ಬೆಂಗಳೂರಿನಲ್ಲಿ ಅನಗತ್ಯವಾಗಿ ಕುಡಿಯುವ ನೀರಿನ ದುರ್ಬಳಕೆ ಮಾಡುವವರಿಗೆ ಜಲಮಂಡಳಿಯು ದಂಡದ ಬಿಸಿ ಮುಟ್ಟಿಸುತ್ತಿದೆ. ಕಳೆದ ಒಂದು ವಾರದಲ್ಲಿ 112 ಪ್ರಕರಣಗಳನ್ನು ಪತ್ತೆಹಚ್ಚಿ, ಕುಡಿಯುವ ನೀರನ್ನು ಅನಗತ್ಯ ಪೋಲು ಮಾಡಿದವರಿಂದ 5.60 ಲಕ್ಷ ರೂ.ಗಳ ದಂಡ ವಸೂಲಿಗೆ ಕ್ರಮ ಕೈಗೊಂಡಿದೆ.
ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಸದಂತೆ ಫೆ.17ರಂದು ನಿಷೇಧದ ಆದೇಶ ಹೊರಡಿಸಿದ ನಂತರ ಜಲಮಂಡಳಿ, ಕುಡಿಯುವ ನೀರಿನ ಬಳಕೆ ಬಗ್ಗೆ ತಪಾಸಣೆ ಕೈಗೊಂಡಿದೆ. ಕಾರು, ಬೈಕ್ ಸೇರಿದಂತೆ ವಾಹನಗಳ ಸ್ವಚ್ಛತೆಗೆ, ಮನೆಯ ಅಂಗಳ ಸ್ವಚ್ಛತೆಗೆ, ಗಾರ್ಡನ್ ಗಿಡಗಳ ಪೋಷಣೆ ಸೇರಿದಂತೆ ಬೇರೆ ಬೇರೆ ಉದ್ದೇಶಗಳಿಗೆ ಕುಡಿಯುವ ನೀರು ಬಳಸುವಂತಿಲ್ಲ. ಅಂತಹ ಪ್ರಕರಣಗಳನ್ನು ಪತ್ತೆಹಚ್ಚಿ ದಂಡ ವಿಧಿಸುವ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ ಪ್ರಸಾದ್ ಮನೋಹರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇಸಿಗೆಯಲ್ಲಿ ಎಲ್ಲರಿಗೂ ಶುದ್ಧ ಕುಡಿಯುವ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡುವ ಉದ್ದೇಶದಿಂದ ಕುಡಿಯುವ ನೀರನ್ನು ಅನಗತ್ಯ ಪೋಲು ಮಾಡದಂತೆ ಜಲಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ. ಪ್ರಸ್ತುತ ನಗರದಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಳೆಯ ಕೊರತೆಯಿಂದ ಅಂತರ್ಜಲ ಸಹ ಕುಸಿತವಾಗಿದೆ ಎಂದು ಜಲಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.
ನಗರದಲ್ಲಿ ಅಂತರ್ಜಲ ಕುಸಿತದಿಂದ ನೀರಿನ ಅಭಾವ ಎದುರಾಗಬಹುದು ಎಂದು ಐಐಎಸ್ಸಿ ವಿಜ್ಞಾನಿಗಳು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ ಎನ್ನುವುದನ್ನು ಪತ್ರಿಕಾ ಪ್ರಕಟಣೆಯಲ್ಲಿ ಉಲ್ಲೇಖಿಸಿರುವ ಜಲಮಂಡಳಿ ಅಧ್ಯಕ್ಷರು, ಈಗಿನಿಂದಲೇ ಸಾರ್ವಜನಿಕರು ಕುಡಿಯುವ ನೀರನ್ನು ಸಮರ್ಪಕವಾಗಿ ಬಳಸುವುದು ಹಾಗೂ ಅನಗತ್ಯ ವ್ಯರ್ಥ ಮಾಡುವುದನ್ನು ತಡೆಯುವುದು ಕುಡಿಯುವ ನೀರಿನ ದುರ್ಬಳಕೆ ನಿಷೇಧ ಆದೇಶದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
ಯಾವ್ಯಾವುದಕ್ಕೆ ಕುಡಿಯುವ ನೀರಿನ ಬಳಕೆ ನಿಷೇಧ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು, ವಾಹನಗಳ ಸ್ವಚ್ಛತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜನೆಯ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲ್ಗಳಲ್ಲಿ ಕುಡಿಯುವ ನೀರಿನ ಹೊರತು ಅನ್ಯ ಬಳಕೆಗೆ, ರಸ್ತೆ ನಿರ್ಮಾಣ ಹಾಗೂ ಸ್ವಚ್ಛತೆಗೆ ಬಳಕೆ ಮಾಡದಂತೆ ನಿರ್ಬಂಧ ವಿಧಿಸಿ ಜಲಮಂಡಳಿ ಆದೇಶ ಹೊರಡಿಸಿದೆ.
ದಕ್ಷಿಣ ವಲಯದಲ್ಲಿ ಹೆಚ್ಚು ಪ್ರಕರಣ ದಾಖಲು
ಕುಡಿಯುವ ನೀರಿನ ಅನ್ಯ ಬಳಕೆ ನಿಷೇಧಿಸಿದ ಬಳಿಕ ಫೆಬ್ರವರಿ 23ರ ವರೆಗೆ ಒಟ್ಟು 112 ಪ್ರಕರಣಗಳನ್ನು ದಾಖಲಿಸಲಾಗಿದೆ. ದಕ್ಷಿಣ ವಲಯದಲ್ಲಿ ಹೆಚ್ಚು ಪ್ರಕರಣಗಳು (33) ದಾಖಲಾಗಿವೆ. ಉತ್ತರ ವಲಯದಲ್ಲಿ 23, ಪಶ್ಚಿಮ ವಲಯದಲ್ಲಿ 28, ಪೂರ್ವ ವಲಯದಲ್ಲಿ 28 ಪ್ರಕರಣಗಳು ದಾಖಲಾಗಿವೆ. ಮುಂದಿನ ದಿನಗಳಲ್ಲಿ ದಂಡ ಅಭಿಯಾನವನ್ನು ನಗರದಲ್ಲಿ ಮತ್ತಷ್ಟು ವ್ಯಾಪಕಗೊಳಿಸಲಾಗುವುದು ಎಂದು ಜಲಮಂಡಳಿ ಅಧ್ಯಕ್ಷರು ಎಚ್ಚರಿಸಿದ್ದಾರೆ.
ಬೆಂಗಳೂರು ಮಹಾನಗರಕ್ಕೆ ಸುಮಾರು 100 ಕಿಲೋಮೀಟರ್ಗಳ ದೂರದಿಂದ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಂತರ್ಜಲ ಕುಸಿತದಿಂದ ನೀರಿನ ಕೊರತೆ ಹೆಚ್ಚಾಗಬಹುದು ಎನ್ನುವ ಎಚ್ಚರಿಕೆಯಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಅಮೂಲ್ಯವಾಗಿರುವ ಶುದ್ಧ ಕುಡಿಯುವ ನೀರನ್ನು ಅನಗತ್ಯವಾಗಿ ವ್ಯರ್ಥ ಮಾಡುವುದನ್ನು ನಿಲ್ಲಿಸಬೇಕು. ಈ ಮೂಲಕ ಅಗತ್ಯವಿರುವ ಜನರಿಗೆ ಹಾಗೂ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಜಲ ಮಂಡಳಿಯ ಜೊತೆ ಕೈಜೋಡಿಸಬೇಕು ಎಂದು ಬಿಡಬ್ಲ್ಯುಎಸ್ಎಸ್ಬಿ ಮನವಿ ಮಾಡಿದೆ.
ಸಾರ್ವಜನಿಕರಿಗೆ ಮಂಡಳಿ ನೀಡಿದ ಆದೇಶಗಳನ್ನು ಯಾರಾದರೂ ಉಲ್ಲಂಘನೆ ಮಾಡುವುದು ಕಂಡುಬಂದರೆ, ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ 1916ಗೆ ತಿಳಿಸಬಹುದು.