ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ವಿಭಜನೆಯಾಗಬಾರದು ಹಾಗೂ ಈ ನಗರ ಕನ್ನಡಿಗರಿಗಾಗಿಯೇ ಇರಬೇಕು ಎಂಬ ಕಾರಣಕ್ಕೆ ರಾಜ್ಯ ಸರ್ಕಾರದ ಬೆಂಗಳೂರು ವಿಭಜನೆ ತೀರ್ಮಾನವನ್ನು ವಿರೋಧಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸ್ಥಾಪನೆಗೆ ಸಂಬಂಧಿಸಿದಂತೆ ಸಾಧಕ-ಬಾಧಕ ಚರ್ಚಿಸಲು ಆಯೋಜಿಸಿದ್ದ ಪ್ರಾತ್ಯಕ್ಷಿಕೆಯಲ್ಲಿ ಅವರು ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
“ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಬ್ಭಾಗವಾಗದೆ ಹೀಗೆಯೇ ಉಳಿಯಬೇಕು. ಇಲ್ಲಿ ಕನ್ನಡಿಗರೇ ಸಾರ್ವಭೌಮರಾಗಿದ್ದು, ಇದು ಕನ್ನಡಿಗರಿಗಾಗಿಯೇ ಉಳಿಯಬೇಕು. ಇಲ್ಲಿ ಕನ್ನಡದವರೇ ಮೇಯರ್ ಆಗಬೇಕು. ಇದಕ್ಕಾಗಿ ಬೆಂಗಳೂರು ವಿಭಜನೆಯನ್ನು ಬಿಜೆಪಿ ಮತ್ತು ಜೆಡಿಎಸ್ ವಿರೋಧಿಸುತ್ತವೆ” ಎಂದು ತಿಳಿಸಿದರು.
“ಕಾಂಗ್ರೆಸ್ ಸರ್ಕಾರ ತಜ್ಞರು ನೀಡಿರುವ ವರದಿಯ ಶೇಕಡಾ ಇಒ್ಪತ್ತರಿಂದ ಮುವತ್ತರಷ್ಟನ್ನು ಮಾತ್ರ ವಿಧೇಯಕದಲ್ಲಿ ಅಳವಡಿಸಿಕೊಂಡಿದೆ ಎಂಬುದನ್ನು ವಿ.ರವಿಚಂದ್ರ ಅವರು ಸ್ಪಷ್ಟಪಡಿಸಿದ್ದಾರೆ. ಜತೆಗೆ ಯಾರಾದರೂ ಕೊರ್ಟ್ನಲ್ಲಿ ಪ್ರಶ್ನೆ ಮಾಡಿದರೆ ಬಿದ್ದು ಹೋಗುತ್ತದೆ ಎಂದೂ ತಿಳಿಸಿದ್ದಾರೆ. ಈ ಹಿನ್ನೆಲೆ ಯಲ್ಲಿ ಅದರಲ್ಲಿರುವ ಲೋಪಗಳನ್ನು ಸರ್ಕಾರಕ್ಕೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಗುವುದು” ಎಂದರು.
ಸಿಎಂ ಬದಲಾವಣೆ
“ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯನವರು ಸಂಗೊಳ್ಳಿ ರಾಯಣ್ಣನವರ ಉದಾಹರಣೆ ಮೂಲಕ ಬೆನ್ನಿಗೆ ಚೂರಿ ಹಾಕಲಾಗುತ್ತಿದೆ ಎಂದು ಎರಡು ಸಲ ಹೇಳಿಕೆ ನೀಡಿದ್ದಾರೆ. ಅವರ ಪಕ್ಷದವರೇ ಅವರಿಗೆ ಮೋಸ ಮಾಡುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ನಾವ್ಯಾರೂ ಆರ್ಟಿಐ ಅರ್ಜಿ ಹಾಕಿಲ್ಲ, ಅವರ ಪಕ್ಷದವರೇ ಎಲ್ಲ ದಾಖಲೆಗಳನ್ನು ಹೊರಗೆ ತಂದಿದ್ದಾರೆ” ಎಂದು ಹೇಳಿದರು.
“ರಾಜ್ಯದಲ್ಲಿ 60 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ತಯಾರಿ ನಡೆದಿದೆ. ಇದರಿಂದ ಸರ್ಕಾರಕ್ಕೆ ಹಣ ಉಳಿತಾಯವಾಗಲಿದೆ. ಈಗಾಗಲೇ ಬಿಪಿಎಲ್ ಕಾರ್ಡುದಾರರಿಗೆ ಅಧಿಕಾರಿಗಳು ಕಿರುಕುಳ ನೀಡಲಾರಂಭಿಸಿದ್ದಾರೆ. ಇದಕ್ಕಾಗಿ ಖಾಸಗಿ ಏಜೆನ್ಸಿ ನೇಮಕ ಮಾಡಿ, ಆ ಮೂಲಕ ಕಾರ್ಡ್ ರದ್ದುಪಡಿಸಿ ಗ್ಯಾರಂಟಿಗೆ ಹಣ ಉಳಿಸಲಾಗುತ್ತಿದೆ. ಜನರಿಗೆ ಗೊತ್ತಾಗದಂತೆ ತೆರಿಗೆ ವಿಧಿಸುವುದು ಹೇಗೆಂದು ತಂತ್ರ ಮಾಡಲು ಸಮಿತಿ ನೇಮಿಸಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಡಲಿದೆ” ಎಂದು ತಿಳಿಸಿದರು.