60% ಕಮಿಷನ್ ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿರುವ ಆರೋಪವಿದು. ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ಬಿಜೆಪಿ ಸರಕಾರವೇ ವಾಸಿ ಇತ್ತು ಎಂದು ಅವರು ಅಲವತ್ತುಕೊಂಡಿದ್ದಾರೆ ನಿಮ್ಮ ಪಕ್ಷದ ಗುತ್ತಿಗೆದಾರರು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರ ಗುತ್ತಿಗೆದಾರರಿಂದ 60% ಕಮಿಷನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಅವರು; ದಾಖಲೆ ಕೊಡಿ ಎಂದ ಸಿಎಂ ಸಿದ್ದರಾಮಯ್ಯ ಅವರಿಗೆ ಎಕ್ಸ್ ತಾಣದಲ್ಲಿ ಪ್ರತಿಕ್ರಿಯಿಸಿ, “ಕಾಂಗ್ರೆಸ್ ಸರಕಾರದಲ್ಲೂ 40% ಕಮೀಶನ್ ಸುಲಿಗೆ ಮಾಡಲಾಗುತ್ತಿದೆ.
ಕಮಿಷನ್ ವ್ಯವಹಾರ ಇಲ್ಲ ಎಂದಾದರೆ, ‘ಯಾಕಪ್ಪಾ ಹಾಗೆ ಹೇಳಿದಿರಿ?’ ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರಕಾರದ ಮೇಲೆ 40%ಕಮಿಷನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ, ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ” ಎಂದು ಪ್ರಶ್ನಿಸಿದರು.
“ದಾವಣಗೆರೆ ಗುತ್ತಿಗೆದಾರನೊಬ್ಬ ದಯಾಮರಣ ಕರುಣಿಸಿ ಎಂದು ನಿಮ್ಮ ನಿಮಗೆ ಮತ್ತು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಅವರಿಗೆ ಬಾಕಿ ಹಣ ಕೊಡಿಸುತ್ತೀರೋ ಅಥವಾ ದಯಾಮರಣ ಕರುಣಿಸುತ್ತೀರೋ? ಕಮೀಶನ್ ದುರಾಸೆ ಬಿಟ್ಟು ಮೊದಲು ಆ ಗುತ್ತಿಗೆದಾರರನ್ನು ರಕ್ಷಿಸಿ” ಎಂದಿದ್ದಾರೆ.