ಮುಡಾ ಸೈಟ್ ಹಂಚಿಕೆ ಪ್ರಕರಣ ಹೊರಗೆಳೆದು, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕಾರಣಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಚೆಕ್ ಬೌನ್ಸ್ ಪ್ರಕರಣದಲ್ಲಿ ಅಪರಾಧಿಯಾಗಿದ್ದಾರೆ.
ಚೆಕ್ ಬೌನ್ಸ್ ಪ್ರಕರಣದಲ್ಲಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಮೈಸೂರಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.
ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಲಲಿತಾದ್ರಿಪುರದ ಕುಮಾರ್ ಎಂಬವರಿಂದ ಸ್ನೇಹಮಯಿ ಕೃಷ್ಣ 2015ರಲ್ಲಿ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್ನ ಚೆಕ್ ನೀಡಿದ್ದರು. ಕುಮಾರ್ ಅದನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ನಂತರ ಅವರು ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪ ಸಾಬೀತಾಗಿದ್ದರಿಂದ ಸ್ನೇಹಮಯಿ ಕೃಷ್ಣ ಅವರಿಗೆ ಶಿಕ್ಷೆ ಪ್ರಕಟಿಸಿದೆ.
“ಚೆಕ್ ಬೌನ್ಸ್ಗೆ ಸಂಬಂಧಿಸಿದಂತೆ ಹಣ ಪಾವತಿ ಮಾಡಬೇಕು ಅಥವಾ ಆರು ತಿಂಗಳು ಕಾಲ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದೆ. ಈ ಸಂಬಂಧ ನನ್ನ ಕಾನೂನು ಹೋರಾಟ ಮುಂದುವರಿಸುತ್ತೇನೆ” ಎಂದು ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ.