Homeಕರ್ನಾಟಕಕಾವೇರಿ ವಿವಾದ: ತಮಿಳುನಾಡಿಗೆ ನೀರು ಹರಿಸುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ

ಕಾವೇರಿ ವಿವಾದ: ತಮಿಳುನಾಡಿಗೆ ನೀರು ಹರಿಸುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಕಾನೂನು ತಜ್ಞರ ತಂಡದೊಂದಿಗೆ ಸಮಾಲೋಚಿಸಿ ನಾಳೆಯೇ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರ ಜೊತೆಗೆ ಸಿಡಬ್ಲ್ಯುಆರ್‌ಸಿ ಮುಂದೆಯೂ ಮರುಪರಿಶೀಲನಾ (ರಿವ್ಯೂ) ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಸಿಡಬ್ಲ್ಯುಆರ್‌ಸಿ ಆದೇಶವನ್ನೇ ಪ್ರಾಧಿಕಾರ ಕೂಡ ಎತ್ತಿ ಹಿಡಿದಿದೆ. ಆದರೆ, ಪ್ರಸ್ತುತ ನಮ್ಮ ಜಲಾಶಯಗಳ ಪರಿಸ್ಥಿತಿ ತೀರಾ ಹದಗೆಟ್ಟಿದ್ದು,  ನೀರು ಬಿಡಲು ನಮ್ಮಲ್ಲೇ ನೀರಿಲ್ಲದಂತಾಗಿದೆ. ಸದ್ಯ ಕೇವಲ ಕುಡಿಯುವ ನೀರಿಗಷ್ಟೇ ಆದ್ಯತೆ ನೀಡಬೇಕಾಗಿದ್ದು, ಇದರ ನಡುವೆ ಬತ್ತಿ ಹೋಗಿರುವ ಕೆರೆ-ಕಟ್ಟೆಗಳನ್ನು ಸಹ ತುಂಬಿಸಬೇಕಾದ ಅನಿವಾರ್ಯತೆ ಇದೆ. ಗೌರಿ-ಗಣೇಶ ಹಬ್ಬದ ಒಂದು ವಾರದೊಳಗೆ ಉತ್ತಮ ಮಳೆಯಾದರೆ ಮಾತ್ರ ಪರಿಸ್ಥಿತಿ ತುಸು ಸುಧಾರಿಸಿಕೊಳ್ಳಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ನಾವು ಯಾವುದೇ ಕಾರಣಕ್ಕೂ ಸಿಡಬ್ಲ್ಯುಆರ್‌ಸಿ ಆದೇಶವನ್ನು ಸಮರ್ಥಿಸಿಕೊಳ್ಳುವುದಿಲ್ಲ. ಈ ಹಿಂದೆ 100 ಟಿಎಂಸಿ ನೀರು ಬಿಡಲಾಗಿತ್ತು, ಆದರೆ ಈ ಬಾರಿ 30 ಟಿಎಂಸಿ ಮಾತ್ರ ನೀಡಿದ್ದೇವೆ. ಆದರೂ ತಮಿಳುನಾಡು ಸರ್ಕಾರ ನಿರಂತರವಾಗಿ ಒತ್ತಡ ಹೇರುತ್ತಲೇ ಇದೆ. ಕಾವೇರಿ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡಲು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿರುವಂತೆ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ವಿಶೇಷ ವಕೀಲರನ್ನು (Special Advocate) ನೇಮಿಸುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಲಿದೆ. ಜೊತೆಗೆ ಅವರೊಟ್ಡಿಗೂ ಸಹ ಮಾತನಾಡಲಾಗುದು ಎಂದು ವಿವರಿಸಿದರು.

ಇ.ಡಿ ದಾಳಿ ರಾಜಕೀಯ ಪ್ರೇರಿತ

ಇದೇ ವೇಳೆ, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರ ಮನೆಗಳ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ (ಇ.ಡಿ) ದಾಳಿಯ ಕುರಿತು ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿಯವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾನೂನಿನ ಪ್ರಕಾರ ಅವರು ಏನು ಬೇಕಿದ್ದರೂ ಮಾಡಿಕೊಳ್ಳಲಿ. ಆದರೆ, ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿಸುವುದೇ ಕಾಯಕವಾಗಿದೆ.

ಮಧ್ಯಪ್ರದೇಶ, ಒಡಿಶಾ ಸೇರಿದಂತೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಅಧಿಕಾರದಲ್ಲಿರುವ ಇತರೆ ರಾಜ್ಯಗಳ ಸಚಿವರುಗಳ ಮೇಲೆ ಇಂತಹ ಇ.ಡಿ ದಾಳಿಗಳು ಏಕೆ ನಡೆಯುವುದಿಲ್ಲ ಎಂದು ಕೇಂದ್ರ ಸರ್ಕಾರದ ತಾರತಮ್ಯ ನೀತಿಯನ್ನು ಅವರು ಕಟುವಾಗಿ ಪ್ರಶ್ನಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments