ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ವಾಪಸ್ ಬೆಂಗಳೂರಿಗೆ ಬರುತ್ತಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿದೆ.
ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಶನಿವಾರ ಘಟನೆ ನಡೆದಿದೆ. ವಾಹನದಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಬೆಂಗಾವಲು ವಾಹನದಲ್ಲಿದ್ದ ಬೆಂಗಳೂರಿನ ದಿನೇಶ್, ಮಹೇಶ್, ಜಯಲಿಂಗು ಮತ್ತು ಕಾರ್ತಿಕ್ ಎಂಬವರು ಗಾಯಗೊಂಡಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಘಟನೆಯಲ್ಲಿ ಬೆಂಗಾವಲು ವಾಹನ ಭಾಗಶಃ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.