ಮಾಜಿ ಸಭಾಧ್ಯಕ್ಷ ಕೆ ಆರ್ ರಮೇಶಕುಮಾರ್ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನಲಾದ ಅರಣ್ಯ ಜಮೀನು ಜಂಟಿ ಸರ್ವೆಗೆ ಜಿಲ್ಲಾಡಳಿತ ದಿನಾಂಕ ನಿಗದಿ ಮಾಡಿದೆ.
ಜಿನಗುಲಕುಂಟೆ ಅರಣ್ಯ ಪ್ರದೇಶದಲ್ಲಿ ರಮೇಶಕುಮಾರ್ 61.39 ಎಕರೆ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ (ಡಿ. 20) ಮಾಜಿ ಸ್ಪೀಕರ್ ರಮೇಶಕುಮಾರ್ ಅರಣ್ಯ ಒತ್ತುವರಿ ಬಗ್ಗೆ ಜಂಟಿ ಸರ್ವೇ ನಡೆಯಲಿದೆ.
ಸೂಕ್ತ ದಾಖಲೆಗಳೊಂದಿಗೆ ಸ್ಥಳಕ್ಕೆ ಹಾಜರಾಗುವಂತೆ ರಮೇಶಕುಮಾರ್ಗೆ ಸೂಚನೆ ನೀಡಲಾಗಿದೆ. ಬೆಂಗಳೂರು ಪ್ರಾದೇಶಿಕ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಯಿಂದ ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ ಪತ್ರ ಬರೆಯಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣವೇ ಅರಣ್ಯ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೇ ಕಾರ್ಯ ಕೈಗೊಳ್ಳಲು ತಿಳಿಸಿದ ಹಿನ್ನೆಲೆಯಲ್ಲಿ ಸರ್ವೇ ಕೈಗೊಳ್ಳಲಾಗಿದೆ ಎಂದು ಕೋಲಾರ DFO ಏಡುಕೊಂಡಲು ತಮ್ಮ ಕಚೇರಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಶ್ರೀನಿವಾಸಪುರ ವಲಯದಲ್ಲಿ ಬಡವರು ಒತ್ತುವರಿ ಮಾಡಿಕೊಂಡಿದ್ದ ಸಾವಿರಾರು ಎಕರೆ ಜಮೀನನ್ನು ತೆರವುಗೊಳಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳು, ಬಲಾಢ್ಯರ ಜಮೀನನ್ನು ತೆರವುಗೊಳಿಸುತ್ತಿಲ್ಲ. ಜಿನಗಲಕುಂಟೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವುಗೊಳಿಸಲು ಮುಂದಾಗುತ್ತಿಲ್ಲ ಎಂದು ಕೇಂದ್ರ ಅರಣ್ಯ ಇಲಾಖೆಗೆ ಕೆಲವರು ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಕೇಂದ್ರ ಅರಣ್ಯ ಇಲಾಖೆಯು ಕೂಡಲೇ ಒತ್ತುವರಿ ತೆರವುಗೊಳಿಸಿ ವರದಿ ನೀಡುವಂತೆ ರಾಜ್ಯ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಜ್ಯ ಮಟ್ಟದ ಅಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದ್ದರು.
ಪ್ರಕರಣವನ್ನು ವಿಲೇ ಮಾಡಿದ್ದ ಕರ್ನಾಟಕ ಹೈಕೋರ್ಟ್ ಕೆ.ಆರ್. ರಮೇಶಕುಮಾರ್ ಅವರ ಉಪಸ್ಥಿತಿಯಲ್ಲಿ ಜಂಟಿ ಸರ್ವೆ ನಡೆಸಿ, ಅರಣ್ಯ ಜಮೀನು ಒತ್ತುವರಿ ಆಗಿರುವುದು ಕಂಡು ಬಂದಲ್ಲಿ ತೆರವುಗೊಳಿಸಿ ಕ್ರಮ ಜರುಗಿಸಬೇಕೆಂದು ಸೂಚಿಸಿತ್ತು. ಆದರೆ, ಜಂಟಿ ಸರ್ವೆ ನಡೆದಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು.