Homeಕರ್ನಾಟಕದೇವನಹಳ್ಳಿ ಭೂಸ್ವಾಧೀನ ಅಂತಿಮ ಅಧಿಸೂಚನೆ ರದ್ದು, ಸ್ವಇಚ್ಛೆಯಿಂದ ಜಮೀನು ನೀಡಿದರೆ ಸ್ವೀಕಾರ: ಸಿಎಂ

ದೇವನಹಳ್ಳಿ ಭೂಸ್ವಾಧೀನ ಅಂತಿಮ ಅಧಿಸೂಚನೆ ರದ್ದು, ಸ್ವಇಚ್ಛೆಯಿಂದ ಜಮೀನು ನೀಡಿದರೆ ಸ್ವೀಕಾರ: ಸಿಎಂ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ 1198 ದಿನಗಳ ಹೋರಾಟಕ್ಕೆ ಅಂತಿಮವಾಗಿ ಐತಿಹಾಸಿಕ ಜಯ ಸಿಕ್ಕಿದೆ. ಮಂಗಳವಾರ ರೈತರೊಂದಿಗೆ ನಡೆದ ಸಭೆಯಲ್ಲಿ ಕೆಐಎಡಿಬಿ ಅಂತಿಮ ಅಧಿಸೂಚನೆ ರದ್ದುಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಐತಿಹಾಸಿಕ ನಿರ್ಧಾರ ಪ್ರಕಟವಾಗಿದೆ. ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಸರ್ಕಾರದ ಗಟ್ಟಿ ನಿಲುವು ಇದಾಗಿದೆ.

ವಿರೋಧ ಪಕ್ಷದ ನಾಯಕರಾಗಿದ್ದಾಗ ರೈತ ಪರ ನಿಲ್ಲುವ ಭರವಸೆ ನೀಡಿ, ಈಗ ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬುದನ್ನು ಮತ್ತೆ ಸಾಬೀತುಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯಲ್ಲಿ ಮತ್ತು ಮಾತನಾಡಿದ ಸಿಎಂ, “ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ” ಎಂದರು.

“ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು” ಎಂದು ಹೇಳಿದರು.

“ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ.  ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನ ಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ” ಎಂದು ತಿಳಿಸಿದರು.

“ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಆದರೆ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಹೆಚ್ಚಿನ ವಿಸ್ತೀರ್ಣದ ಅಭಿವೃದ್ಧಿಪಡಿಸಿದ ನಿವೇಶನ ನೀಡಲಾಗುವುದು” ಎಂದರು.

“1777 ಎಕರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸರ್ಕಾರ ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು. ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ” ಎಂದು ಹೇಳಿದರು.

“ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ. ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ” ಎಂದು ಮುಖ್ಯಮಂತ್ರಿ ಅವರು ಹೇಳಿದರು.

“ಮುಖ್ಯಮಂತ್ರಿ ಅವರ ಸಾಮಾಜಿಕ ನ್ಯಾಯ ಕೇವಲ ನುಡಿಯಲ್ಲಿ ಮಾತ್ರವಲ್ಲ ನಡೆಯಲ್ಲೂ ಅದನ್ನು ಇಂದು ಅವರು ತೋರಿಸಿಕೊಟ್ಟಿದ್ದಾರೆ” ಎಂದು ಪ್ರಕಾಶ್ ರಾಜ್ ಅವರು ಹೇಳಿದರು.

ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರೈತ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments