ನಾಡಿನ ಶಕ್ತಿ ಕೇಂದ್ರ ವಿಧಾನಸೌಧ ಮುಂಭಾಗದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಸಿಎಂ ಜನಸ್ಪಂದನ ಕಾರ್ಯಕ್ರಮಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ವಿವಿಧ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಸಾಗರವೇ ಹರಿದುಬಂದಿದೆ.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದ್ದು, ಬೆಳಗ್ಗೆಯಿಂದಲೇ ಸಾವಿರಾರು ಜನ ತಮ್ಮ ಸಮಸ್ಯೆಯನ್ನು ಸಿಎಂ ಸಿದ್ದರಾಮಯ್ಯನವರ ಬಳಿ ಹೇಳಲು ವಿಧಾನಸೌಧಕ್ಕೆ ಆಗಮಿಸಿದ್ದಾರೆ.
ಖುದ್ದಾಗಿ ಸಿಎಂ ಸಿದ್ದರಾಮಯ್ಯ ಅವರು ಜನರ ಬಳಿ ಧಾವಿಸಿ ಅವವಾಲು ಸ್ವೀಕರಿಸುತ್ತಿದ್ದು, ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಿತ್ತಿದ್ದಾರೆ. ಸಂಜೆ 6ರವರೆಗೆ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.
ರಾಯಚೂರಿನ ಮೂರು ವರ್ಷದ ಶುಶಾಂತ್ ಥಲೆಸ್ಸೆಮಿಯಾ ಕಾಯಿಲೆ ಗೆ ತುತ್ತಾಗಿದ್ದಾನೆ. ಈತನನ್ನು ಜನಸ್ಪಂದನ ಕಾರ್ಯಕ್ರಮಕ್ಕೆ ಕರೆತಂದ ತಾಯಿ ಲಲಿತಾ ಅವರು ಆರ್ಥಿಕ ಸಹಾಯವನ್ನು ಕೋರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳು ಪರಿಹಾರ ನಿಧಿಯಿಂದ ನೆರವು ಒದಗಿಸಲಾಗುವುದು ಎಂದು ಅರ್ಜಿಯನ್ನು ಸ್ವೀಕರಿಸಿ ಭರವಸೆ ನೀಡಿದರು.ಬೆಂಗಳೂರಿನ ಜೆ.ಜೆ ನಗರ ನಿವಾಸಿ ಎಂ.ಶ್ರೀಧರ್ ಅವರ ಎರಡೂ ಮೂತ್ರಪಿಂಡಗಳು ವಿಫಲವಾಗಿದ್ದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಕೋರಿ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳು ಇವರ ಸಮಸ್ಯೆಗೆ ಕೂಡಲೇ ಸ್ಪಂದಿಸಿ ಪರಿಹಾರ ನೀಡುವ ಭರವಸೆ ನೀಡಿದರು.ವಿಶಿಷ್ಟ ಚೇತನ ಸತ್ಯನಾರಾಯಣ ಅವರು ತಮ್ಮ ಡಯಾಲಿಸಿಸ್ ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಕೊಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಅರ್ಜಿ ಪರಿಶೀಲಿಸಿ ಚಿಕಿತ್ಸೆಗೆ ನೆರವು ನೀಡುವಂತೆ ಸೂಚಿಸಿದರು.ಬೆಂಗಳೂರಿನ ಮಹಾಭೋದಿ ಸಂಶೋಧನಾ ಕೇಂದ್ರ ಇವರು ಬೌದ್ಧ ಜನಾಂಗದ ಅಧ್ಯಾತ್ಮಿಕ ಗ್ರಂಥಾಲಯದ ನವೀಕರಣಕ್ಕಾಗಿ ೨೦ ಲಕ್ಷ ರೂ.ಗಳ ಅನುದಾನ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು..ಬೆಂಗಳೂರಿನ ಮಹಾಬೋಧಿ ಲುಂಬಿನಿ ಬುದ್ಧ ವಿಹಾರ ಸಂಸ್ಥೆಯವರು ೨೦೨೪-೨೫ ನೇ ಆಯವ್ಯಯದಲ್ಲಿ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ೧೦೦ ಕೋಟಿ ರೂ.ಗಳ ಅನುದಾನವನ್ನು ನೀಡಿ, ಬೌದ್ಧ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು ಪರಿಶೀಲಿಸುವುದಾಗಿ ಭರವಸೆ ನೀಡಿದರು.