ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸಲು ಕೊನೆಗೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ಸೋಮವಾರ (ಅ.28) ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ(ಎಸ್ಸಿ) ಒಳ ಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದೆ.
“ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು. ಅಲ್ಲದೇ ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡಲು ಆಯೋಗಕ್ಕೆ ಸೂಚನೆ ನೀಡಲಾಗಿದೆ” ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
“ಮೂರು ತಿಂಗಳಲ್ಲಿ ವರದಿ ಸಲ್ಲಿಕೆ ಮಾಡಲು ರಾಜ್ಯ ಸರ್ಕಾರದಿಂದ ಆಯೋಗಕ್ಕೆ ಸೂಚನೆ ನೀಡಲಾಗಿದೆ. ಹೀಗಾಗಿ ಮುಂದಿನ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಲಾಗಿದ್ದು, ಇಂದಿನಿಂದ ಯಾವುದೇ ನೇಮಕಾತಿ ನೋಟಿಫಿಕೇಶನ್ ಆದರೆ ಆಯೋಗದರ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಮಾಹಿತಿ ನೀಡಿದರು.
ತೀರ್ಪು ನೀಡಿದ್ದ ಸುಪ್ರೀಂಕೋರ್ಟ್
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿ ಒಳಗಡೆಯೇ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿತ್ತು. ಒಳ ಮೀಸಲಾತಿ ಕಾನೂನು ಬದ್ಧ ಎಂದು ಹೇಳುವ ಮೂಲಕ ಮುಖ್ಯ ನ್ಯಾಯಮೂತ್ರಿ ಚಂದ್ರಚೂಡ್ ನೇತೃತ್ವದ ನ್ಯಾ. ಬಿ ಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಸಂವಿಧಾನ ಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದನ್ನು ಇಲ್ಲಿ ನೆನೆಯಬಹುದು.