ಕಳೆದ ಒಂದು ವರ್ಷದಿಂದ ರಾಜ್ಯ ಸರ್ಕಾರದ (ಕೆ.ಕೆ.ಆರ್.ಡಿ.ಬಿ.) 13 ಕೋಟಿ ರೂ. ಆರ್ಥಿಕ ಬೆಂಬಲದಿಂದ ಪುನಾರಂಭಗೊಂಡಿರುವ ಬೀದರ್ -ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯನ್ನು ಮುಂದುವರಿಸುವಂತೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಬೀದರ್ ನ ಝೀರಾ ಕನ್ವೆನ್ಷನ್ ಹಾಲ್ ನಲ್ಲಿ ನಡೆಯುತ್ತಿರುವ 2 ದಿನಗಳ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಉಡಾನ್ ಯೋಜನೆಯಡಿ ನೀಡುತ್ತಿದ್ದ ಸಬ್ಸಿಡಿ ನಿಲ್ಲಿಸಿದ ಪರಿಣಾಮ ಸ್ಥಗಿತವಾಗಿದ್ದ ವಿಮಾನ ಯಾನ ಸೇವೆಗೆ ಕಳೆದ ವರ್ಷ ಏಪ್ರಿಲ್ 16ರಂದು ನೀವೇ ಮರು ಚಾಲನೆ ನೀಡಿದ್ದಿರಿ. ಈಗ ಅದು ನಿರಂತರ ಸೇವೆಯಾಗಿ ಮುಂದುವರಿಸಿ ಎಂದು ಜಿಲ್ಲೆಯ ಜನತೆಯ ಪರವಾಗಿ ಮನವಿ ಮಾಡಿದರು.
ಕ.ಕ, ಬೀದರ್ ಗೆ ಸಿಎಂ ಅಭೂತಪೂರ್ವ ಬೆಂಬಲ: ಈಶ್ವರ ಖಂಡ್ರೆ
ಶತಮಾನಗಳ ಶಾಪದಿಂದ ಹಿಂದುಳಿದ ಕಲ್ಯಾಣ ಕರ್ನಾಟಕಕ್ಕೆ ಮತ್ತು ಬೀದರ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಬೆಂಬಲ ಅಭೂತಪೂರ್ವ ಎಂದ ತಿಳಿಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಿ.ಎಂ.ಗೆ ಧನ್ಯವಾದ ಅರ್ಪಿಸಿದ್ದಾರೆ.
ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿ, 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲಕ್ಕೆ ತಂದು, ರಾಜ್ಯದ ತಲಾದಾಯವನ್ನು ಹೆಚ್ಚಿಸಿದ ಕೀರ್ತಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದರು.
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಬಜೆಟ್ ನಲ್ಲಿ ವಾರ್ಷಿಕ 5 ಸಾವಿರ ಕೋಟಿ ರೂ. ನೀಡುವುದಾಗಿ ಪಕ್ಷ ನೀಡಿದ್ದ ಭರವಸೆಯನ್ನು ಸಿದ್ದರಾಮಯ್ಯ ಈಡೇರಿಸಿದ್ದಾರೆ, ಈ ಪೈಕಿ ಕಳೆದ 3 ವರ್ಷದಲ್ಲಿ ಬೀದರ್ ಜಿಲ್ಲೆಯ ಅಭಿವೃದ್ಧಿಗೆ 8000 ಕೋಟಿ ರೂ. ಲಭ್ಯವಾಗಿದೆ ಎಂದರು.
ಬೀದರ್ ಜಿಲ್ಲೆಯ ನೀರಾವರಿ ಯೋಜನೆಗಳಿಗೆ 600 ಕೋಟಿ ರೂ.; ಲೋಕೋಪಯೋಗಿ ಇಲಾಖೆಯಡಿ ಜಿಲ್ಲೆಯ ಮೂಲಸೌಕರ್ಯ ಅಭಿವೃದ್ಧಿಗಾಗಿ 300 ಕೋಟಿ ರೂ. ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಜಲಜೀವನ ಮಿಷನ್ ಅಡಿಯಲ್ಲಿ 600 ಕೋಟಿ ರೂ. ಮಂಜೂರು ಮಾಡಿದ್ದಾರೆ ಎಂದರು.
ಮಾಧ್ಯಮಗಳಿಗೆ ಸ್ವಯಂ ನಿಯಂತ್ರಣ ಅಗತ್ಯ
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ರಹೀಂ ಖಾನ್, ಡಾ. ಶರಣ ಪ್ರಕಾಶ್ ಪಾಟೀಲ್, ಸಂಸತ್ ಸದಸ್ಯ ಸಾಗರ್ ಈ ಖಂಡ್ರೆ, ಮಾಜಿ ಸಚಿವ ರಾಜಶೇಖರ ಪಾಟೀಲ್ ಹುಮನಾಬಾದ್, ಶಾಸಕರುಗಳಾದ ಶರಣು ಸಲಗಾರ್, ಭೀಮರಾವ್ ಪಾಟೀಲ್, ಚಂದ್ರಶೇಖರ ಪಾಟೀಲ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ ಹಾರಕೋಡು ಶ್ರೀ ಚನ್ನವೀರ ಶಿವಾಚಾರ್ಯರು, ಭಾಲ್ಕಿ ಹಿರೆಮಠದ ಡಾ. ಬಸವಲಿಂಗ ಪಟ್ಟದ್ದೇವರು ಪಾಲ್ಗೊಂಡಿದ್ದರು.


