ನಾವು ಇಂದು ಕೃತಕ ಬುದ್ಧಿಮತ್ತೆಯ ಕಾಲಘಟ್ಟಕ್ಕೆ ಅಡಿಯಿಟ್ಟಿದ್ದೇವೆ. ಕೃತಕ ಬುದ್ಧಿಮತ್ತೆಯ ತಾಂತ್ರಿಕ ಬದಲಾವಣೆಯಿಂದಾಗಿ ಪ್ರಪಂಚದಾದ್ಯಂತದ ಸಂಸ್ಥೆಗಳು ಮರುರೂಪಿಸಲ್ಪಡುತ್ತಿರುವ ಪ್ರಸ್ತುತ ಸಮಯದಲ್ಲಿ, “ಕೃತಕ ಬುದ್ಧಿಮತ್ತೆಯ ಯುಗದಲ್ಲಿ ನ್ಯಾಯಾಂಗವನ್ನು ಮರುರೂಪಿಸುವುದು” ಎಂಬ ವಿಷಯದ ಕುರಿತ ಈ ಸಮ್ಮೇಳನವು ಬಹಳ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯ ಪಟ್ಟರು.
ಬೆಂಗಳೂರಿನ ಜಿಕೆವಿಕೆಯ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ನಡೆದ ನ್ಯಾಯಾಂಗ ಅಧಿಕಾರಿಗಳ 22ನೇ ದ್ವೈವಾರ್ಷಿಕ ರಾಜಮಟ್ಟದ ಸಮ್ಮೇಳನ ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಸಕ್ತ ಕಾಲಘಟ್ಟದಲ್ಲಿ ಕಾನೂನು ಮತ್ತು ತಂತ್ರಜ್ಞಾನವು ಪ್ರತ್ಯೇಕ ಕ್ಷೇತ್ರಗಳಾಗಿ ಉಳಿದಿಲ್ಲ. ಈಗ ಮುಂದುವರೆದು ನ್ಯಾಯಾಂಗ ಕ್ಷೇತ್ರಕ್ಕೆ ಕೃತಕ ಬುದ್ಧಿಮತ್ತೆಯ ಪ್ರವೇಶವಾಗಿದೆ. ಅದರಿಂದಾಗಿ ಆಡಳಿತ, ಹಕ್ಕುಗಳು ಮತ್ತು ನ್ಯಾಯದ ಸ್ವರೂಪವನ್ನು ರೂಪಿಸುವ ಪರಸ್ಪರ ಸಂಬಂಧ ಹೊಂದಿರುವ ಶಕ್ತಿಗಳ ನಡುವೆ ನಿರ್ಣಾಯಕ ಹಂತದಲ್ಲಿ ನಾವು ಇಂದು ನಿಂತಿದ್ದೇವೆ ಎಂದರು.
ನಾವು ಪುರಾವೆಗಳನ್ನು ಹೇಗೆ ಅರ್ಥೈಸಿಕೊಳ್ಳುತ್ತೇವೆ, ಸತ್ಯಗಳನ್ನು ಹೇಗೆ ಅರ್ಥಮಾಡಿಕೊಳ್ಳುತ್ತೇವೆ ಮತ್ತು ನಿರ್ಧಾರಗಳನ್ನು ಹೇಗೆ ತಲುಪುತ್ತೇವೆ ಎಂಬುದನ್ನು ಪ್ರಶ್ನಿಸುವ ಪರಿವರ್ತನಾ ಶಕ್ತಿಯಾಗಿ ಕೃತಕ ಬುದ್ಧಿಮತ್ತೆ ಹೊರಹೊಮ್ಮುತ್ತಿದೆ. ಕೃತಕ ಬುದ್ಧಿಮತ್ತೆಯ ಸಹಾಯದಿಂದ ತ್ವರಿತ ಕಾನೂನು ಸಂಶೋಧನೆ, ಪ್ರಕರಣಗಳ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಸುಧಾರಿತ ನಿರ್ವಹಣೆ ವ್ಯವಸ್ಥೆಗಳ ಮೂಲಕ ಬಾಕಿ ಇರುವ ಪ್ರಕರಣಗಳನ್ನು ಕಡಿಮೆ ಮಾಡುವ ಸಾಧ್ಯತೆ ಇದೆ ಎಂದು ಹೇಳಿದರು.
“ಇದೇ ಸಮಯದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಸಿಕೊಳ್ಳುವುದರ ಕುರಿತು
ಆಳವಾದ ಕಳವಳಗಳು ಮೂಡದೇ ಇರಲಾರದು. ಅಲ್ಗಾರಿದಮಿಕ್ ಪಕ್ಷಪಾತವು ಕಾನೂನಿನ ಮುಂದೆ ಸಮಾನತೆಯ ಖಾತರಿಯನ್ನು ಹಾಳುಮಾಡಬಹುದು. ಅಪಾರದರ್ಶಕ ವ್ಯವಸ್ಥೆಗಳು ನಮ್ಮ ನ್ಯಾಯಾಂಗ ವ್ಯವಸ್ಥೆಯ ತಾರ್ಕಿಕ ನಿರ್ಧಾರಗಳ ಸಿದ್ಧಾಂತವನ್ನು ದುರ್ಬಲಗೊಳಿಸುವ ಆತಂಕವನ್ನು ಅಲ್ಲಗಳೆಯುವಂತಿಲ್ಲ” ಎಂದರು.
ನ್ಯಾಯಾಧೀಶರ ಅಧಿಕಾರವನ್ನು ಎಂದಿಗೂ ಅಲ್ಗಾರಿದಮ್ನ ಅಧಿಕಾರವು ಮರೆಮಾಡಬಾರದು. ಸಾಂವಿಧಾನಿಕ ನೈತಿಕತೆಯು ನೈಸರ್ಗಿಕ ಭಾವನೆಯಲ್ಲ, ಅದನ್ನು ಬೆಳೆಸಿಕೊಳ್ಳಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ನಮಗೆ ನೆನಪಿಸಿದ್ದರು. ಸಾಂವಿಧಾನಿಕ ಮೌಲ್ಯಗಳು ತಾಂತ್ರಿಕ ಅಳವಡಿಕೆಗೆ ಮಾರ್ಗದರ್ಶನ ನೀಡುತ್ತವೆಯೇ ಹೊರತು ಅದೇ ಪರ್ಯಾಯವಲ್ಲ ಎಂಬುದನ್ನು ಮನಗಾಣಬೇಕು” ಎಂದು ಕಿವಿಮಾತು ಹೇಳಿದರು.


