಚೆಗೆ ಬಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ, ಬಹು ಅಂಗಾಂಗ ವೈಫಲ್ಯದ ಕಾರಣ ಕೊನೆಯುಸಿರೆಳೆದಿದ್ದಾರೆ.
ಮೈಸೂರಿನ ಸರಸ್ವತಿಪುರಂ ಫೈರ್ ಬ್ರಿಗೇಡ್ ಬಳಿ ಇರುವ ನ್ಯೂ ಮುಸ್ಲಿಂ ಹಾಸ್ಟೆಲ್ನಲ್ಲಿ ಸಾರ್ವಜನಿಕರ ಅಂತಿಮದರ್ಶನಕ್ಕೆ ಮೃತದೇಹವನ್ನು ಇರಿಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಶಿರ್ವ ಎಂಬ ಊರಿನಲ್ಲಿ ಮುಸ್ಲಿಮ್ ಕುಟುಂಬದಲ್ಲಿ ಜನಿಸಿದ ಅಸ್ಸಾದಿಯವರು ಮಂಗಳೂರು, ಗೋವಾ ಮತ್ತು ಮೈಸೂರು ವಿಶ್ವವಿದ್ಯಾನಿಲಯಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಸಮಾಜಮುಖಿ ಚಿಂತಕರಾಗಿದ್ದರು. ವಿಶಿಷ್ಟ ರಾಜಕೀಯ ಒಳನೋಟಗಳನ್ನು ನೀಡುತ್ತಿದ್ದ ಬರಹಗಾರರಾಗಿದ್ದರು.
ಸುಮಾರು 500ಕ್ಕೂ ಹೆಚ್ಚು ಪ್ರಬಂಧಗಳನ್ನು ದೇಶ ವಿದೇಶಗಳಲ್ಲಿ ಮಂಡಿಸಿದ ಹೆಗ್ಗಳಿಗೆ ಪ್ರೊ.ಅಸ್ಸಾದಿ ಅವರಿಗೆ ಸಲ್ಲುತ್ತದೆ. ಕರ್ನಾಟಕದಲ್ಲಿ ಬಹುರೂಪಿ ಸ್ತ್ರೀವಾದ ಕಥನಗಳು ಮತ್ತು ಚಳವಳಿ, ಅಸ್ಮಿತೆ, ರಾಜಕಾರಣ ಮತ್ತು ಮೂಲಭೂತವಾದ ಸೇರಿದಂತೆ ಕನ್ನಡ ಮತ್ತು ಆಂಗ್ಲಭಾಷೆಗಳಲ್ಲಿ ಸುಮಾರು 14 ಮಹತ್ವದ ಕೃತಿಗಳನ್ನು ರಚಿಸಿದ್ದಾರೆ. ಅಲ್ಲದೆ ಇವರ 300ಕ್ಕೂ ಹೆಚ್ಚು ಸಂಶೋಧನಾ ಲೇಖನಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ.
ಜಗತ್ತಿನ ಸುಮಾರು 15ಕ್ಕೂ ಹೆಚ್ಚು ಪ್ರತಿಷ್ಠಿತ ನಿಯತಕಾಲಿಕೆಗಳ ಸಂಪಾದಕೀಯ ಮಂಡಳಿಯಲ್ಲಿ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸಿದ್ದರು. ಇವರ ಬರಹಗಳು ಫ್ರೆಂಚ್, ಮರಾಠಿ, ತಮಿಳು ಮತ್ತು ಉರ್ದು ಭಾಷೆಗಳಿಗೂ ಭಾಷಾಂತರವಾಗಿವೆ. ಅಷ್ಟೇ ಅಲ್ಲದೆ ವಿವಿಧ ರಾಜ್ಯಗಳಲ್ಲಿ ಸಾರ್ವಜನಿಕ ಸೇವಾ ಆಯೋಗಗಳಲ್ಲಿ ಪರೀಕ್ಷಕರಾಗಿ ಮತ್ತು ಸಂದರ್ಶಕರಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆ ಅಸ್ಸಾದಿಯವರದ್ದು.
ಇವರ ಮಾರ್ಗದರ್ಶನದಲ್ಲಿ ರುವಾಂಡಾ, ಅಫ್ಘಾನಿಸ್ತಾನ, ಇರಾನ್, ಯುಕೆ ಮೊದಲಾದೆಡೆ ಪಿಎಚ್.ಡಿ ಪದವಿ ಪಡೆದ ವಿದ್ಯಾರ್ಥಿಗಳಿದ್ದಾರೆ. ಬುಡಕಟ್ಟು ಸಮುದಾಯಗಳ ಸ್ಥಳಾಂತರ ಕುರಿತ ಹೈಕೋರ್ಟ್ ಸಮಿತಿ ಅಧ್ಯಕ್ಷರಾಗಿ, ವರದಿ ನೀಡಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಪುಸ್ತಕ ಬಹುಮಾನ ಇವರಿಗೆ ಸಂದಿತ್ತು.
ಸಿಎಂ ಸಿದ್ದರಾಮಯ್ಯ ಸಂತಾಪ
“ನಮ್ಮೆಲ್ಲರಿಗೆ ಪ್ರೀತಿಪಾತ್ರರಾಗಿದ್ದ ಹಿರಿಯ ವಿದ್ವಾಂಸ ಮತ್ತು ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ ಅವರ ಅನಿರೀಕ್ಷಿತ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಪ್ರೊ.ಅಸ್ಸಾದಿ ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು. ಅವರ ಅಗಲಿಕೆಯಿಂದ ನಾಡು ಬಡವಾಗಿದೆ, ಅವರ ಅಗಲಿಕೆಯಿಂದ ಸೃಷ್ಟಿಯಾಗಿರುವ ನಿರ್ವಾತವನ್ನು ತುಂಬುವುದು ಕಷ್ಟ” ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
“ನಿರಂತರವಾದ ಅಧ್ಯಯನ ಮತ್ತು ಸಂಶೋಧನೆಗಳಿಂದಾಗಿ ಕರ್ನಾಟಕದಲ್ಲಿ ಮಾತ್ರವಲ್ಲ ದೇಶ-ವಿದೇಶಗಳಲ್ಲಿಯೂ ತಮ್ಮ ವಿದ್ವತ್ಪೂರ್ಣ ಬರವಣಿಗೆ ಮತ್ತು ಉಪನ್ಯಾಸಗಳ ಮೂಲಕ ಜನಪ್ರಿಯರಾಗಿದ್ದ ಪ್ರೊ.ಅಸ್ಸಾದಿ ಅವರು ಕನ್ನಡದ ಹೆಮ್ಮೆಯ ಪುತ್ರ. ವರ್ಷಗಳಿಂದ ನನ್ನ ಹಿತೈಷಿಯಾಗಿ ರಾಜಕೀಯವಾಗಿ ಸದಾ ನನ್ನ ಏಳಿಗೆಯನ್ನು ಹಾರೈಸುತ್ತಿದ್ದ ಪ್ರೊ.ಅಸ್ಸಾದಿ ಅವರ ಸಾವು ವೈಯಕ್ತಿಕವಾಗಿಯೂ ನನ್ನ ಪಾಲಿಗೆ ದೊಡ್ಡ ನಷ್ಟ. ಪ್ರೊ.ಅಸ್ಸಾದಿ ಅವರನ್ನು ಕಳೆದುಕೊಂಡ ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದಿದ್ದಾರೆ.
ಜಮೀರ್ ಅಹಮದ್ ಖಾನ್ ಸಂತಾಪ
ಚಿಂತಕ ಹಾಗೂ ರಾಜಕೀಯ ತಜ್ಞ ಪ್ರೊ.ಮುಜಾಫರ್ ಅಸ್ಸಾದಿ ನಿಧನಕ್ಕೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಸ್ಸಾದಿ ಅವರು ಮೈಸೂರು ವಿಶ್ವ ವಿದ್ಯಾಲಯದ ಹಂಗಾಮಿ ಕುಲಪತಿ ಸೇರಿ ಹಲವು ಹುದ್ದೆ ಗಳ ಜವಾಬ್ದಾರಿ ವಹಿಸಿಕೊಂಡು ದಕ್ಷತೆ ಯಿಂದ ಕೆಲಸ ಮಾಡಿದ್ದರು. ಜನಪರ ಹಾಗೂ ಪ್ರಗತಿಪರ ಚಿಂತನೆ ಮೂಲಕ ಜನ ಸಮುದಾಯಗಳ ಒಳಿತು ಬಯಸುತ್ತಿದ್ದರು. ಇವರ ನಿಧನ ದಿಂದ ನಿಧನದಿಂದ ರಾಜ್ಯ ಒಬ್ಬ ಸಮಾಜಮುಖಿ ಚಿಂತಕ ನನ್ನು ಕಳೆದುಕೊಂಡಂತಾಗಿದೆ ಎಂದು ಜಮೀರ್ ಅಹಮದ್ ಖಾನ್ ತಮ್ಮ ಶೋಕಸಂದೇಶದಲ್ಲಿ ತಿಳಿಸಿದ್ದಾರೆ.
ಎಂ ಬಿ ಪಾಟೀಲ್ ಸಂತಾಪ
ಹೆಸರಾಂತ ಚಿಂತಕ ಪ್ರೊ.ಮುಜಾಫರ್ ಅಸ್ಸಾದಿ ಮತ್ತು ರೈತ ನಾಯಕ ಜಿ ಸಿ ಬಯ್ಯಾರೆಡ್ಡಿ ಅವರುಗಳ ನಿಧನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಸ್ಸಾದಿ ಅವರು ತಮ್ಮ ಬರಹಗಳ ಮೂಲಕ ಮತ್ತು ಬಯ್ಯಾರೆಡ್ಡಿ ಅವರು ಹೋರಾಟದ ಮೂಲಕ ಈ ಸಮಾಜವನ್ನು ಕಟ್ಟುತ್ತಿದ್ದರು. ಜನ ಸಮುದಾಯಗಳ ಒಳಿತಿಗಾಗಿ ಇವರಿಬ್ಬರೂ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿದ್ದರು. ಇವರಿಬ್ಬರ ನಿಧನದಿಂದ ನಾಡು ಬಡವಾಗಿದೆ ಎಂದು ಅವರು ತಮ್ಮ ಶೋಕಸಂದೇಶದಲ್ಲಿ ಸ್ಮರಿಸಿಕೊಂಡಿದ್ದಾರೆ.
ಅಸ್ಸಾದಿ ಅವರು ತಮ್ಮ ಸಮಾಜವಾದಿ ನಿಲುವಿನ ಮೂಲಕ ಚಿಂತನಶೀಲತೆಯನ್ನು ಪ್ರಖರವಾಗಿ ಕಾಪಾಡಿಕೊಂಡಿದ್ದರು. ಇದರಿಂದಾಗಿ ಸಾರ್ವಜನಿಕ ವ್ಯವಸ್ಥೆಯನ್ನು ಸ್ವಸ್ಥವಾಗಿಡಬಹುದು ಎನ್ನುವುದು ಅವರ ನಂಬಿಕೆಯಾಗಿತ್ತು. ಅಸ್ಸಾದಿ ಅವರು ತಾವು ನಂಬಿದ ತತ್ತ್ವಗಳಿಗೆ ಕೊನೆಯವರೆಗೂ ಬದ್ಧರಾಗಿದ್ದರು ಎಂದು ಅವರು ಬಣ್ಣಿಸಿದ್ದಾರೆ.


