ರಾಜ್ಯ ಸರ್ಕಾರದ 2 ವರ್ಷಗಳ ವೈಫಲ್ಯತೆ ಬಗ್ಗೆ ಆರೋಪ ಪಟ್ಟಿ ಎಂಬ ಶೀರ್ಷಿಕೆಯಡಿಯಲ್ಲಿ ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಮತ್ತು ಸುಳ್ಳು ಪ್ರಚಾರ ಮಾಡಿರುವ ಬಿಜೆಪಿ ವಿರುದ್ಧ ಬೆಂಗಳೂರಿನ 42ನೇ ಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಮೂಲಕ ದೂರು ದಾಖಲಿಸಲು ಸರ್ಕಾರ ನಿರ್ಧರಿಸಿದ್ದು, ಬಿ.ಎಸ್. ಪಾಟೀಲ್, ಸರ್ಕಾರಿ ಅಭಿಯೋಜಕರು 67ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಬೆಂಗಳೂರು ಮತ್ತು ಶೈಲಜಾ ನಾಯಕ್, ಸರ್ಕಾರಿ ಅಭಿಯೋಜಕರು, 61ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಬೆಂಗಳೂರು ಇವರುಗಳನ್ನು ಪ್ರಕರಣ ನಿರ್ವಹಿಸಲು ನಿಯೋಜಿಸಿದೆ.
ಅಲ್ಲದೇ ಕುಮಟಾ ಪ್ರಕಾಶ್, ಸರ್ಕಾರದ ಉಪ ಕಾರ್ಯದರ್ಶಿ, ಒಳಾಡಳಿತ ಇಲಾಖೆ (ಕಾನೂನು ಮತ್ತು ಸುವ್ಯವಸ್ಥೆ) ಇವರನ್ನು ಈ ಪ್ರಕರಣದಲ್ಲಿ ಎಲ್ಲ ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ ಸರ್ಕಾರಿ ಅಭಿಯೋಜಕರಿಗೆ ಸಂಪೂರ್ಣ ದಾಖಲೆ, ಮಾಹಿತಿ ನೀಡಲು ಇವರನ್ನು ನೇಮಿಸಿ ಆದೇಶಿಸಲಾಗಿದೆ.