ಕಾನೂನು ಮತ್ತು ಸುವ್ಯವಸ್ಥೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಸೋಮವಾರ ಕಂಪ್ಲಿಯಿಂದ ಬಳ್ಳಾರಿ ಕಡೆಗೆ ಮುಂದುವರಿಯಿತು.
‘ಬಿಜೆಪಿಯ ಪಾದಯಾತ್ರೆ–ಇದು ಜನಮನ ಪಾದಯಾತ್ರೆ’ ಎಂಬ ಹಾಡು ಸೇರಿದಂತೆ ವಿವಿಧ ಹಾಡುಗಳೊಂದಿಗೆ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ರೈತರು, ಮಹಿಳೆಯರು ಸೇರಿದಂತೆ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಾದಯಾತ್ರೆಗೆ ಬೆಂಬಲ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ರಾಜ್ಯದಲ್ಲಿನ ಕಾನೂನು-ಸುವ್ಯವಸ್ಥೆ ಪರಿಸ್ಥಿತಿಯನ್ನು ಖಂಡಿಸಿ ಬಿಜೆಪಿ ವತಿಯಿಂದ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದರು.
ಪಾದಯಾತ್ರೆಯಲ್ಲಿ ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಮಾಜಿ ಸಚಿವರಾದ ಬಿ. ಶ್ರೀರಾಮುಲು, ಗಾಲಿ ಜನಾರ್ಧನ ರೆಡ್ಡಿ, ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಸಿದ್ದು ಪಾಟೀಲ್, ವಿಧಾನಪರಿಷತ್ ಸದಸ್ಯರಾದ ಹೇಮಲತಾ ನಾಯ್ಕ್, ವೈ.ಎಂ. ಸತೀಶ್, ರಘು ಕೌಟಿಲ್ಯ, ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜುಗೌಡ ನಾಯಕ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು, ಎಸ್.ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ ಸೇರಿದಂತೆ ಹಲವು ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಮಾಜಿ ಶಾಸಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಕಂಪ್ಲಿಯಿಂದ ಬಳ್ಳಾರಿ ಕಡೆಗೆ ಸಾಗಿದ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರ ಉತ್ಸಾಹ ಗಮನ ಸೆಳೆಯಿತು.


