Homeಕರ್ನಾಟಕಬರ ಪರಿಸ್ಥಿತಿ ಎದುರಿಸಲು ಸರ್ಕಾರ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದೆ: ಡಿಸಿಎಂ ಪರಮೇಶ್ವರ್ 

ಬರ ಪರಿಸ್ಥಿತಿ ಎದುರಿಸಲು ಸರ್ಕಾರ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದೆ: ಡಿಸಿಎಂ ಪರಮೇಶ್ವರ್ 

ರಾಜ್ಯದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರಿನಲ್ಲಿ ನಿರ್ಮಾಣವಾಗಬೇಕು ಎಂಬ ಇಚ್ಛೆಯನ್ನು ನಾನು ಮೊದಲಿನಿಂದಲೂ ಹೇಳಿದ್ದೇನೆ ಎಂದು ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ ಗೃಹ ಕಚೇರಿ ಬಳಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, 2ನೇ ವಿಮಾನ‌ನಿಲ್ದಾಣ ತುಮಕೂರಿನಲ್ಲಿ ಆಗಬೇಕೆಂದು ಬಿ.ವೈ.ವಿಜಯೇಂದ್ರ ಅವರು ತಮಗೆ ತಿಳಿದ ರೀತಿಯಲ್ಲಿ ಹೇಳಿದ್ದಾರೆ. 2ನೇ ವಿಮಾನ ನಿಲ್ದಾಣ ತುಮಕೂರಿಗೆ ಆಗಬೇಕು ಎಂಬ ಇಚ್ಛೆಯನ್ನು ನಾನು ಮೊದಲಿನಿಂದಲೂ ಹೇಳಿದ್ದೇನೆ. ತಾಂತ್ರಿಕ ಸಮಿತಿಯು ನೆಲಮಂಗಲದ ಕುಣಿಗಲ್ ರಸ್ತೆ ಹಾಗೂ ಬಿಡದಿ ಪ್ರದೇಶಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದ್ದು, ಡಿಜಿಸಿಎ ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ತುಮಕೂರಿನಲ್ಲಿ ವಿಮಾನ ನಿಲ್ದಾಣವಾದರೆ ಸುಮಾರು 20 ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದ್ದು, ತಾಂತ್ರಿಕವಾಗಿಯೂ ಸೂಕ್ತ ಸ್ಥಳವಾಗಿದೆ ಎಂದು ಅಭಿಪ್ರಾಯಪಟ್ಟರು.

ಬಿಡದಿ ಟೌನ್‌ಶಿಪ್ ವಿರೋಧಿಸಿ ಪಾದಯಾತ್ರೆ ಕೈಗೊಳ್ಳುತ್ತಿರುವ ಕುರಿತು‌ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ಅಭಿವೃದ್ಧಿಯ ದೃಷ್ಟಿಯಿಂದ ಯೋಜನೆಯನ್ನು ಕೈಗೆತ್ತಿಕೊಂಡಿದ್ದು, ಭೂಸ್ವಾಧೀನದ ವಿಚಾರದಲ್ಲಿ ಯಾರ ಮೇಲೂ ಒತ್ತಾಯ ಮಾಡುವುದಿಲ್ಲ; ಮನವೊಲಿಸುವ ಪ್ರಯತ್ನ ನಡೆಸಲಾಗುವುದು ಎಂದು ಮುಖ್ಯಮಂತ್ರಿಯವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಈ ವಿಷಯವನ್ನು ರಾಜಕೀಯ ದೃಷ್ಟಿಯಿಂದ ನೋಡದೆ, ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಪರಿಗಣಿಸಬೇಕು ಎಂದು ಹೇಳಿದರು.

ಗ್ರಾಮೀಣಾಭಿವೃದ್ಧಿ ಇಲಾಖೆಯ ಇ-ಸ್ವತ್ತು ವಿತರಣೆಯನ್ನು ವೇಗಗೊಳಿಸಲು ಕಂದಾಯ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಹಲವು ವರ್ಷಗಳಿಂದ ಬಾಕಿ ಉಳಿದಿರುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿನ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರೊಂದಿಗೆ ಬೆಳಗಾವಿ ಕಂದಾಯ ವಿಭಾಗ, ಕಲಬುರ್ಗಿ ಕಂದಾಯ ವಿಭಾಗ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಬರ ಪರಿಸ್ಥಿತಿಯನ್ನು ಎದುರಿಸಲು ಮುಂದೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ನಾಳೆ ವಿಡಿಯೊ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಗುವುದು ಎಂದರು.

ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ₹5 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಒಟ್ಟು ₹329 ಕೋಟಿ ಲಭ್ಯವಿದೆ. ಇದಲ್ಲದೆ ಜಿಲ್ಲಾಧಿಕಾರಿಗಳ ಪಿಡಿ ಖಾತೆಗಳಲ್ಲಿ ಸುಮಾರು ₹600 ಕೋಟಿ ಲಭ್ಯವಿದ್ದು, ಅಗತ್ಯ ಸಂದರ್ಭಗಳಲ್ಲಿ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಸರ್ಕಾರ ಪತ್ರ ಬರೆಯಲು ಸೀಮಿತವಾಗಿದೆ ಎಂಬ ವಿಪಕ್ಷದವರ ಆರೋಪದ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗಬಾರದು ಎಂಬ ನಿಟ್ಟಿನಲ್ಲಿ ಹಣ ಬಿಡುಗಡೆ ಮಾಡಿದ್ದೇವೆ. ಇದನ್ನು ಎಲ್ಲಾ ಡಿಸಿ, ಜಿಲ್ಲಾ ಪಂಚಾಯತ್ ಸಿಇಒಗಳು ಪರಿಶೀಲನೆ ನಡೆಸುತ್ತಾರೆ ಎಂದು ತಿಳಿಸಿದರು.

ಬರ ಪರಿಸ್ಥಿತಿಯಲ್ಲಿ ನಿಯಮಗಳನ್ನು ಸಡಿಲಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಬರಪೀಡಿತ ಎಂದು ಘೋಷಣೆ ಮಾಡಲು ಕೇಂದ್ರ ಸರ್ಕಾರ ಕೆಲವು ನಿಯಮಗಳನ್ನು ಮಾಡಿದೆ. ಅದನ್ನು ಸಡಿಲಿಕೆ ಮಾಡುವಂತೆ ಪತ್ರ ಬರೆದಿದ್ದೇನೆ. ರಾಜ್ಯಕ್ಕೆ ಶೀಘ್ರ ಹಣ ಕೊಡಿಸಲಿ. ಕರ್ನಾಟಕ ಮಾತ್ರವಲ್ಲದೇ, ಇಡೀ ದೇಶದಲ್ಲಿ ಬರ ಪರಿಸ್ಥಿತಿ ಇದೆ. ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಪತ್ರ ಬರೆದಿದ್ದೇನೆ. ನಾವು ಸುಮ್ಮನೆ ಕುಳಿತುಕೊಂಡು ಕಾಲಕಳೆಯುತ್ತಿಲ್ಲ. ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು‌.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments