Homeಕರ್ನಾಟಕ'ವಿಕಸಿತ ಭಾರತ'ದ ಬಜೆಟ್ ಅಲ್ಲ, 'ಅವನತಿ ಭಾರತ'ದ ಬಜೆಟ್: ಸಿಎಂ ಸಿದ್ದರಾಮಯ್ಯ ಟೀಕೆ

‘ವಿಕಸಿತ ಭಾರತ’ದ ಬಜೆಟ್ ಅಲ್ಲ, ‘ಅವನತಿ ಭಾರತ’ದ ಬಜೆಟ್: ಸಿಎಂ ಸಿದ್ದರಾಮಯ್ಯ ಟೀಕೆ

ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ ಎಂಎಸ್‌ಪಿ ಬಗ್ಗೆ ಉಸಿರೇ ಬಿಟ್ಟಿಲ್ಲ. ರೈತ ಸಮುದಾಯಕ್ಕೆ ಅತ್ಯಂತ ದೊಡ್ಡ ದ್ರೋಹ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ (ಫೆ.1) ಮಂಡಿಸಿದ 2025 -26ನೇ ಸಾಲಿನ ಕೇಂದ್ರ ಬಜೆಟ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಬೇಸರ ಹೊರಹಾಕಿದ್ದಾರೆ.

ಕೇಂದ್ರ ಬಜೆಟ್‌ ಅನ್ನು ದೀರ್ಘವಾಗಿ ವಿಶ್ಲೇಷಣೆಗೆ ಒಳಪಡಿಸಿರುವ ಅವರು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಈ ಬಗ್ಗೆ ಮಾತನಾಡಿ, “ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರಲ್ಲಿ ಒಬ್ಬರೂ ರಾಜ್ಯದ ಹಿತಾಸಕ್ತಿ ಬಗ್ಗೆ ನೆಪಕ್ಕೂ ಬಾಯಿ ಬಿಟ್ಟಿಲ್ಲ. ರಾಜ್ಯಕ್ಕೆ ಏಕೆ ಚೊಂಬು ಕೊಟ್ಟಿದ್ದೀರಿ ಎಂದು ಬಿಜೆಪಿ-ಜೆಡಿಎಸ್ ಸಂಸದರು ಮತ್ತು ಕೇಂದ್ರ ಸಚಿವರು ಪ್ರಧಾನಿ ಮೋದಿಯವರಿಗೆ ಕೇಳಿ. ಆಂದ್ರ-ಬಿಹಾರ ಬಿಟ್ಟು ಎಲ್ಲ ರಾಜ್ಯಗಳಿಗೂ ಅನ್ಯಾಯವಾಗಿದೆ. ಜೆಡಿಎಸ್-ಬಿಜೆಪಿ ದೋಸ್ತಿಯಿದ್ದರೂ ರಾಜ್ಯಕ್ಕೆ ಚೊಂಬು ಸಿಕ್ಕಿದೆ” ಎಂದು ವಾಗ್ದಾಳಿ ನಡೆಸಿದರು.

“ಮನುಸ್ಮೃತಿ ವಿರೋಧಿಸಿ, ಸಂವಿಧಾನ ಪರವಾಗಿರುವ ರಾಜ್ಯಗಳ ವಿರುದ್ಧ ಬಿಜೆಪಿ ಸರ್ಕಾರ ಸೇಡು ತೀರಿಸಿಕೊಳ್ಳುತ್ತಿದೆ. ಆದಾಯ ತೆರಿಗೆಯ ಮಿತಿ 12 ಲಕ್ಷ ರೂಪಾಯಿಗಳಿಗೆ ಏರಿಸಿರುವುದನ್ನು ಕೊಂಡಾಡಲಾಗುತ್ತಿದೆ. ನಮ್ಮಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕೇವಲ 8.09 ಕೋಟಿ ಜನ. ಇದು ನಮ್ಮ ಒಟ್ಟು ಜನಸಂಖ್ಯೆಯ ಶೇ.6.64ರಷ್ಟಾಗತ್ತದೆ ಅವರಲ್ಲಿ 4.90 ಕೋಟಿ ಜನ ಸೊನ್ನೆ ತೆರಿಗೆ ಪಾವತಿದಾರರು. ಆದ್ದರಿಂದ ಆದಾಯ ತೆರಿಗೆ ಮಿತಿಯ ಹೆಚ್ಚಳ ಮೇಲು ಮಧ್ಯಮ ವರ್ಗದ ಕೆಲವೇ ಕುಟುಂಬಗಳಿಗೆ ನೆರವಾಗಬಹುದೇ ವಿನಃ ದಿನದ ಆದಾಯ 100-150 ರೂಪಾಯಿಯಷ್ಟೆ ಹೊಂದಿದ ಶೇಕಡಾ 70ರಷ್ಟು ಜನಸಂಖ್ಯೆಗೆ ಇದರಿಂದ ಯಾವ ಲಾಭವೂ ಇಲ್ಲ” ಎಂದರು.

“2024-25ರ ಬಜೆಟ್ ಮೊತ್ತ 47,16000 ಕೋಟಿ ಆಗಿತ್ತು. 1,04,000 ಕೋಟಿ ತೆರಿಗೆ ಕಡಿಮೆ ಆಯ್ತು. ತೆರಿಗೆ ಅವರ ನಿರೀಕ್ಷೆಯಂತೆ ಸಂಗ್ರಹ ಆಗಿಲ್ಲ ಅಂತಲೇ ಅರ್ಥ. ಈ ಸಾಲಿನ 50,65,345 ಕೋಟಿ ಬಜೆಟ್ ಗಾತ್ರದಲ್ಲಿ ಸಾಲದ ಪ್ರಮಾಣವೇ 15,68,936 ಕೋಟಿಯಷ್ಟಿದೆ. ಇದರಲ್ಲಿ ಬಡ್ಡಿಗೆ 12,70,000 ಕೋಟಿ ಹೋಗುತ್ತಿದೆ. ದೇಶದ ಸಾಲ 202 ಲಕ್ಷ ಕೋಟಿಯಿಂದ 205 ಲಕ್ಷ ಕೋಟಿವರೆಗೂ ಆಗಿದೆ” ಎಂದು ವಿವರಿಸಿದರು.

“ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಹನ್ನೊಂದು ಬಜೆಟ್ ಗಳನ್ನು ನೋಡುತ್ತಾ ಬಂದ ನಮಗೆ ಹನ್ನೆರಡನೇ ಬಜೆಟ್ ಬಗ್ಗೆ ಹೆಚ್ಚಿನ ನಿರೀಕ್ಷೆ ಇರಲಿಲ್ಲ. ಇದು ಅವರೇ ಆಗಾಗ ಹೇಳಿಕೊಳ್ಳುತ್ತಿರು ‘’ವಿಕಸಿತ ಭಾರತದ ಬಜೆಟ್ ಅಲ್ಲ ‘’ಅವನತಿ ಭಾರತ’’ ದ ಬಜೆಟ್. ಅಭಿವೃದ್ದಿಯ ಪಥದಲ್ಲಿ ಮುನ್ನಡೆಯುತ್ತಿದ್ದ ಭಾರತವನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಿಂದಕ್ಕೆ ಎಳೆದೊಯ್ಯುತ್ತಿದೆ. ಇದು ಯಥಾಪ್ರಕಾರ ಕರ್ನಾಟಕದ ಪಾಲಿಗೆ ಮಾತ್ರವಲ್ಲ ಇಡೀ ದೇಶಕ್ಕೆ ನಿರಾಶದಾಯಕ, ನಷ್ಟದಾಯಕ ಮತ್ತು ಹಾನಿಕಾರಕ ಬಜೆಟ್” ಎಂದು ಟೀಕಿಸಿದರು.

“ಈ ಬಾರಿಯ ಬಜೆಟ್ ನಲ್ಲಿ ಕರ್ನಾಟಕದ ಜನತೆ ಏನನ್ನು ನಿರೀಕ್ಷಿಸುತ್ತಿದ್ದಾರೆ ಎಂಬ ವಿವರವಾದ ಬೇಡಿಕೆಯ ಪಟ್ಟಿಯನ್ನು ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಲ್ಲಿಸಿದ್ದೆ. ಬಹುಷಃ ಆ ಬೇಡಿಕೆಯ ಪಟ್ಟಿಯನ್ನು ಅವರು ಕಣ್ಣೆತ್ತಿ ಕೂಡಾ ನೋಡಿದ ಹಾಗಿಲ್ಲ. ಕರ್ನಾಟಕದಲ್ಲಿರುವವರೆಲ್ಲರೂ ಪಕ್ಷದ ಮತದಾರರಲ್ಲ, ಕಳೆದ ಲೋಕಸಭಾ ಚುನಾವಣೆಯಲ್ಲಿ 46% ಜನ ಬಿಜೆಪಿ ಪಕ್ಷಕ್ಕೂ ಮತಚಲಾಯಿಸಿದ್ದಾರೆ. ನರೇಂದ್ರಮೋದಿಯವರು ಕರ್ನಾಟಕದ ವಿರುದ್ದ ಸೇಡು ತೀರಿಸಿಕೊಳ್ಳುವ ಭರದಲ್ಲಿ ತಮ್ಮ ಪಕ್ಷಕ್ಕೆ ಮತಹಾಕಿದವರ ವಿರುದ್ದವೂ ಸೇಡು ತೀರಿಸಿಕೊಳ್ಳುತ್ತಿದ್ದಾರೆ” ಎಂದು ಹರಿಹಾಯ್ದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments