ನಾಡಿನ ಅಧಿದೇವತೆ ಚಾಮುಂಡೇಶ್ವರಿ ಹಾಗೂ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆಯ ಕ್ರಮಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದರೆ ಅತ್ತ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ರಾಜ್ಯ ಸರ್ಕಾರ ಅತ್ಯುತ್ತಮ ಕೆಲಸ ಮಾಡಿದೆ ಎಂದು ಶ್ಲಾಘಿಸಿದ್ದಾರೆ.
ಬಿಜೆಪಿಯಲ್ಲಿ ಹೊಸದಾಗಿ ಸೃಷ್ಟಿಯಾಗಿರುವ ಭಿನ್ನಮತಿಯ ನಾಯಕರ ಜೊತೆ ಗುರುತಿಸಿಕೊಂಡು ಸುದ್ದಿಯಾಗಿರುವ ಮೈಸೂರು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ತಾವು ಈ ಹಿಂದೆ ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರ ಬೇಕೆಂದು ಧ್ವನಿ ಎತ್ತಿದ್ದೆವು. ಅಂದು ಅದು ಸಾಧ್ಯವಾಗಲಿಲ್ಲ ಈಗ ಸಿದ್ದರಾಮಯ್ಯನವರು ಪ್ರಾಧಿಕಾರ ರಚನೆ ಮಾಡಿದ್ದಾರೆ. ಖಂಡಿತ ಇದು ಒಳ್ಳೆಯ ಕೆಲಸ” ಎಂದು ಹೇಳಿದರು.
ಚಾಮುಂಡೇಶ್ವರಿ ಪ್ರಾಧಿಕಾರ ರಚನೆಗೆ ಮೈಸೂರು ರಾಜ ಮನೆತನ ಮತ್ತು ಮೈಸೂರಿನ ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಒಡೆಯರ್ ಅಪಸ್ವರ ಎತ್ತಿರುವ ಬೆನ್ನಲ್ಲೇ ಪ್ರತಾಪ್ ಸಿಂಹ ಅವರ ಈ ಹೇಳಿಕೆ ಕುತೂಹಲ ಮೂಡಿಸಿದೆ.
“ಚಾಮುಂಡೇಶ್ವರಿ ಬೆಟ್ಟದಲ್ಲಿನ ಆಸ್ತಿ ಹೊಡೆದಾಟದ ಬಗ್ಗೆ ತಾವು ಮಾತನಾಡುವುದಿಲ್ಲ. ಆದರೆ ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾಗಿದ್ದು ಸರ್ಕಾರದ ಕರ್ತವ್ಯ. ಸಿದ್ದರಾಮಯ್ಯ ಅವರನ್ನು ಕೆಲವು ಸೈದ್ದಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಬೆಟ್ಟದ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಪ್ರಾಧಿಕಾರ ಅವಶ್ಯಕತೆ ಇದೆ. ಬೆಟ್ಟಕ್ಕೆ ಪೋಲಿಸ್ ಠಾಣೆ ಹಾಗೂ ಆಸ್ಪತ್ರೆ ಬೇಕು. ಇದೆಲ್ಲಾ ಆಗಲು ಒಂದು ಪ್ರಾಧಿಕಾರ ಬೇಕು” ಎಂದು ಅವರು ಹೇಳಿದರು.