Homeಕರ್ನಾಟಕಬಿಜೆಪಿ-ಜೆಡಿಎಸ್‌ ಪಾದಯಾತ್ರೆ | ಮೈಸೂರು ಚಲೋಗೆ ಸರ್ಕಾರ ಉರುಳಿಸುವ ಶಕ್ತಿ ಇದೆ: ವಿಜಯೇಂದ್ರ

ಬಿಜೆಪಿ-ಜೆಡಿಎಸ್‌ ಪಾದಯಾತ್ರೆ | ಮೈಸೂರು ಚಲೋಗೆ ಸರ್ಕಾರ ಉರುಳಿಸುವ ಶಕ್ತಿ ಇದೆ: ವಿಜಯೇಂದ್ರ

ಮೈಸೂರು ಚಲೋ ಪಾದಯಾತ್ರೆಯು ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಶಕ್ತಿ ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಕೆಂಗೇರಿಯಲ್ಲಿ ಶನಿವಾರ ಬಿಜೆಪಿ-ಜೆಡಿಎಸ್ ಸಮನ್ವಯದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಉದ್ಘಾಟನೆ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದ ಅವರು, “ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ವಚನಭ್ರಷ್ಟವಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ” ಎಂದು ಆರೋಪಿಸಿದರು.

“ಅಹಿಂದ ವರ್ಗದವರಿಗೆ ಸಾಮಾಜಿಕ ನ್ಯಾಯ ಕೊಡುವುದಾಗಿ ಹೇಳಿದ್ದ ಸಿದ್ದರಾಮಯ್ಯನವರ ಸರ್ಕಾರ ಪರಿಶಿಷ್ಟ ಸಮುದಾಯದ ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು ಲೂಟಿ ಮಾಡಿದೆ. ಮೈಸೂರಿನ ಮುಡಾದ ಅವ್ಯವಹಾರದಡಿ ಬಡವರಿಗೆ ನಿವೇಶನಗಳನ್ನು ವಂಚಿಸಿದ್ದಾರೆ. 5 ಸಾವಿರ ಕೋಟಿಯ ಹಗರಣ ಅಲ್ಲಿ ನಡೆದಿದೆ” ಎಂದು ದೂರಿದರು.

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮಾತನಾಡಿ,”ಭ್ರಷ್ಟಾಚಾರದಲ್ಲಿ ಸಿಲುಕಿದ ಸಿದ್ದರಾಮಯ್ಯನವರು ಗೌರವಯುತವಾಗಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಿರ್ಗಮಿಸಲಿ. ಈ ಪಾದಯಾತ್ರೆ ಮಧ್ಯದಲ್ಲೇ ಸಿದ್ದರಾಮಯ್ಯನವರು ರಾಜೀನಾಮೆ ಕೊಡಲಿದ್ದಾರೆ” ಎಂದರು.

“ಕುಂಟುನೆಪ ಬೇಡ. ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆವರೆಗೂ ಹೋರಾಟ ಮುಂದುವರೆಯುತ್ತದೆ” ಎಂದು ತಿಳಿಸಿದರು.

ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್‌ದಾಸ್ ಅಗರವಾಲ್ ಮಾತನಾಡಿ, “ರಾಹುಲ್ ಗಾಂಧಿಯವರ ಸೂಚನೆಯಂತೆ ಈ ಹಗರಣ ನಡೆದಿದೆ. ಹಣವನ್ನು ಹೈಕಮಾಂಡಿಗೆ ಕಳುಹಿಸಲಾಗಿದೆ. ಚುನಾವಣಾ ಭ್ರಷ್ಟಾಚಾರಕ್ಕೆ ಹಣ ಬಳಸಿದ್ದಾರೆ. ಡಿ.ಕೆ.ಶಿವಕುಮಾರ್ ಕೂಡ ಭ್ರಷ್ಟರು; ಅವರ ಅಕ್ರಮ ಹಣ ಈ ಹಿಂದೆ ಸಿಕ್ಕಿತ್ತು” ಎಂದು ಆರೋಪಿಸಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, “ಕಾಂಗ್ರೆಸ್ಸಿನ ಡಿಎನ್‌ಎಯಲ್ಲೇ ಭ್ರಷ್ಟಾಚಾರ ಹಾಸುಹೊಕ್ಕಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ದೇಶದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿತ್ತು. ಸಿದ್ದರಾಮಯ್ಯನವರೇ ಈ ಹಗರಣ ನಿಮ್ಮ ಕೈಯಿಂದಲೇ ನಡೆದಿದೆ. ಭ್ರಷ್ಟತನ ಮುಚ್ಚಿಹಾಕಲು ರಾಜ್ಯಪಾಲರನ್ನು ಬೆದರಿಸುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಕೂಡ ಇದರಲ್ಲಿ ಪಾಲುದಾರಿಕೆ ಪಡೆದಿದೆ” ಎಂದು ನೇರವಾಗಿ ದೂರಿದರು.

ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, “ನಾವು ನಿಲುವಳಿ ಸೂಚನೆ ಮೂಲಕ ಮುಡಾ ಹಗರಣದ ವಿವರ ಕೇಳಿದ್ದೆವು. ಮುಡಾದಲ್ಲಿ 3ರಿಂದ 4 ಸಾವಿರ ಕೋಟಿಯ ಹಗರಣ ಆಗಿದೆ ಎಂದು ಅವರ ಪಕ್ಷದವರೇ ಹೇಳಿದ್ದಾರೆ. ವಿಪಕ್ಷದ ಹೋರಾಟದ ಹಕ್ಕನ್ನು ಮುಂದಿಟ್ಟು ನಾವು ಪಾದಯಾತ್ರೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

“ದಲಿತ ವ್ಯಕ್ತಿಯ ಜಮೀನು ನುಂಗಿದ್ದಾರೆ. ಸಿದ್ದರಾಮಯ್ಯನವರು ತಪ್ಪು ಮಾಡದೆ ಇದ್ದರೆ ಅವರ್ಯಾಕೆ ರಾಜ್ಯಪಾಲರನ್ನು ಪ್ರಶ್ನಿಸುತ್ತಿದ್ದಾರೆ. ಒಂದು ನೋಟಿಸ್‌ಗೇ ಕಾಂಗ್ರೆಸ್ಸಿಗರು ಗಡಗಡ ನಡುಗುತ್ತಿದ್ದಾರೆ. ಕಾಂಗ್ರೆಸ್ ಇವತ್ತು ಒಡೆದ ಮನೆಯಾಗಿದೆ” ಎಂದರು.

ಕೇಂದ್ರ ಸಚಿವರಾದ ವಿ.ಸೋಮಣ್ಣ, ಕು.ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ, ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್‌ನ ನಾಯಕ ಸುರೇಶ್, ಮಾಜಿ ಸಚಿವರು, ಬಿಜೆಪಿ- ಜೆಡಿಎಸ್ ಸಂಸದರು, ಎರಡೂ ಪಕ್ಷಗಳ ಶಾಸಕರು, ಮುಖಂಡರು, ಮಾಜಿ ಸಂಸದರು, ಮಾಜಿ ಶಾಸಕರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments