Homeಕರ್ನಾಟಕಕಾಂಗ್ರೆಸ್ ಸರ್ಕಾರದಿಂದ ರೈತ ವಿರೋಧಿ ಆಡಳಿತ, ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ಸರ್ಕಾರದಿಂದ ರೈತ ವಿರೋಧಿ ಆಡಳಿತ, ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ: ಬಿ.ವೈ. ವಿಜಯೇಂದ್ರ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರು ಹಾಗೂ ರೈತರ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ಬಳ್ಳಾರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅವರಿಗೆ ರೈತರಿಗಿಂತ ರಿಯಲ್ ಎಸ್ಟೇಟ್‌ಗೆ ಹೆಚ್ಚಿನ ಆದ್ಯತೆ ಇದೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀರಾವರಿ ಸಚಿವರಾಗಿದ್ದ ಸಂದರ್ಭದಲ್ಲಿ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ದುರಸ್ತಿಗೆ 24 ತಿಂಗಳು ತೆಗೆದುಕೊಂಡ ಪರಿಣಾಮ ರೈತರು ಎರಡನೇ ಬೆಳೆ ಬೆಳೆಯಲು ಸಾಧ್ಯವಾಗದೆ ಅಪಾರ ನಷ್ಟ ಅನುಭವಿಸಿದರು. ಆದರೆ ಮುಖ್ಯಮಂತ್ರಿ ಆದ 24 ಗಂಟೆಗಳಲ್ಲೇ ಬಿಡದಿ ಟೌನ್‌ಶಿಪ್‌ಗೆ ಸಂಬಂಧಿಸಿದ ಆದೇಶ ಹೊರಡಿಸಿದ್ದಾರೆ ಎಂದು ಅವರು ಆರೋಪಿಸಿದರು.

ಬಿಡದಿ ಟೌನ್‌ಶಿಪ್ ಯೋಜನೆಯಿಂದ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು ಮತ್ತು ಮಹಿಳೆಯರು ಪೊರಕೆ ಹಿಡಿದು ಪ್ರತಿಭಟಿಸುವ ಸ್ಥಿತಿ ನಿರ್ಮಾಣವಾಗಿರುವುದಕ್ಕೆ ರೈತ ವಿರೋಧಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಅವರು ಹೇಳಿದರು.

ಮುಖ್ಯಮಂತ್ರಿಗಳು ರೈತರೊಂದಿಗೆ ಚೆಲ್ಲಾಟ ಆಡದೇ, ರೈತರ ಪರವಾದ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ಬಿಡದಿ ಟೌನ್‌ಶಿಪ್ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ರೈತರ ಮೇಲಿನ ಸರ್ಕಾರದ ದಬ್ಬಾಳಿಕೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಜುಲೈ 17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಶಾಸಕರು, ಸಂಸದರು, ಮಾಜಿ ಶಾಸಕರು ಹಾಗೂ ಮಾಜಿ ಸಂಸದರು ಬೆಳಗ್ಗೆಯಿಂದ ಸಂಜೆವರೆಗೆ ಧರಣಿ ನಡೆಸಲಿದ್ದು, ರೈತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವುದು ಹಾಗೂ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ಒತ್ತಾಯಿಸಲಾಗುವುದು ಎಂದು ವಿಜಯೇಂದ್ರ ತಿಳಿಸಿದರು.

ಬರಗಾಲ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ

ಬರಗಾಲದ ಕುರಿತು ಮುಖ್ಯಮಂತ್ರಿ ಅವರು ಪ್ರಧಾನಮಂತ್ರಿಗೆ ಪತ್ರ ಬರೆದು ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದೆ ಹಾಗೂ ಕೇಂದ್ರ ಸರ್ಕಾರ ಅಧಿಕಾರಿಗಳ ತಂಡವನ್ನು ರಾಜ್ಯಕ್ಕೆ ಕಳುಹಿಸಬೇಕು ಎಂದು ಮನವಿ ಮಾಡಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿಯೂ ಮುಖ್ಯಮಂತ್ರಿ ಹಾಗೂ ಸಚಿವರು ಜಿಲ್ಲೆಗಳ ಪ್ರವಾಸ ಕೈಗೊಳ್ಳದಿರುವುದು ಆಶ್ಚರ್ಯಕರವಾಗಿದೆ ಎಂದು ವಿಜಯೇಂದ್ರ ಹೇಳಿದರು.

ಬಳ್ಳಾರಿ, ಕೊಪ್ಪಳ, ವಿಜಯನಗರ, ರಾಯಚೂರು, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಬಿತ್ತನೆ ಮಾಡಿದ ಬೆಳೆಗಳು ಮೊಳಕೆಯೂ ಬಂದಿಲ್ಲ. ರೈತರ ಜೀವದೊಂದಿಗೆ ಚೆಲ್ಲಾಟ ಆಡದೆ, ಸರ್ಕಾರ ಅವರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ ಎಕರೆಗೆ ₹50 ಸಾವಿರ ಪರಿಹಾರ ಘೋಷಿಸಬೇಕು ಎಂದು ಅವರು ಒತ್ತಾಯಿಸಿದರು.

ಕ್ಯಾಬಿನೆಟ್ ವಿಸ್ತರಣೆ ಕುರಿತು ವ್ಯಂಗ್ಯ

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಈಗಾಗಲೇ ಚರ್ಚೆಗಳು ಆರಂಭವಾಗಿದ್ದು, ಸಚಿವ ಸ್ಥಾನಾಕಾಂಕ್ಷಿ ಶಾಸಕರು ದೆಹಲಿಯತ್ತ ಮುಖ ಮಾಡಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೂರು ದಿನ ಯಾರೂ ಬರಬೇಡಿ ಎಂದು ಸೂಚಿಸಿರುವ ಮಾಹಿತಿ ಇದೆ. 15-20 ದಿನಗಳ ಪ್ರವಾಸದ ಬಳಿಕ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ವಿಜಯೇಂದ್ರ ವ್ಯಂಗ್ಯವಾಡಿದರು.

ಅಧಿವೇಶನದಲ್ಲಿ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ

ರಾಜ್ಯಕ್ಕೆ ಕೂಡಲೇ ಕೃಷಿ ಸಚಿವರನ್ನು ನೇಮಕ ಮಾಡಬೇಕು. ಬರಗಾಲದ ಸಂದರ್ಭದಲ್ಲಿ ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ ವಿಜಯೇಂದ್ರ, ಆಗಸ್ಟ್ 6ರಿಂದ ಆರಂಭವಾಗುವ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ರೈತ ವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸಲಿವೆ ಎಂದು ತಿಳಿಸಿದರು.

ಬಿಡದಿ ಟೌನ್‌ಶಿಪ್ ಯೋಜನೆ, ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು ಹಾಗೂ ಕಾವೇರಿ ಕೊಳ್ಳದ ರೈತರ ಸಂಕಷ್ಟ ಸೇರಿದಂತೆ ವಿವಿಧ ವಿಷಯಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು. ಕಾವೇರಿ ಕೊಳ್ಳದ ರೈತರು ಬೀದಿಗಿಳಿದಿದ್ದು, ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಿರುವ ಸಂದರ್ಭದಲ್ಲಿಯೂ ತಮಿಳುನಾಡಿಗೆ ನೀರು ಹರಿಸಲು ಸರ್ಕಾರ ಮುಂದಾಗಿರುವುದು ಸರಿಯಲ್ಲ. ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಲುವು ಸರ್ಕಾರ ತಾಳಬೇಕು ಎಂದು ಅವರು ಆಗ್ರಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments