ಬಿಜೆಪಿ ಆಡಳಿತದಲ್ಲಿ ಹಬ್ಬಗಳ ಸಂದರ್ಭದಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು.
ಕನಕಪುರದಲ್ಲಿ ಮಾಧ್ಯಮ ಪ್ರತಿನಿಧಿಗಳು ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂನ್ 6 ರವರೆಗೆ ಗಡುವು ನೀಡಿರುವ ಬಗ್ಗೆ ಕೇಳಿದಾಗ, “ಅವರು ಅಲ್ಲಿಯವರೆಗೂ ಕಾಯುವುದೇಕೆ? ಈಗಿನಿಂದಲೇ ಹೋರಾಟ ಮಾಡಲಿ. ಅವರು ಯಾವ ವಿಚಾರಕ್ಕೆ ಬಾಯಿ ಬಿಡಬೇಕೋ ಅದರ ಬಗ್ಗೆ ಬಿಡುತ್ತಿಲ್ಲ” ಎಂದು ಛೇಡಿಸಿದರು.
ನೈತಿಕ ಹೊಣೆಹೊತ್ತು ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂಬ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಪ್ರಕರಣದ ತನಿಖೆಯಲ್ಲಿ ವಾಸ್ತವಾಂಶ ಪರಿಶೀಲನೆ ನಡೆಯಲಿ. ನಾವು ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ” ಎಂದರು.
ನಮ್ಮ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ
“ಬೆಂಗಳೂರು ಪದವೀಧರ ಕ್ಷೇತ್ರದ ಮತದಾರರ ಬಳಿ ನಮ್ಮ ಅಭ್ಯರ್ಥಿ ರಾಮೋಜಿ ಗೌಡರ ಪರ ಪ್ರಚಾರ ಮಾಡಿ, ಈ ಚುನಾವಣೆಯಲ್ಲಿ ನಮ್ಮ ನಾಯಕರಿಗೆ ಜವಾಬ್ದಾರಿ ವಹಿಸಲು ಕನಕಪುರಕ್ಕೆ ಬಂದಿದ್ದೇನೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ದಳದವರು ಮೈತ್ರಿಯಾಗಿವೆ. ನಮ್ಮ ಅಭ್ಯರ್ಥಿ ರಾಮೋಜಿ ಗೌಡರು ಉತ್ತಮ ಕೆಲಸ ಮಾಡಿಕೊಂಡು ಬಂದಿದ್ದು, ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ.” ಎಂದರು.
ಮೇಲ್ಮನೆ ಚುನಾವಣೆ ಸಂಬಂಧ ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ನಾನು ಸಿದ್ದರಾಮಯ್ಯನವರು ಹೈಕಮಾಂಡ್ ನಾಯಕರಿಗೆ ಪಟ್ಟಿ ಕೊಟ್ಟು ಬಂದಿದ್ದೇವೆ. ಅವರು ಅಂತಿಮ ತೀರ್ಮಾನ ಮಾಡುತ್ತಾರೆ” ಎಂದರು.
ಪ್ರಜ್ವಲ್ ರೇವಣ್ಣ ಬಂಧನದ ಬಗ್ಗೆ ಕೇಳಿದಾಗ, “ಮಾಧ್ಯಮಗಳಲ್ಲಿ ಈ ವಿಚಾರ ನೋಡಿದೆ. ಎಸ್ಐಟಿ ಪ್ರಕರಣ ತನಿಖೆ ನಡೆಸುತ್ತಿದ್ದು, ಅವರು ವಿಚಾರಣೆ ಮಾಡುತ್ತಾರೆ. ಆ ಬಗ್ಗೆ ನಾನೇಕೆ ತಲೆಕೆಡಿಸಿಕೊಳ್ಳಲಿ” ಎಂದರು.