ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆದಿದೆ.
ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳು, 462 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ಗಳ ವ್ಯವಸ್ಥೆಯನ್ನು ಪಾಲಿಕೆಯ ಎಲ್ಲ ವಾರ್ಡ್ ಗಳಲ್ಲಿ ಮಾಡಲಾಗಿರುತ್ತದೆ ಎಂದು ಪ್ರಕಟನೆಯಲ್ಲಿ ಬಿಬಿಎಂಪಿ ತಿಳಿಸಿದೆ.
ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಪಾಲಿಕೆ ವೆಬ್ ಸೈಟ್ ಲಿಂಕ್ https://apps.bbmpgov.in/ganesh2024/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ
ಶನಿವಾರ (ಸೆ.7) ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.