ಹತ್ತು ವರ್ಷ ನಮ್ಮದೇ ಅಧಿಕಾರ, ಸರ್ಕಾರ ಎಂದು ಕಾಂಗ್ರೆಸ್ ನಾಯಕರು ಬೀಗುತ್ತಿದ್ದಾರೆ. ಹತ್ತು ವರ್ಷದ ಮಾತಿರಲಿ, ಹತ್ತು ತಿಂಗಳು ಅಧಿಕಾರದಲ್ಲಿ ಇರಲಿ ನೋಡೋಣ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸವಾಲು ಹಾಕಿದರು.
ಬೆಂಗಳೂರಿನಿಂದ ಮೈಸೂರುವರೆಗೆ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ನಿಮ್ಮ ಸರ್ಕಾರವನ್ನು ಯಾರೂ ಅಸ್ಥಿರ ಮಾಡಿಕೊಳ್ಳುತ್ತಿಲ್ಲ. ನೀವೇ ಜನರು ಕೊಟ್ಟ ಅವಕಾಶವನ್ನು ಹಾಳು ಮಾಡಿಕೊಳ್ಳುತ್ತಿದ್ದೀರಿ” ಎಂದರು.
“ಹಗರಣಗಳ ಮೇಲೆ ಹಗರಣಗಳನ್ನು ನಡೆಸಿ ಅಕ್ರಮ ಎಸಗಿದ್ದೀರಿ. ಈಗ ನೋಡಿದರೆ ಬಿಜೆಪಿ-ಜೆಡಿಎಸ್ ಪಕ್ಷಗಳನ್ನು ಪ್ರಶ್ನೆ ಮಾಡುತ್ತೇವೆ ಎಂದು ಹೊರಟಿದ್ದೀರಿ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಅಧಿಕಾರಕ್ಕೆ ಬಂದು ಜನಪರ ಕೆಲಸ ಮಾಡುವುದು ಬಿಟ್ಟು ಕಾನೂನು ಬಾಹಿರ ಚಟುವಟಿಕೆಗಳು, ಭ್ರಷ್ಟಾಚಾರದಲ್ಲಿ ನಿರತರಾಗಿದ್ದೀರಿ. ಹಿಂದೆಂದೂ ಕಂಡಿರದಂತಹ ಭ್ರಷ್ಟ ಸರ್ಕಾರವನ್ನು ಕಾಣುತ್ತಿದ್ದೇವೆ” ಎಂದು ದೂರಿದರು.
“ಈ ಕೆಟ್ಟ ಕಾಂಗ್ರೆಸ್ ಜನ ವಿರೋಧಿ ಸರ್ಕಾರ ವಿರುದ್ಧ ನಾವು ಜಂಟಿ ಹೋರಾಟ ಹಮ್ಮಿಕೊಂಡಿದ್ದೇವೆ. ಜನರಿಗೆ ಇವರ ಆಕ್ರಗಳನ್ನು ಮನವರಿಕೆ ಮಾಡಿಕೊಡುತ್ತೇವೆ. ಆದಿಶಕ್ತಿ ತಾಯಿ ಕೆಂಪಮ್ಮ ದೇವಿಗೆ ಪೂಜೆ ಸಲ್ಲಿಸಿ ಯಡಿಯೂರಪ್ಪನವರ ಇನ್ನಿತರೆ ಮಾರ್ಗದರ್ಶಕರ ನೇತೃತ್ವದಲ್ಲಿ ಮೈಸೂರು ಪಾದಯಾತ್ರೆ ಮಾಡುತ್ತಿದ್ದೇವೆ. ನಾಡಿನ ಜನತೆಯ ಅಭಿಪ್ರಾಯ ಏನಿದೆ ಅದರ ಪರವಾಗಿ ನಾವು ಪಾದಯಾತ್ರೆ ಮಾಡುತ್ತಿದ್ದೇವೆ” ಎಂದರು.
ಡಿಕೆಶಿಯದ್ದು ನಾವು ಬಿಚ್ಚಿಡುತ್ತೇವೆ
ನಮ್ಮ ಪಾದಯಾತ್ರೆ ತಡೆಯಲು ಕಾಂಗ್ರೆಸ್ ನಾಯಕರು ಬಿಡದಿಯಲ್ಲಿ ಪ್ರಶ್ನೆ ಮಾಡಿದ್ದಾರೆ. ಅದಾದ ಮೇಲೆ ಮುಂದೆಯೂ ಪ್ರಶ್ನೆ ಮಾಡುತ್ತಾರಂತೆ. ಮಾಡಲಿ, ಅವರಿಗೆ ತಕ್ಕ ಉತ್ತರ ಕೊಡುತ್ತೇವೆ. ಅವರು ಕೇಳಿರುವ ಪ್ರಶ್ನೆಗಳಿಗೆ ಬಿಡದಿ, ರಾಮನಗರದಲ್ಲಿ ಉತ್ತರ ಕೊಡುತ್ತೇನೆ” ಎಂದು ಹೇಳಿದರು.
“ಹಿಂದುಳಿದ ವರ್ಗಗಳ ನಾಯಕರು ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವುದಕ್ಕೆ ಕೆಲವರಿಗೆ ಹೊಟ್ಟೆ ಉರಿಯಿಂದ ಎನ್ನುತ್ತಾರೆ ಇವರು. ಒಳ್ಳೆಯ ಕೆಲಸ ಮಾಡಿದರೆ ಯಾರಿಗೆ ಹೊಟ್ಟೆ ಉರಿ ಬರುತ್ತದೆ? ಸುಖಾಸುಮ್ಮನೆ ಜನರ ಗಮನ ಬೇರೆಡೆಗೆ ಸೆಳೆಯಲು ನಾನು ಹಿಂದುಳಿದವನು, ಅದಕ್ಕೆ ಹೊಟ್ಟೆ ಉರಿ ಎಂದು ನಾಟಕ ಮಾಡುತ್ತಿದ್ದಾರೆ” ಎಂದು ಟೀಕಿಸಿದರು.
ಸಿಎಂ ಮೇಲೆ ತೀವ್ರ ವಾಗ್ದಾಳಿ
“ಮುಡಾ ಹಗರಣದಲ್ಲಿ ನಿಮ್ಮ ಹೆಸರು ಬಂದಿದೆ. ನಿವು ನಿವೇಶನ ಪಡೆದಿರುವುದಕ್ಕೆ ನಮಗೆ ಅಭ್ಯಂತರ ಇಲ್ಲ. ಆದರೆ, ಸರ್ಕಾರದ ಜಮೀನು ನಿಮ್ಮ ಬಾಮೈದನ ಹೆಸರಿಗೆ ಖರೀದಿಸಿ, ಆ ನಂತರ ಸಹೋದರಿಗೆ ಕೊಡುತ್ತೀರಿ. ಇದು ಹೇಗೆ ರವಾನೆಯಾಗಿದೆ ಎನ್ನುವುದು ನಿಮಗೆ ಗೊತ್ತಿಲ್ಲವೇ ಸಿದ್ದರಾಮಯ್ಯನವರೇ” ಎಂದು ಪ್ರಶ್ನಿಸಿದರು.