ಹಿಂದಿನ ಬಿಜೆಪಿ ಸರ್ಕಾರದಲ್ಲಿ 21 ಹಗರಣ ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು (ಸೆ.11) ಅರಣ್ಯಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, “ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್ ಕೆ ಪಾಟೀಲ್ ಅವರು ಸದಸ್ಯರಾಗಿದ್ದಾರೆ” ಎಂದರು.
“ಸಮಿತಿಗೆ ವರದಿಯನ್ನು ನೀಡಲು ಒಂದರಿಂದ ಎರಡು ತಿಂಗಳ ಅವಧಿಯನ್ನು ನೀಡಲಾಗಿದೆ. ಪಿಎಸ್ಐ ಹಗರಣ, 40% ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ. ಅದರಲ್ಲಿ ಕೋವಿಡ್ 19 ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು” ಎಂದು ಹೇಳಿದರು.
ತಪ್ಪಿತಸ್ಥರ ವಿರುದ್ಧ ಕ್ರಮ ಖಂಡಿತ
ಸರ್ಕಾರ ತನಿಖೆಗೆ ಸೂಚಿಸುವ ಮೂಲಕ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವುದಕ್ಕೆ ಪ್ರತಿಕ್ರಿಯಿಸಿ, “ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು” ಎಂದರು.
ಪಿಎಸ್ಐ ಹಗರಣ- ಎಸ್ಐಟಿ ಕ್ರಮಕ್ಕೆ ಸೂಚನೆ
ಪಿಎಸ್ಐ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗ ವರದಿಯನ್ನು ನೀಡಿದ್ದು, ಯಾವುದೇ ಕ್ರಮವಾಗಿಲ್ಲದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ಈ ಹಗರಣದ ಬಗ್ಗೆ ವಿಶೇಷ ತನಿಕಾ ತಂಡ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ” ಎಂದು ಹೇಳಿದರು.
ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ
ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಹಾಗೂ ಕೇಂದ್ರ ಜಾರಿ ನಿರ್ದೇಶನಾಲಯದ ತನಿಖೆಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಈ ಪ್ರಕರಣದ ಬಗ್ಗೆ ಎಸ್ಐ ಟಿಯವರೂ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ” ಎಂದರು.
ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಇತರ ಸಚಿವರು ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ, ಈ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ” ಎಂದು ತಿಳಿಸಿದರು.


