ಬೆಂಗಳೂರು ಮತ್ತು ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿ ಘಟನೆ ನಡೆಯಿತು.
ಕಾರು ಚಾಲಕ ಗೋಪಾಲ್ (45) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ, ಗೋಪಾಲ್ (60), ಶಶಿಕಲಾ (55) ಮತ್ತು ದೀಪಿಕಾ (35) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು ಮಾರ್ಗವಾಗಿ ತುಮಕೂರು ಕಡೆಗೆ ಚಲಿಸುತ್ತಿದ್ದ ಕಾರು ಡಿವೈಡರ್ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರು ತುಮಕೂರಿನ ಸಂಬಂಧಿಗಳ ಮನೆಯಲ್ಲಿ ನಾಮಕರಣ ಕಾರ್ಯಕ್ರಮಕ್ಕೆ ತೆರಳುತಿದ್ದರು ಎಂದು ಗೊತ್ತಾಗಿದೆ.
ಮೃತರಲ್ಲಿ ಬೆಂಗಳೂರಿನ ಮಲ್ಲೇಶ್ವರಂನ ಇಬ್ಬರು ಮಹಿಳೆಯರಿದ್ದಾರೆ. ಮಕ್ಕಳಿಬ್ಬರು ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೆಂಗಳೂರು ಮತ್ತು ತುಮಕೂರು ರಾಷ್ಟ್ರೀಯ ಹೆದ್ದಾರಿ ಕೆಲಕಾಲ ಟ್ರಾಫಿಕ್ ಉಂಟಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸರು ಸಂಚಾರ ಸುಗಮಗೊಳಿಸಿದರು.