ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ, ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರನ್ನು ಕೃಷಿ ರಾಯಭಾರಿಯಾಗಿ ಮುಂದುವರಿಸಲು ಸಾಧ್ಯವಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆಯಾಗುತ್ತದೆ. ದರ್ಶನ್ ವಿಐಪಿ ಸೌಕರ್ಯ ನೀಡಿಲ್ಲ” ಎಂದರು.
ಯಡಿಯೂರಪ್ಪ ವಿಚಾವಾಗಿ ಪ್ರತಿಕ್ರಿಯಿಸಿ, “ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ಬಂಧನಕ್ಕೆ ಜಾಮೀನುರಹಿತ ವಾರೆಂಟ್ ಹೊರಡಿಸಲು ನ್ಯಾಯಾಲಯ ಆದೇಶಿಸಿದೆ. ಇದರಲ್ಲಿ ಸರ್ಕಾರ ಹಸ್ತಕ್ಷೇಪ ಹೇಗೆ ಬರುತ್ತೆ? ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಪೋಸ್ಕೊ ಪ್ರಕರಣ ಅತ್ಯಂತ ಗಂಭೀರ ಪ್ರಕರಣ. ತಪ್ಪು ಮಾಡಿದ್ದಾರೋ, ಇಲ್ಲವೋ ಎಂದು ನ್ಯಾಯಾಲಯ ತೀರ್ಮಾನ ಮಾಡುತ್ತದೆ” ಎಂದು ಹೇಳಿದರು.
“ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಬೀಳುತ್ತಿದೆ. ಆ ಕಡೆ ಅವರು ಮೊದಲು ಗಮನ ಕೊಡಲಿ. ಕರ್ನಾಟಕದಲ್ಲಿ ಸರ್ಕಾರ ಉರುಳಿಸಲು ಅವರಿಗೆ 60 ಶಾಸಕರು ಬೆಂಬಲ ಬೇಕು. ಅವರು ರಾಜೀನಾಮೆ ನೀಡಿ, ಚುನಾವಣೆ ಎದುರಿಸಬೇಕು. ಇದು ಅಸಾಧ್ಯ. ಬಿಜೆಪಿ ಹಾಗೂ ಜೆಡಿಎಸ್ನ ಸಾಕಷ್ಟು ಶಾಸಕರು ನಮ್ಮ ಜೊತೆ ಇದ್ದಾರೆ” ಎಂದರು.
ಮೂವರು ಉಪಮುಖ್ಯಮಂತ್ರಿ ವಿಚಾರವಾಗಿ ಪ್ರತಿಕ್ರಿಯಿಸಿ, “ಕೆ.ಎನ್. ರಾಜಣ್ಣ ಹೇಳಿರುವ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇವೆ. ಅಲ್ಲಿ ನಮ್ಮ ಅಭಿಪ್ರಾಯ ತಿಳಿಸುತ್ತೇವೆ. ಲೋಕಸಭಾ ಚುನಾವಣೆಯನ್ನು ಎಲ್ಲರೂ ಗಂಭಿರವಾಗಿ ಎದುರಿಸಿದ್ದಾರೆ. ಹಾಗಾಗಿ, ತಲೆದಂಡ ಪ್ರಶ್ನೆ ಉದ್ಭವಿಸದು” ಎಂದು ತಿಳಿಸಿದರು.
“ಸಿಎಂ ಕುರ್ಚಿ ಖಾಲಿ ಇಲ್ಲ. ಸದ್ಯಕ್ಕೆ ಆ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಆಗುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ, ಅದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಸಿಎಂ ಆಗಲು ಶಾಸಕರ ಬೆಂಬಲ ಬೇಕು” ಎಂದರು.